ಸರ್ಕಾರಿ ವಿಜ್ಞಾನ ಕಾಲೇಜುಗಳಲ್ಲಿ ಐಐಟಿ , ಜೆಇಇ ಮತ್ತು ನೀಟ್ ಪರೀಕ್ಷೆಗಳಿಗೆ ವಿದ್ಯಾರ್ಥಿಗಳಿಗೆ ಸೂಕ್ತವಾಗಿ
ತರಬೇತಿ, ಬೋಧನೆ ಮಾಡಬೇಕು. ಆ ಮೂಲಕ ಬಡ ವಿದ್ಯಾರ್ಥಿಗಳು ಎಂಜಿನಿಯರಿಂಗ್ ಮತ್ತು ಮೆಡಿಕಲ್ ಸೀಟು ಪಡೆಯಲು ಸರ್ಕಾರ ನೆರವಾಗಬೇಕು ಎಂದು ಒತ್ತಾಯಿಸಿ ದಾವಣಗೆರೆಯ ಕರುನಾಡ ಸಮರಸೇನೆಯ ನೇತೃತ್ವದಲ್ಲಿ ಮುಖಂಡರು, ಕಾರ್ಯಕರ್ತರು ಹಾಗೂ ವಿದ್ಯಾರ್ಥಿಗಳು ಸಂವಿಧಾನ ಶಿಲ್ಪಿ ಡಾ ಬಿಆರ್ ಅಂಬೇಡ್ಕರ್ ವೃತ್ತದಿಂದ ಎಸಿ ಕಛೇರಿವರೆಗೆ ಜಾಥಾ ಮೂಲಕ ಬೃಹತ್ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಮುಖಂಡರು “ಸರ್ಕಾರಿ ಕಾಲೇಜುಗಳಲ್ಲಿ ಬಡ, ದಲಿತ, ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳೇ ಹೆಚ್ಚಾಗಿ ಕಲಿಯಲು ಬರುತ್ತಾರೆ. ಖಾಸಗಿ ತರಬೇತಿ ಕೇಂದ್ರಗಳಲ್ಲಿ ಮತ್ತು ಖಾಸಗಿ ಕಾಲೇಜುಗಳಲ್ಲಿ ನೀಡಿದಂತೆ ಸರ್ಕಾರಿ ಕಾಲೇಜುಗಳಲ್ಲಿ ಪೂರ್ವಭಾವಿಯಾಗಿ ಐಐಟಿ ಮತ್ತು ನೀಟ್ ಪರೀಕ್ಷೆಗಳಿಗೆ ನೀಡುವಂತೆ ಉತ್ತಮ ತರಬೇತಿ ನೀಡುತ್ತಿಲ್ಲ. ಇದರಿಂದಾಗಿ ಬಡ ವಿದ್ಯಾರ್ಥಿಗಳು ಎಂಜಿನಿಯರಿಂಗ್ ಮತ್ತು ಮೆಡಿಕಲ್ ಸೀಟು ಪಡೆಯಲು ಸಾಧ್ಯವಾಗುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಬಡವರ ಮಕ್ಕಳು ಕೂಡ ಡಾಕ್ಟರ್ ಮತ್ತು ಇಂಜಿನಿಯರ್ ಆಗಬೇಕು. ಉತ್ತಮ ಶಿಕ್ಷಣ, ತರಬೇತಿ ದೊರೆತಲ್ಲಿ ಹಿಂದುಳಿದ ವರ್ಗಗಳ ಮಕ್ಕಳು ಕೂಡ ಉತ್ತಮ ಸಾಧನೆ ಮಾಡುತ್ತಾರೆ. ಹಾಗಾಗಿ ಸರ್ಕಾರದ ಶಿಕ್ಷಣ ಸಂಸ್ಥೆಗಳಲ್ಲಿ, ವಿಜ್ಞಾನ ಪಿಯು ಕಾಲೇಜುಗಳಲ್ಲಿ ನೀಟ್, ಸಿಇಟಿ, ಜೆಇಇ ಪರೀಕ್ಷೆಗಳಿಗೆ ಪರಿಣಾಮಕಾರಿಯಾಗಿ ತರಬೇತಿ ನೀಡಬೇಕು” ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ದಲಿತರ ಅಡಮಾನ ಭೂಮಿ ಕಬಳಿಕೆ ಆರೋಪ: ಕ್ರಮಕ್ಕೆ ದಸಂಸ ಒತ್ತಾಯ
ಈ ವೇಳೆ ಕರುನಾಡ ಸಮರ ಸೇನೆಯ ಸಂಸ್ಥಾಪಕ ಅಧ್ಯಕ್ಷ ಐಗೂರು ಸುರೇಶ್, ಜಿಲ್ಲಾಧ್ಯಕ್ಷ ರಮೇಶ್ ಬೇಳೂರು,
ಮಹಿಳಾ ಅಧ್ಯಕ್ಷೆ ನಾಗವೇಣಿ, ವರ್ತಕರ ಘಟಕದ ಅಧ್ಯಕ್ಷ ಕಿರಣ್ ಬಾಳೆಹೊಲದ, ಕಟ್ಟಡ ಕಾರ್ಮಿಕ ಘಟಕ ಅಧ್ಯಕ್ಷ ಶ್ರೀನಿವಾಸ್, ಯುವಘಟಕ ಅಧ್ಯಕ್ಷ ಲಿಂಗರಾಜ್, ವಿಧ್ಯಾರ್ಥಿ ಘಟಕದ ಅಧ್ಯಕ್ಷ ಶಿವಕುಮಾರ್, ವಿಧ್ಯಾರ್ಥಿನಿಯರ ಘಟಕದ ಅಧ್ಯಕ್ಷೆ ಸುಮ, ಮುಖಂಡರಾದ ವಿನಾಯಕ್. ನಿಟೇಶ್. ಕುಕ್ಕುವಾಡ ತಿಪ್ಪೇಶ್ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು.





