ಕರ್ನಾಟಕ ಕಾಂಗ್ರೆಸ್ ಸರ್ಕಾರ ರಚಿಸಿರುವ “ದ್ವೇಷ ಭಾಷಣಕ್ಕೆ ಹತ್ತು ವರ್ಷಗಳ ಜೈಲು ಸಜೆ” ಶಾಸನ ಕಾಂಗ್ರೆಸ್ ಪಕ್ಷದ ಕ್ರೂರ ಸಂಪ್ರದಾಯವನ್ನು ಪ್ರತಿಬಿಂಬಿಸುತ್ತದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಿಡಿ ಕಾರಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, “ಈ ಶಾಸನ ಸಾರ್ವಜನಿಕರಲ್ಲಿ ಭಯದ ವಾತಾವರಣ ಸೃಷ್ಟಿಸುವುದಾಗಿದೆ ಮತ್ತು ರಾಜಕೀಯ ನಿಯಂತ್ರಣದ ದುರುದ್ದೇಶಕ್ಕಾಗಿ ಜಾರಿಗೆ ತಂದಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ” ಎಂದು ಹರಿಹಾಯ್ದರು.
“ರಾಜ್ಯ ಕಾಂಗ್ರೆಸ್ ಸರ್ಕಾರ ಈ ಮೂಲಕ ಸರ್ವರ ವಾಕ್ ಸ್ವತಂತ್ರ ಕಿತ್ತುಕೊಳ್ಳುತ್ತಿದೆ. ಇದು ಕಾಂಗ್ರೆಸ್ ಪಕ್ಷದ ಕ್ರೂರ ಸಂಪ್ರದಾಯವನ್ನು ಪ್ರದರ್ಶಿಸುತ್ತಿದ್ದು, ಸರ್ಕಾರದ ದುರಾಡಳಿತಕ್ಕೆ ಕೈಗನ್ನಡಿಯಾಗಿದೆ. ರಾಜ್ಯದಲ್ಲಿ ದುರಾಡಳಿತ ವಿರುದ್ಧದ ಧ್ವನಿ ಅಡಗಿಸಲು ಹಾಗು ಸಾರ್ವಜನಿಕ ಅಭಿಪ್ರಾಯಗಳಿಗೆ ಕಡಿವಾಣ ಹಾಕಲು ಹೀಗೆ “ದ್ವೇಷ ಭಾಷಣ”ಕ್ಕೆ 10 ವರ್ಷಗಳ ಜೈಲು ಶಿಕ್ಷೆ?” ಎಂಬ “ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ” ಶಾಸನ ರಚನೆ ಮಾಡಿದೆ” ಎಂದು ಖಂಡಿಸಿದರು.
“ಕಾಂಗ್ರೆಸ್ ಸರ್ಕಾರದ ಈ ಶಾಸನ ದ್ವೇಷ ಭಾಷಣವನ್ನು ನಿಯಂತ್ರಿಸುವ ಉದ್ದೇಶವೋ ಅಥವಾ ವಾಕ್ ಸ್ವಾತಂತ್ರ್ಯವನ್ನೇ ಕಿತ್ತುಕೊಳ್ಳುವ ಹುನ್ನಾರವೋ? ಎಂದು ಪ್ರಶ್ನಿಸಿದ್ದಾರೆ. ಅಲ್ಲದೇ, ಇದು ಸಮಾಜದಲ್ಲಿ ಸಾಮರಸ್ಯವನ್ನು ಕಾಪಾಡಿಕೊಳ್ಳುವ ಉದ್ದೇಶಕ್ಕಾಗಿ ರಚಿಸಿದಂತೆ ಕಾಣುತ್ತಿಲ್ಲ. ಬದಲಾಗಿ ಸರ್ಕಾರದ ದುರಾಡಳಿತ ಪ್ರಶ್ನಿಸುವವರ ಧ್ವನಿ ಅಡಗಿಸುವ ದುರುದ್ದೇಶಪುರಕದಂತೆ ಇದೆ” ಎಂದು ಆರೋಪಿಸಿದರು.
“ರಾಜ್ಯ ಸರ್ಕಾರದ ಈ ವಿಧೇಯಕ ವಿಮರ್ಶಕರನ್ನು ವಿಮರ್ಶೆಯಿಂದಲೇ ದೂರವಿಡುವ ಹಾಗೂ ಸರ್ಕಾರದ ದುರಾಡಳಿತ ಹೊರಬಾರದಂತೆ ಹತ್ತಿಕ್ಕುವ ದುರಾಲೋಚನೆಯಿಂದ ಕೂಡಿದೆ” ಎಂದು ಜೋಶಿ ಆಕ್ರೋಶ ವ್ಯಕ್ತಪಡಿಸಿದರು.





