ಮಳೆ ನೀರನ್ನು ತೆರವುಗೊಳಿಸುವ ಸಂದರ್ಭದಲ್ಲಿ ಇಬ್ಬರು ವಿದ್ಯುತ್ ಆಘಾತವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಆಗ್ನೇಯದಲ್ಲಿರುವ ಅಪಾರ್ಟ್ಮೆಂಟ್ ಸಂಕೀರ್ಣದಲ್ಲಿ ನಡೆದಿದೆ. ಈ ಮೂಲಕ ಬೆಂಗಳೂರಿನಲ್ಲಿ ಮಳೆಯಿಂದಾಗಿ ಸಾವನ್ನಪ್ಪಿದವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ.
ಮೃತರನ್ನು ಮನಮೋಹನ್ ಕಾಮತ್ (63) ಮತ್ತು ದಿನೇಶ್ (12) ಎಂದು ಗುರುತಿಸಲಾಗಿದೆ. ಬಿಟಿಎಂ 2ನೇ ಹಂತದ ಬಳಿಯ ಎನ್ಎಸ್ ಪಾಳ್ಯದ ಮಧುವನ್ ಅಪಾರ್ಟ್ಮೆಂಟ್ ನಿವಾಸಿ ಕಾಮತ್ ಅವರು ಸಂಜೆ 6.15ರ ಸುಮಾರಿಗೆ ಮಳೆಯಿಂದಾಗಿ ನೆಲಮಾಳಿಗೆಯಲ್ಲಿ ಸಂಗ್ರಹವಾದ ನೀರನ್ನು ತೆರವುಗೊಳಿಸುತ್ತಿದ್ದಾಗ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ.
ಇದನ್ನು ಓದಿದ್ದೀರಾ? ಭಾರೀ ಮಳೆ; ರೆಡ್ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ
“ಅವರು ಮೋಟಾರ್ ತಂದು ನೀರನ್ನು ಪಂಪ್ ಮಾಡಲು ಪ್ರಯತ್ನಿಸಿದಾಗ, ಶಾರ್ಟ್ ಸರ್ಕ್ಯೂಟ್ ಉಂಟಾಗಿ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದಾರೆ” ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಈ ಸಂದರ್ಭದಲ್ಲೇ ಅಪಾರ್ಟ್ಮೆಂಟ್ ಸಂಕೀರ್ಣದಲ್ಲಿ ಕೆಲಸ ಮಾಡುತ್ತಿದ್ದ ನೇಪಾಳದ ವ್ಯಕ್ತಿಯ ಪುತ್ರ ದಿನೇಶ್ ಕೂಡಾ ಮೃತಪಟ್ಟಿದ್ದಾನೆ. ಆಟವಾಡುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.
ಕೆಲವು ನಿವಾಸಿಗಳು ಮೋಟಾರ್ ಸಂಪರ್ಕವನ್ನು ಕಡಿತಗೊಳಿಸಿ ಇಬ್ಬರನ್ನೂ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ವೈದ್ಯರು ಇಬ್ಬರು ಮೃತಪಟ್ಟಿರುವುದಾಗಿ ಘೋಷಿಸಿದರು. ಸದ್ಯ ಅಸ್ವಾಭಾವಿಕ ಸಾವು ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಈ ಹಿಂದೆ ಸೋಮವಾರ ಮಹದೇವಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾರೀ ಮಳೆಯಿಂದಾಗಿ ಕಂಪೌಂಡ್ ಗೋಡೆ ಕುಸಿದು ಶಶಿಕಲಾ(35) ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಸದ್ಯ ಬೆಂಗಳೂರಿನಲ್ಲಿ ಮಳೆಗೆ ಒಟ್ಟು ಮೂವರು ಬಲಿಯಾಗಿದ್ದಾರೆ.





