ಚಿತ್ರದುರ್ಗ ಜಿಲ್ಲೆಯಲ್ಲಿ ಉಂಟಾಗಿರುವ ಮಳೆ ಕೊರತೆಯಿಂದ ಬರ ಆವರಿಸಿದೆ. ಮಳೆ ಆಶ್ರಿತ ಬೆಳೆಗಳು ಶೇ.80ರಿಂದ 100ರಷ್ಟು ಹಾನಿಯಾಗಿದ್ದು, ಬೆಳೆ ವಿಮೆ ಕಂಪನಿಗಳು ಶೇ.25ರಷ್ಟು ತುರ್ತು ಮಧ್ಯಂತರ ಪರಿಹಾರವನ್ನು ನೀಡುಬೇಕೆಂದು, ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ಜಿಲ್ಲಾಧಿಕಾರಿ ದಿವ್ಯಪ್ರಭು .ಜಿ.ಆರ್.ಜೆ ತಿಳಿಸಿದ್ದಾರೆ.
ಚಿತ್ರದುರ್ಗ ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು, ಕೃಷಿ ವಿಜ್ಞಾನಿಗಳು, ಹವಾಮಾನ ತಜ್ಞರು, ವಿಮಾ ಕಂಪನಿ ಪ್ರತಿನಿಧಿಗಳು ಹಾಗೂ ಜಿಲ್ಲೆಯ ರೈತ ಮುಖಂಡರೊಂದಿಗೆ ಜಿಲ್ಲಾಧಿಕಾರಿಯವರು ಸಭೆ ನಡೆಸಿ ಮಾತನಾಡಿದರು.
ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಸಂಪೂರ್ಣ ಮಳೆ ಕೊರತೆ ಉಂಟಾಗಿದೆ. ರಾಜ್ಯ ಸರ್ಕಾರ ಬರ ಘೋಷಣೆಗೆ ತೀರ್ಮಾನ ಮಾಡಿದೆ. ಕೃಷಿ ಸಚಿವರು ಮಳೆ ಕೊರತೆಯಿಂದ ಬೆಳೆ ಹಾನಿ ಉಂಟಾದ ಜಿಲ್ಲೆಯ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಪ್ರಮುಖ ಬೆಳೆಗಾಳದ ಶೇಂಗಾ, ಮುಸುಕಿನ ಜೋಳ, ಜೋಳ, ರಾಗಿ, ಸಿರಿಧಾನ್ಯಗಳು, ತೊಗರಿ, ಸೂರ್ಯಕಾಂತಿ, ಹತ್ತಿ, ಈರುಳ್ಳಿ ಸೇರಿದಂತೆ, ಇತರೆ ತೋಟಗಾರಿಕೆ ಬೆಳೆಗಳು ಸಂಪೂರ್ಣವಾಗಿ ಹಾನಿಗೆ ಒಳಗಾಗಿವೆ.
ಜಿಲ್ಲೆಯ ರೈತರ ಹಿತ ಕಾಯುವ ನಿಟ್ಟಿನಲ್ಲಿ ತಕ್ಷಣವೇ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಶೇ.25ರಷ್ಟು ಮಧ್ಯಂತರ ಬೆಳೆ ಪರಿಹಾರವನ್ನು ವಿಮಾ ಕಂಪನಿಗಳು ನೀಡುವಂತೆ ಶಿಫಾರಸ್ಸು ಮಾಡಲಾಗುವುದು. ರೈತರು ಈ ಕುರಿತು ಗೊಂದಲಗಳಿಗೆ ಒಳಗಾವುದು ಬೇಡ ಎಂದಿದ್ದಾರೆ ಜಿಲ್ಲಾಧಿಕಾರಿಗಳು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ಮಂಜುನಾಥ ಮಾತನಾಡಿ, ಜಿಲ್ಲೆಯಲ್ಲಿ ಮುಂಗಾರು ಮಳೆ ಕೊರತೆ ಉಂಟಾಗಿದೆ. ಜಿಲ್ಲೆಯ 2,98,150 ಹೆಕ್ಟೇರ್ ಕೃಷಿ ಭೂಮಿ ಪೈಕಿ, 2,81,395 ಹೆಕ್ಟೇರ್ ಕೃಷಿ ಭೂಮಿಯಲ್ಲಿ ಬಿತ್ತನೆಯಾಗಿದೆ. ಶೇ.94.38ರಷ್ಟು ಬಿತ್ತನೆ ಪ್ರಮಾಣ ದಾಖಲಾಗಿದೆ. ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ಜಿಲ್ಲೆಯಲ್ಲಿ 83,606 ರೈತರು ನೊಂದಣಿ ಮಾಡಿಕೊಡಿದ್ದಾರೆ. ಒಟ್ಟು 11.92 ಕೋಟಿ ರೂಪಾಯಿ ಪ್ರೀಮಿಯಂ ಮೊತ್ತ ಪಾವತಿಸಲಾಗಿದೆ ಎಂದು ಸಭೆಯಲ್ಲಿ ಮಾಹಿತಿ ನೀಡಿದರು.
ಬಬ್ಬೂರು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಓಂಕಾರಪ್ಪ ಮಾತನಾಡಿ, ಕೃಷಿ ಇಲಾಖೆಯ ಕೋರಿಕೆಯಂತೆ ಮಳೆಕೊರತೆಯಿಂದ ಉಂಟಾದ ಹಾನಿ ಬಗ್ಗೆ ಜಿಲ್ಲೆಯ ಆರು ತಾಲ್ಲೂಕುಗಳಲ್ಲಿ ಕೃಷಿ ವಿಜ್ಞಾನಿಗಳ ತಂಡ ಪರಿಶೀಲನೆ ನೆಡೆಸಿದೆ. ಚಳ್ಳಕೆರೆ ಭಾಗದಲ್ಲಿ ಶೇಂಗಾ ಬೆಳೆ ಸಂಪೂರ್ಣವಾಗಿ ವಿಫಲವಾಗಿದೆ. ಶೇಂಗಾ ಜಿಲ್ಲೆಯಲ್ಲಿ ಕಾಳುಗಟ್ಟಲು ಸಾಧ್ಯವೇ ಇಲ್ಲ. ಹೆಚ್ಚು ಬಿತ್ತನೆಯಾಗಿರುವ ಮೆಕ್ಕೆಜೋಳ ಮೂರು ಅಡಿ ಎತ್ತರ ಬೆಳೆದಿದ್ದರು, ಮಳೆ ಕೊರತೆಯಿಂದ ಕಾಳುಗಟ್ಟಿಲ್ಲ. ರೈತರು ರಾಗಿಯನ್ನು ಎರೆಡು ಬಾರಿ ಬಿತ್ತನೆ ಮಾಡಿದರೂ ಬೆಳೆ ಕೈಗೆ ಬರುವ ಯಾವ ಲಕ್ಷಣಗಳು ಇಲ್ಲ. ಮಳೆ ಕೊರತೆಯಿಂದ ಈರುಳ್ಳಿ ಸಹ ಬಾಧಿತವಾಗಿದೆ. ಜಿಲ್ಲೆಯಲ್ಲಿ ಶೇ.100ರಷ್ಟು ಬೆಳೆ ಹಾನಿಯಾಗಿದೆ ಎಂದರು.
ಚಿತ್ರದುರ್ಗ ತಾಲ್ಲೂಕು ತುರವನೂರು ಹೋಬಳಿ ಹುಣಸೆಕಟ್ಟೆ ಗ್ರಾಮದಲ್ಲಿ ಸೇವಂತಿ ಬೆಳೆ ನುಸಿರೋಗ ಬಾಧೆಯಿಂದ ಹಾನಿಗೆ ಒಳಗಾಗಿದೆ. ಹೊಸದುರ್ಗ ಹಾಗೂ ಹೊಳಲ್ಕೆರೆ ಭಾಗದಲ್ಲಿ ತೆಂಗಿನ ತೋಟದಲ್ಲಿ ಕಪ್ಪು ತಲೆ ಉಳುವಿನ ಬಾದೆ ಹೆಚ್ಚಾಗಿ ಕಂಡುಬರುತ್ತಿದೆ. ಈ ಎರಡು ಪ್ರಕರಣಗಳು ಕೀಟ ಬಾಧೆ ಆಗಿವೆ. ಇವನ್ನು ಪ್ರಕೃತಿ ವಿಕೋಪದಡಿ ಪರಿಗಣಿಸಲು ಸಾಧ್ಯವಿಲ್ಲ. ಇದಕ್ಕಾಗಿ ವಿಶೇಷ ಘೋಷಣೆ ಮಾಡುವ ನಿರೀಕ್ಷೆ ಇದೆ. ಇದರಲ್ಲಿ ಬೆಳೆಗೆ ಅಗತ್ಯ ಇರುವ ಔಷಧ ಹಾಗೂ ಪರಿಕರಗಳನ್ನು ರೈತರಿಗೆ ನೀಡಲಾಗುವುದು ಎನ್ನುತ್ತಾರೆ ತೋಟಗಾರಿಕೆ ಇಲಾಖೆ ಉಪನಿರ್ದೇಶಕಿ ಸವಿತಾ.




