ಎರಡು ದಿನಗಳ ಹಿಂದೆ, ಹೊಸಕೋಟೆ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಏಳು ಮಂದಿ ವಿದ್ಯಾರ್ಥಿಗಳು ದಾರುಣವಾಗಿ ಮೃತಪಟ್ಟ ಘಟನೆ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ.
ನೆಲಮಂಗಲ ಬಳಿಯ ಮೇಲುರಸ್ತೆ (ಫ್ಲೈಓವರ್)ನಲ್ಲಿ ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಐವರು ಯುವಕರು ಮೃತಪಟ್ಟಿದ್ದಾರೆ.
ಮೃತರನ್ನು ದೊಡ್ಡಬಳ್ಳಾಪುರದ ಹರ್ಷಿತ್, ನಿಖಿತ್ ಹಾಗೂ ಅವರ ಸ್ನೇಹಿತರು ಎಂದು ಗುರುತಿಸಲಾಗಿದೆ.
ತುಮಕೂರು ಕಡೆಯಿಂದ ಬರುತ್ತಿದ್ದ ಕಾರು ಡಿವೈಡರ್ ಜಂಪ್ ಮಾಡಿ ಬೆಂಗಳೂರು ಕಡೆಯಿಂದ ಹೊರಟಿದ್ದ ಕೆ ಎಸ್ ಆರ್ ಟಿ ಸಿ ಬಸ್ಗೆ ಡಿಕ್ಕಿಯಾಗಿದೆ. ಕಾರಿನಲ್ಲಿದ್ದವರು ಮೃತಪಟ್ಟಿದ್ದಾರೆ. ಬಸ್ನಲ್ಲಿ ಸುಮಾರು 45 ಮಂದಿ ಪ್ರಯಾಣಿಕರಿದ್ದರು. ಅವರಾರಿಗೂ ಅಪಾಯವಾಗಿಲ್ಲ ಎಂದು ತಿಳಿದುಬಂದಿದೆ.




