ಇಂದಿನ ಶಿಕ್ಷಣ ಪದ್ಧತಿಯಲ್ಲಿ ಅನ್ಯಾಯ ಮತ್ತು ತಾರತಮ್ಯಗಳು ಅಡಗಿವೆ. ಇದೀಗ, ಮಕ್ಕಳಿಗೆ ಶಿಕ್ಷಣ ನೀಡುವ ನೈತಿಕತೆಯೇ ನಮಗೆ ಇಲ್ಲದಂತಾಗಿದೆ. ಹೀಗಿರುವಾಗ ಅವರಿಗೆ ಯಾವ ರೀತಿಯ ನೀತಿ ಶಿಕ್ಷಣ ನೀಡಲು ಸಾಧ್ಯ. ಆ ಅರ್ಹತೆಯನ್ನೇ ನಾವು ಕಳೆದುಕೊಂಡಿದ್ದೇವೆ ಎಂದು ಹಿರಿಯ ಲೇಖಕ ಕೋಟಿಗಾನಹಳ್ಳಿ ರಾಮಯ್ಯ ವಿಷಾದಿಸಿದರು.
ಬಹುರೂಪಿ ಪ್ರಕಾಶನ ಬೆಂಗಳೂರಿನ ಚಿತ್ರಕಲಾ ಪರಿಷತ್ನಲ್ಲಿ ಪರಾಗ್, ಪರಿ, ಕರಡಿ ಟೇಲ್ಸ್, ಕಲ್ಪವೃಕ್ಷ, ಏಕತಾರದ ಸಹಯೋಗದಲ್ಲಿ ಮಕ್ಕಳ 10 ಕೃತಿಗಳ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಂಡಿತ್ತು.
10 ಮಕ್ಕಳ ಪುಸ್ತಕಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅವರು, “ನಮ್ಮ ದೇಶದಲ್ಲಿ ಪಠ್ಯ ಪುಸ್ತಕಗಳು, ಕಥೆ ಪುಸ್ತಕಗಳ ಮೂಲಕ ಬಹು ಹಿಂದಿನಿಂದಲೂ ಮೈಕ್ರೋ ಫ್ಯಾಸಿಸಂ ಅನ್ನು ಬಿತ್ತಲಾಗುತ್ತಿದೆ. ಆದನ್ನು ಇಂದಿಗೂ ಮುಂದುವರಿಸಿಕೊಂಡು ಹೋಗಲಾಗುತ್ತಿದೆ” ಎಂದು ವಿಷಾದ ವ್ಯಕ್ತಪಡಿಸಿದರು.
“ಮಕ್ಕಳು ಏನು ಓದಬೇಕು, ಏನನ್ನು ಓದಬಾರದು ಎಂಬುದನ್ನು ತೀರ್ಮಾನಿಸುವವರು ಯಾರು? ಇಂಥ ತೀರ್ಮಾನ ಕೈಗೊಳ್ಳಲು ನಮಗೆ ಅರ್ಹತೆ ಇದೆಯೇ? ಈ ಬಗ್ಗೆ ಮಕ್ಕಳಿಂದ ಅಭಿಪ್ರಾಯಗಳನ್ನು ಪಡೆಯಲಾಗಿದೆಯೇ ಎಂಬ ಸಂಕೀರ್ಣ ಪ್ರಶ್ನೆಗಳಿಗೆ ತ್ವರಿತವಾಗಿ ಉತ್ತರ ಕಂಡುಕೊಳ್ಳುವ ಅನಿವಾರ್ಯತೆ ಇದೆ” ಎಂದು ತಿಳಿಸಿದರು.
ಖ್ಯಾತ ಗಾಯಕಿ ಎಂ ಡಿ ಪಲ್ಲವಿ ಅವರು ಮಾತನಾಡಿ, “ಮಕ್ಕಳ ಎಳೆ ಮನಸ್ಸಿನಲ್ಲಿ ಜಾತಿ, ಬಡವ, ಶ್ರೀಮಂತ ಇತ್ಯಾದಿ ಭೇದಭಾವಗಳು ಯಾವುದೂ ಇರುವುದಿಲ್ಲ. ಆದರೆ, ಮಕ್ಕಳನ್ನು ಬೆಳೆಸುವ ಹಾದಿಯಲ್ಲಿ ಈ ರೀತಿಯ ತಾರತಮ್ಯ ಮೂಡಿಸುತ್ತಿದ್ದೇವೆ. ಅವರ ಮನಸ್ಸನ್ನು ಸಂಕೀರ್ಣಗೊಳಿಸುವ ಬದಲು ಹಿಗ್ಗಿಸಲು ಪ್ರಯತ್ನಿಸಿದಾಗ ಉತ್ತಮ ಹಾಗೂ ಸೌಹಾರ್ದಯುತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ” ಎಂದು ತಿಳಿಸಿದರು.
“ಕನ್ನಡ ಭಾಷೆಯಲ್ಲಿ ಮಕ್ಕಳ ಪುಸ್ತಕಗಳು ತುಂಬಾ ಕಡಿಮೆ ಇವೆ. ಈ ವಿಷಯದಲ್ಲಿ ಸಾಕಷ್ಟು ಕೆಲಸಗಳು ಆಗಬೇಕಿದೆ. ಹಾಗಾಗಿ, ಬರವಣಿಗೆ ಕ್ಷೇತ್ರದಲ್ಲಿ ಹೆಚ್ಚಿನ ಕೊಡುಗೆ ನೀಡುವ ಆಸೆ ಇದೆ” ಎಂದು ಹೇಳಿದರು.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರಸ್ತೆ ಮಧ್ಯೆ ನಿಂತ ಹೆಲಿಕಾಪ್ಟರ್: ಮತ್ತಷ್ಟು ಹೆಚ್ಚಾದ ಸಂಚಾರ ದಟ್ಟಣೆ
“ಮಕ್ಕಳ ಪುಸ್ತಕಗಳನ್ನು ಹೇಗೋ ರೂಪಿಸಬಹುದು. ಆದರೆ, ಅವುಗಳನ್ನು ಮಕ್ಕಳಿಗೆ ತಲುಪಿಸುವ ನಿಟ್ಟಿನಲ್ಲಿ ಹಲವಾರು ಅಡೆತಡೆಗಳು ಸೃಷ್ಟಿಯಾಗಿವೆ. ಒಂದೆಡೆ ಶಾಲೆಗಳೇ ಕಣ್ಮರೆಯಾಗುತ್ತಿದ್ದರೆ, ಇನ್ನೊಂದೆಡೆ ಕನ್ನಡ ಮಕ್ಕಳೇ ಕಣ್ಮರೆಯಾಗುತ್ತಿದ್ದಾರೆ” ಎಂದು ವಿಜ್ಞಾನ ಬರಹಗಾರರಾದ ನಾಗೇಶ ಹೆಗಡೆ ಹೇಳಿದರು.
“ಮಕ್ಕಳ ಪುಸ್ತಕಗಳನ್ನು ಮಕ್ಕಳಿಗೆ ತಲುಪಿಸುವ ನಿಟ್ಟಿನಲ್ಲಿ ಪುಸ್ತಕ ಪ್ರಾಧಿಕಾರ, ಭಾಷಾ ಪ್ರಾಧಿಕಾರ ಸೇರಿದಂತೆ ಸರ್ಕಾರದ ಸಂಸ್ಥೆಗಳು ಕೆಲಸ ಮಾಡಬೇಕಿತ್ತು. ಆದರೆ, ಈ ವಿಷಯದಲ್ಲಿ ಅವೆಲ್ಲವೂ ವಿಫಲವಾಗಿವೆ” ಎಂದರು.
ಬಹುರೂಪಿಯ ಜಿ ಎನ್ ಮೋಹನ್, ಶ್ರೀಜಾ ವಿ ಎನ್, ಪರಾಗ್ ನ ಲಕ್ಷ್ಮಿ ಕರುಣಾಕರನ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಬಿಡುಗಡೆಯಾದ ಕೃತಿಗಳು
ಈ ಪಿಕ್ ಯಾರ ಕ್ಲಿಕ್ ಬೆಲೆ: ₹160
ಸೀರೆ ಉಡುವ ರಾಕ್ ಸ್ಟಾರ್ ಬೆಲೆ: ₹160
ಲೇಡಿ ಟಾರ್ಜಾನ್ ಬೆಲೆ: ₹120
ಮರ ಏರಲಾಗದ ಗುಮ್ಮ ಬೆಲೆ: ₹160
ಸುಂದರಬಾಗ್ ಬೀದಿಯಲ್ಲಿ ನಡೆಯಿತೊಂದು ವಿಸ್ಮಯ ಬೆಲೆ: ₹140
ಮರಳಿ ಮನೆಗೆ ಬೆಲೆ: ₹125
ಟಿಕೆಟ್ ಇಲ್ಲ, ಪ್ರಯಾಣ ನಿಲ್ಲಲ್ಲ ಬೆಲೆ: ₹125
ಸ್ನೇಹಗ್ರಾಮದ ಸಂಸತ್ತು ಬೆಲೆ: ₹150
ನಂದಿನಿ ಎಂಬ ಜಾಣೆ ಬೆಲೆ: ₹150
ಗೆದ್ದೇ ಬಿಟ್ಟೆ! ಬೆಲೆ: ₹125




