ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಉಮೇಶ್ ಅವರು ಭಾನುವಾರ ನಿಧನರಾಗಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಉಮೇಶ್ ಅವರನ್ನು ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಇಂದು ಮೃತರಾಗಿದ್ದಾರೆ.
ಎಂ.ಎಸ್. ಉಮೇಶ್ ಅವರಿಗೆ 80 ವರ್ಷ ವಯಸ್ಸಾಗಿತ್ತು. ಉಮೇಶ್ ಅವರ ನಿಧನ ಅಭಿಮಾನಿಗಳಿಗೆ ಮತ್ತು ಕುಟುಂಬದವರಿಗೆ ನೋವುಂಟು ಮಾಡಿದೆ.
1960ರಿಂದಲೂ ಉಮೇಶ್ ಅವರು ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ತಮ್ಮ ಇಳಿವಯಸ್ಸಿನಲ್ಲಿಯೂ ಕೂಡ ಉಮೇಶ್ ಅವರು ನಟನೆ ಮಾಡಿದ್ದಾರೆ. ‘ಕಮಲ್ ಶ್ರೀದೇವಿ’, ‘ಐ ಆ್ಯಮ್ ಗಾಡ್’ ಸಿನಿಮಾಗಳು ಉಮೇಶ್ ಅವರು ಇತ್ತೀಚೆಗೆ ನಟಿಸಿದ ಚಿತ್ರಗಳಾಗಿವೆ.
ಪ್ರಮುಖವಾಗಿ ಉಮೇಶ್ ಅವರು ಪೋಷಕ ಪಾತ್ರಗಳು ಹಾಗೂ ಹಾಸ್ಯ ಪಾತ್ರಗಳ ಮೂಲಕ ಜನಪ್ರಿಯತೆ ಪಡೆದಿದ್ದಾರೆ. ಪ್ರಮುಖವಾಗಿ, “ಅಯ್ಯಯ್ಯೋ ಇವ್ರೂ ನನ್ನ ಅಪಾರ್ಥ ಮಾಡ್ಕೊಂಬಿಟ್ರಲ್ಲ. ನಾನೇನೂ ಬೇಕೂ ಅಂತ ಹೀಗ್ ಮಾಡ್ಲಿಲ್ಲ….. ಹೇಳ್ಕೊಳ್ಳೋಣ ಅಂದ್ರೆ ನನ್ಹೆಂಡ್ತಿ ಕೂಡಾ ಊರಲ್ಲಿಲ್ವೆ..” ಎಂಬ ಈ ಡೈಲಾಗ್ ಹೆಚ್ಚು ಪ್ರಸಿದ್ಧಿ ಪಡೆದಿತ್ತು. ಹೀಗೆ, ಅವರ ಅಸಾಮಾನ್ಯ ರೀತಿಯ ಡೈಲಾಗ್, ಅಭಿನಯದ ಮೂಲಕ ಕನ್ನಡ ಚಿತ್ರರಸಿಕರ ಮನವನ್ನು ಉಮೇಶ್ ಅವರು ಗೆದ್ದಿದ್ದರು.
350ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ ಉಮೇಶ್ 1945ರ ಏಪ್ರಿಲ್ 24ರಂದು ಮೈಸೂರಿನಲ್ಲಿ ಜನಿಸಿದರು.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಸಂಚಾರ ನಿಯಮ ಉಲ್ಲಂಘನೆ: ದಂಡ ಪಾವತಿಗೆ 50% ರಿಯಾಯತಿ; 7 ಕೋಟಿ ರೂ. ಸಂಗ್ರಹ
ರಂಗಭೂಮಿ ಮತ್ತು ಚಲನಚಿತ್ರ ನಟರಾಗಿ ಸಕ್ರಿಯರಾಗಿದ್ದ ಉಮೇಶ್ ಅವರು 1960ರಲ್ಲಿ ಬಿ ಆರ್ ಪಂಥುಲು ನಿರ್ದೇಶನದ ‘ಮಕ್ಕಳ ರಾಜ್ಯ’ ಸಿನಿಮಾದ ಮೂಲಕ ಚಿತ್ರರಂಗಕ್ಕೆ ಪ್ರವೇಶ ಮಾಡಿದರು. ಆ ಬಳಿಕ, ಸಿನಿಮಾ ಕ್ಷೇತ್ರದಲ್ಲಿ ಸಕ್ರಿಯವಾದ ಅವರು ‘ನಾಗರ ಹೊಳೆ’, ‘ಗುರು ಶಿಷ್ಯರು’, ‘ಅನುಪಮಾ’, ‘ಕಾಮನ ಬಿಲ್ಲು’, ‘ಅಪೂರ್ವ ಸಂಗಮ’, ‘ಶ್ರುತಿ ಸೇರಿದಾಗ’, ‘ಹಾಲು ಸಕ್ಕರೆ’, ‘ಗೋಲ್ಮಾಲ್ ರಾಧಾಕೃಷ್ಣ’, ‘ಮಲಯ ಮಾರುತು’, ‘ಗಜಪತಿ ಗರ್ಭಭಂಗ’ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದಾರೆ.





