ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ನಿರಂತರವಾಗಿ ಕಾಡುತ್ತಲೇ ಇದೆ. ಕಸ ನಿರ್ವಹಣೆ ಮತ್ತು ವಿಲೇವಾರಿಗಾಗಿ ಸರ್ಕಾರ ಮತ್ತು ಜಿಬಿಎ (ಹಿಂದಿನ ಬಿಬಿಎಂಪಿ) ನಾನಾ ನೀತಿ-ನಿಮಯಗಳನ್ನು ರೂಪಿಸುತ್ತಲೇ ಇವೆ. ಇದೀಗ, ನಗರದಲ್ಲಿ ಮೂರು ಮಹಿಡಿಗಳಿಗಿಂತ ಹೆಚ್ಚು ಮಹಡಿಗಳನ್ನು ಹೊಂದಿರುವ ಕಟ್ಟಡಗಳಲ್ಲಿ ಹಸಿ ಮತ್ತು ಒಣ ಕಸವನ್ನು ಸಂಗ್ರಹಿಸಲು ಪ್ರತ್ಯೇಕ ಬಿನ್ಗಳನ್ನು ಕಡ್ಡಾಯವಾಗಿ ಅಳವಡಿಸಬೇಕು ಎಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ಸೂಚನೆ ನೀಡಿದೆ.
ಮಂಗಳವಾರ ನಡೆದ ಸಾರ್ವಜನಿಕ ಸಂಪರ್ಕ ಸಭೆಯಲ್ಲಿ ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಈ ಸೂಚನೆ ನೀಡಿದ್ದಾರೆ. “ಕಡ್ಡಾಯವಾಗಿ ಪ್ರತ್ಯೇಕ ಕಸದ ಬುಟ್ಟಿಗಳನ್ನು ಸ್ಥಾಪಿಸಬೇಕು. ತ್ಯಾಜ್ಯ ನಿರ್ವಹಣೆಯನ್ನು ಪರಿಣಾಮಕಾರಿಯಾಗಿ ನಡೆಸಲು ಈ ಕ್ರಮ ಕೈಗೊಳ್ಳಲಾಗಿದೆ” ಎಂದು ಹೇಳಿದ್ದಾರೆ.
“ರಸ್ತೆ ಬದಿಗಳಲ್ಲಿ, ಖಾಲಿ ಸ್ಥಳಗಳಲ್ಲಿ ತ್ಯಾಜ್ಯವನ್ನು ಸುರಿಯಲಾಗುತ್ತಿದೆ. ಮನೆ-ಮನೆಗೆ ತ್ಯಾಜ್ಯ ಸಂಗ್ರಹಣೆಯಲ್ಲಿನ ಅಕ್ರಮಗಳ ಬಗ್ಗೆ ನಾಗರಿಕರ ದೂರುಗಳಿವೆ. ಸಮಸ್ಯೆಯಿರುವ ಪ್ರದೇಶಗಳನ್ನು ಗುರುತಿಸಿ ತ್ಯಾಜ್ಯ ನಿರ್ವಹಣಾ ಸಮಸ್ಯೆಗಳನ್ನು ವ್ಯವಸ್ಥಿತವಾಗಿ ಪರಿಹರಿಸಲಾಗುತ್ತದೆ” ಎಂದು ಹೇಳಿದ್ದಾರೆ.
“ರಸ್ತೆ ವಿಸ್ತರಣೆಗಾಗಿ ಕಾಯ್ದಿರಿಸಿದ ಆಸ್ತಿಗಳನ್ನು ಬಿಇಸಿಸಿ ಸ್ವಾಧೀನಕ್ಕೆ ಪಡೆಯಬೇಕು. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಅಗತ್ಯ ಕ್ರಮ ಕೈಗೊಳ್ಳಬೇಕು. ಕೆಆರ್ ಪುರಂ ವಿಧಾನಸಭಾ ಕ್ಷೇತ್ರದಲ್ಲಿನ ಪ್ರಮುಖ ರಸ್ತೆಗಳು ಮತ್ತು ಪಾದಚಾರಿ ಮಾರ್ಗಗಳನ್ನು ಪರಿಶೀಲಿಸಿ ದುರಸ್ತಿ ಮತ್ತು ಹೊಸ ಪಾದಚಾರಿ ಮಾರ್ಗಗಳ ನಿರ್ಮಾಣದ ಅಗತ್ಯವಿರುವ ರಸ್ತೆಗಳನ್ನು ಅಧಿಕಾರಿಗಳು ಪಟ್ಟಿ ಮಾಡಬೇಕು” ಎಂದು ತಿಳಿಸಿದ್ದಾರೆ.




