ದುರ್ಘಟನೆಗೆ ಪೊಲೀಸ್ ವೈಫಲ್ಯ ಮಾತ್ರವಲ್ಲ, ಸಂಭ್ರಮಾಚರಣೆ ಕಾರ್ಯಕ್ರಮ ನಡೆಸುವಲ್ಲಿ ರಾಜ್ಯ ಸರ್ಕಾರದ ಅತಿ ಉತ್ಸಾಹ, ಒತ್ತಡ ಹಾಗೂ ಕ್ರಿಕೆಟ್ ಅಸೋಸಿಯೇಷನ್ನ ಆತುರವೂ ಕಾರಣ
ಐಪಿಎಲ್ ಗೆದ್ದ ಆರ್ಬಿಸಿ ತಂಡದ ಸಂಭ್ರಮೋತ್ಸವದ ವೇಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಉಂಟಾದ ಕಾಲ್ತುಳಿತ ಮತ್ತು 11 ಮಂದಿ ಸಾವು ಪ್ರಕರಣದಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಅವರನ್ನು ಅಮಾನತು ಮಾಡಲಾಗಿದೆ. ಎಡಿಜಿಪಿ ದರ್ಜೆಯ ಪೊಲೀಸ್ ಅಧಿಕಾರಿಯನ್ನು ಅಮಾನತು ಮಾಡಿರುವುದು ಕರ್ನಾಟಕದ ಪೊಲೀಸ್ ಇತಿಹಾಸದಲ್ಲಿ ಇದೇ ಮೊದಲು ಎಂದು ಹೇಳಲಾಗಿದೆ.
ಕಾಲ್ತುಳಿತ, ಗದ್ದಲ, ಸಾವು ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಗುರುವಾರ ಸಂಜೆ ಸುದ್ದಿಗೋಷ್ಠಿ ನಡೆಸಿ ದಯಾನಂದ್ ಸೇರಿದಂತೆ ಐವರು ಅಧಿಕಾರಿಗಳನ್ನು ಅಮಾನತು ಮಾಡಿರುವುದಾಗಿ ತಿಳಿಸಿದ್ದಾರೆ. ಆದಾಗ್ಯೂ, ಬುಧವಾರ ನಡೆದ ದುರ್ಘಟನೆಗೆ ಪೊಲೀಸ್ ವೈಫಲ್ಯ ಮಾತ್ರವಲ್ಲ, ಸಂಭ್ರಮಾಚರಣೆ ಕಾರ್ಯಕ್ರಮ ನಡೆಸುವಲ್ಲಿ ರಾಜ್ಯ ಸರ್ಕಾರದ ಅತಿ ಉತ್ಸಾಹ, ಒತ್ತಡ ಹಾಗೂ ಕ್ರಿಕೆಟ್ ಅಸೋಸಿಯೇಷನ್ನ ಆತುರವೂ ಕಾರಣವೆಂದು ಹೇಳಲಾಗಿದೆ. ಹೀಗಾಗಿ, ಕೇವಲ ಪೊಲೀಸ್ ಅಧಿಕಾರಿಗಳ ತಲೆದಂಡ ಸಲ್ಲ ಎಂಬ ಅಭಿಪ್ರಾಯಗಳು ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿವೆ.
ಬಿ ದಯಾನಂದ್ ಅವರು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಆಗಿದ್ದರು. ಈ ಹುದ್ದೆಯು ಕರ್ನಾಟಕ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ದರ್ಜೆಯ ಹುದ್ದೆಯಾಗಿದೆ. ಮುಂದಿನ ದಿನಗಳಲ್ಲಿ ಬಡ್ತಿ ಪಡೆದಿದ್ದರೆ, ದಯಾನಂದ್ ಅವರು ಡಿಜಿ-ಐಜಿಪಿ ಹುದ್ದೆಯನ್ನು ಪಡೆಯುತ್ತಿದ್ದರು ಎಂದು ಹೇಳಲಾಗಿದೆ.
ದಯಾನಂದ್ ಅವರು ಮಾತ್ರವಲ್ಲದೆ, ಹೆಚ್ಚುವರಿ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಹೆಚ್.ಟಿ ಶೇಖರ್, ಎಸಿಪಿ ಬಾಲಕೃಷ್ಣ ಹಾಗೂ ಕಬ್ಬನ್ಪಾರ್ಕ್ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಗಿರೀಶ್ ಎ.ಕೆ ಅವರನ್ನೂ ಅಮಾನತು ಮಾಡಲಾಗಿದೆ.
ದಯಾನಂದ್ ಅವರಿಂದ ತೆರವಾದ ಹುದ್ದೆಗೆ ಎಡಿಜಿಪಿಯಾಗಿ ಸೇವೆ ಸಲ್ಲಿಸುತ್ತಿದ್ದ ಸೀಮಂತ್ ಕುಮಾರ್ ಸಿಂಗ್ ಅವರನ್ನು ನೇಮಕ ಮಾಡಲಾಗಿದೆ.
ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಿರುವ ಕುರಿತು ಆಕ್ಷೇಪ ವ್ಯಕ್ತಪಡಿಸಿರುವ ವಿಪಕ್ಷ ನಾಯಕ ಆರ್ ಅಶೋಕ್, “ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ರಾಜ್ಯದ ಜನತೆ ನ್ಯಾಯ ಕೇಳುತ್ತಿದ್ದಾರೆ. ಹರಕೆಯ ಕುರಿಗಳನ್ನಲ್ಲ” ಎಂದು ಕಿಡಿಕಾರಿದ್ದಾರೆ.




