ಯುವ ನಿರ್ದೇಶಕ ಸಂತೋಷ್ ಕೊಡಂಕೇರಿ ನಿರ್ದೇಶನ ಮತ್ತು ನಿರ್ಮಾಣದ ನವಿರು ಹಾಸ್ಯ ಕತೆಯುಳ್ಳ ರವಿಕೆ ಪ್ರಸಂಗ ಇದೇ 16ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಚಿತ್ರದ ಟ್ರೈಲರ್ ಮತ್ತು ಟೈಟಲ್ ಸಾಂಗ್ ಈಗಾಗಲೇ ಬಿಡುಗಡೆಯಾಗಿದ್ದು ಚಿತ್ರದ ಬಗ್ಗೆ ಕುತೂಹಲ ಮೂಡಿಸಿದೆ. ಪಾವನಾ ಸಂತೋಷ್ ಅವರು ಚಿತ್ರಕತೆ- ಸಂಭಾಷಣೆ ಬರೆದಿದ್ದಾರೆ. ಗೀತಾ ಭಾರತಿ ಭಟ್ ನಾಯಕಿಯಾಗಿ ನಟಿಸಿದ್ದಾರೆ. ಕಂದಯ್ಯ ಶೆಟ್ಟಿ ಅವರು ಸಹ ನಿರ್ಮಾಪಕರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಸುತ್ತಮುತ್ತ ಚಿತ್ರೀಕರಣ ನಡೆದಿದೆ.
ಸಂತೋಷ್ ಕೊಡಂಕೇರಿ ಅವರದೇ ‘ದೃಷ್ಟಿ ಮೀಡಿಯಾ ಅಂಡ್ ಪ್ರೊಡಕ್ಷನ್ʼನಡಿ ಚಿತ್ರ ನಿರ್ಮಾಣವಾಗಿದೆ. ಚಿತ್ರದ ಟೈಟಲ್ ಹಾಡನ್ನು ಖ್ಯಾತ ಹಿನ್ನೆಲೆ ಗಾಯಕಿ ಚೈತ್ರಾ ಹಾಗೂ ಚೇತನ್ ನಾಯಕ್ ಹಾಡಿದ್ದಾರೆ. “ಮನಸಲಿ ಜೋರು ಕಲರವ…” ಹಾಡನ್ನು ಮಾನಸ ಹೊಳ್ಳ, ಮತ್ತು “ಹಸಿಮನಸಲಿ…” ಹಾಡನ್ನು ಜೋಗಿ ಸುನೀತಾ ಹಾಡಿದ್ದಾರೆ.
ರವಿಕೆಯೊಳಗಿನ ಹೆಣ್ಣು ಭಾವನೆಯ ಸುತ್ತ
“ಸಿನಿಮಾ ಕಥೆಯ ಮೂಲಕ ಕೇವಲ ಮನರಂಜನೆ ಹಾಗೂ ಸಂದೇಶ ನೀಡಿದರೆ ಸಾಲದು, ನೋಡಿದವರಿಗೆ ಆ ಚಿತ್ರ ತಮ್ಮದೆ, ತಮ್ಮ ಬದುಕಿನ ಭಾಗ ಎನ್ನುವ ಭಾವನೆ ಮೂಡಬೇಕು. ಸಾಮಾನ್ಯವಾಗಿ ರವಿಕೆ ಅಂದ ತಕ್ಷಣ ಅದರ ಬಗ್ಗೆ ಗಂಭೀರ ಚಿಂತನೆಗಿಂತ ಹತ್ತು ಹಲವು ಹಾಸ್ಯಾಸ್ಪದವಾದ ಭಾವನೆ ಬಹುತೇಕರಲ್ಲಿ ಸಹಜವಾಗಿ ಮೂಡುತ್ತದೆ. ಆದರೆ ಆ ರವಿಕೆಯಿಂದಲೇ ರವಿಕೆಯೊಳಗಿನ ಮನಸ್ಸಿನ ಭಾವನೆಯನ್ನು ಅನಾವರಣಗೊಳಿಸಿ, ಸಮಾಜದಲ್ಲಿ ಅದೆಷ್ಟೋ ಇಂತಹ ಸಂದಿಗ್ಧ ಸ್ಥಿತಿಯಲ್ಲಿರುವ ಹಾಗೂ ಇಂತಹ ಸ್ಥಿತಿಯನ್ನು ಅನುಭವಿಸಿರುವ ಮಹಿಳೆಯರ ಭಾವನೆಗೆ ಈ ಸಿನಿಮಾ ಮೂಲಕ ಬಣ್ಣ ತುಂಬಬೇಕು ಎನ್ನುವ ಹಂಬಲ ಚಿತ್ರ ತಂಡದ್ದು.
ಮಧ್ಯಮ ವರ್ಗದ ಕುಟುಂಬವೊಂದು ಗ್ರಾಮೀಣ ಸೊಗಡಿನಲ್ಲಿ ಇರುವ ವಾತಾವರಣ, ಸ್ಥಳೀಯ ಸಂಸ್ಕೃತಿ, ಸಂಪ್ರದಾಯದ ಜೊತೆಗೆ ಹಾಸ್ಯದ ಸ್ಪರ್ಷವನ್ನು ದಕ್ಷಿಣ ಕರ್ನಾಟಕದ ಭಾಷೆಯನ್ನೆ ವಿಭಿನ್ನವಾಗಿ ತೋರಿಸುವ ಮೂಲಕ ಭಾಷಾ ಹಾಗೂ ಆಹಾರ ಸಂಸ್ಕೃತಿಯನ್ನು ಕೂಡ ರವಿಕೆ ಪ್ರಸಂಗದಲ್ಲಿ ಸೂಕ್ಷ್ಮವಾಗಿ ತೋರಿಲಾಗಿದೆ. ಒಬ್ಬ ಟೈಲರ್ ಅಂಗಡಿಯಿಂದ ಆರಂಭವಾದ ಈ ರವಿಕೆ ಪ್ರಸಂಗ ಕೋರ್ಟ್ ಮೆಟ್ಟಿಲೇರಿದಾಗ ಅದಕ್ಕೆ ಸಮಾಜ ಹೆಣ್ಣನ್ನು ನೋಡುವ ಪರಿಯೇ ಈ ಚಿತ್ರದ ಎಳೆಯಾಗಿದೆ.

ಇಡೀ ಸಿನಿಮಾ ರವಿಕೆ ವಿಚಾರವಾಗಿ ಹತ್ತು-ಹಲವು ಚರ್ಚೆಗಳನ್ನು ಹುಟ್ಟು ಹಾಕುವ ಜೊತೆಗೆ ಮಹಿಳೆಯ ಮಾನಸಿಕ ವೇದನೆ ಹಾಗೂ ಆಕೆಯ ಕನಸುಗಳಿಗಾದ ನಿರಾಸೆ, ಹೋರಾಟದ ಛಲ, ಸಮಾಜ ಆಕೆಯನ್ನು ಕಾಣುವ ರೀತಿ ಹೀಗೆ ಹಲವಾರು ವಿಚಾರಗಳನ್ನು ರವಿಕೆ ಸುತ್ತ ಸುತ್ತುವರೆಯುತ್ತವೆ. ಹಕ್ಕಿಗಾಗಿ ಹೋರಾಟ, ಸಮಸಮಾಜದ ಸಂದೇಶ, ಮಹಿಳೆ ಸಂವೇದನೆ ಹೀಗೆ ಸಮಾಜಕ್ಕೊಂದು ಸಂದೇಶವನ್ನು ರವಿಕೆ ಪ್ರಸಂಗ ನೀಡಲಿದೆ” ಎಂದು ಚಿತ್ರ ತಂಡ ಹೇಳಿಕೊಂಡಿದೆ.
ಪ್ರಯೋಗಾತ್ಮಕ ಚಿತ್ರಗಳ ನಿರ್ದೇಶಕ ಸಂತೋಷ್
ಸುಳ್ಯ ಮೂಲದ ಸಂತೋಷ್ ಕೊಡಂಕೇರಿ ಪ್ರಯೋಗಾತ್ಮಕ ಚಿತ್ರ ನಿರ್ದೇಶಕ ಎಂದು ಈಗಾಗಲೇ ಗುರುತಿಸಿಕೊಂಡಿದ್ದಾರೆ. ಅವರ ನಿರ್ದೇಶನದ “ಒಂದಾನೊಂದು ಕಾಲದಲ್ಲಿ ಒಬ್ಬ ರಾಜನಿದ್ದ” ಎಂಬ ಏಕವ್ಯಕ್ತಿ ಸಿನಿಮಾ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಸೇರಿದೆ. ಒಬ್ಬನೇ ಕಲಾವಿದ (ಯೋಗೇಶ್ ಮಾಸ್ಟರ್) 24 ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದ ಈ ಚಿತ್ರ ರವೀಂದ್ರನಾಥ ಠಾಗೋರ್ ಅವರ ʼOnce There was a Kingʼ ಕಾದಂಬರಿಯನ್ನಾಧರಿಸಿದ ಸಿನಿಮಾ. ʼಹೋಂ ಸ್ಟೇʼ ಸಂತೋಷ್ ಅವರ ಮತ್ತೊಂದು ಚಿತ್ರ. ಇವರು ಈಗಾಗಲೇ ಹಲವು ಕಿರುಚಿತ್ರಗಳನ್ನು ನಿರ್ಮಾಣ ಮಾಡಿದ್ದಾರೆ. ಜಾಹೀರಾತು ನಿರ್ಮಾಣದಲ್ಲೂ ಗುರುತಿಸಿಕೊಂಡಿದ್ದಾರೆ.





