ಬೆಳಗಾವಿ ಜಿಲ್ಲೆಯ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಕಂಬಕ್ಕೆ ಕಟ್ಟಿ ಹಲ್ಲೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನ್ಯಾಯಾಲಯ ಶಿಕ್ಷೆಯ ಪ್ರಮಾಣ ಪ್ರಕಟಿಸಿದೆ. ನಿನ್ನೆ ಈ ಪ್ರಕರಣದ 12 ಆರೋಪಿಗಳು ದೋಷಿಗಳು ಎಂದು ತೀರ್ಪು ನೀಡಿದ್ದ ಬೆಳಗಾವಿಯ ಹೆಚ್ಚುವರಿ 10ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಇಂದು ಎಲ್ಲ ಅಪರಾಧಿಗಳಿಗೆ ತಲಾ ಐದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದೆ.
ಈ ಪ್ರಕರಣದಲ್ಲಿ ಬಸಪ್ಪ ನಾಯಿಕ, ರಾಜು ನಾಯಿಕ, ಕೆಂಪಣ್ಣ ನಾಯಿಕ, ಪಾರ್ವತಿ ನಾಯಿಕ, ಯಲ್ಲವ್ವ ನಾಯಿಕ, ಲಕ್ಕಪ್ಪ ನಾಯಿಕ, ಗಂಗವ್ವ ನಾಯಿಕ, ಸಂಗೀತಾ ಹೆಗ್ಗನಾಯಿಕ, ಸಂತೋಷ ನಾಯಿಕ, ಶೋಭಾ ನಾಯಿಕ, ಲಕ್ಕವ್ವ ನಾಯಿಕ ಮತ್ತು ಶಿವಪ್ಪ ವನ್ನೂರಿ ದೋಷಿಗಳೆಂದು ಸಾಬೀತಾಗಿದ್ದು, ಪ್ರತಿಯೊಬ್ಬರೂ 5 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೊಳಪಟ್ಟಿದ್ದಾರೆ. ಇನ್ನೋರ್ವ ಬಾಲಾಪರಾಧಿ ಕುರಿತು ವಿಚಾರಣೆ ಮುಂದವರೆದಿದೆ.
ವಂಟಮೂರಿಯಲ್ಲಿ 2023ರ ಡಿಸೆಂಬರ್ 11ರಂದು ಈ ಅಮಾನವೀಯ ಘಟನೆ ನಡೆದಿತ್ತು. ಪ್ರೀತಿಸಿದ ಯುವತಿಯೊಂದಿಗೆ ಯುವಕ ಮನೆ ಬಿಟ್ಟು ಪರಾರಿಯಾಗಿದ್ದ. ಇದಕ್ಕೆ ಪ್ರತೀಕಾರವಾಗಿ ಯುವತಿಯ ಕುಟುಂಬಸ್ಥರು ಯುವಕನ ತಾಯಿಯನ್ನು ವಿವಸ್ತ್ರಗೊಳಿಸಿ, ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ್ದರು. ಅಲ್ಲದೇ ಯುವಕನ ಮನೆಯನ್ನು ಧ್ವಂಸ ಮಾಡಿ ಅಟ್ಟಹಾಸ ಮೆರೆದಿದ್ದರು. ಇದು ಇಡೀ ದೇಶಾದ್ಯಂತ ತೀವ್ರ ಟೀಕೆಗೆ ಕಾರಣವಾಗಿತ್ತು. ಈ ಸಂಬಂಧ ಕಾಕತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

2023ರ ಡಿ.16ರಂದು ಪ್ರಕರಣದ ತನಿಖೆಯನ್ನು ಸಿಐಡಿಯ ಮಹಾನಿರ್ದೇಶಕರು ಹಾಗೂ ಪೊಲೀಸ್ ಮಹಾನಿರೀಕ್ಷಕರಿಗೆ ವಹಿಸಲಾಗಿತ್ತು. ತನಿಖೆ ನಡೆಸಿದ ಸಿಐಡಿ 2024ರ ಏಪ್ರಿಲ್ 22ರಂದು 13 ಮಂದಿ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿತ್ತು. 92 ಸಾಕ್ಷಿದಾರರನ್ನು ಉಲ್ಲೇಖಿಸುವ ಜತೆಗೆ, ವಶಕ್ಕೆ ಪಡೆದ 37 ವಸ್ತುಗಳನ್ನು ಸಾಕ್ಷ್ಯಗಳನ್ನಾಗಿ ಸಲ್ಲಿಸಿತ್ತು. ವಿಚಾರಣೆ ನಡೆಸಿದ ಬೆಳಗಾವಿ 10ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಹೆಚ್.ಎಸ್. ಮಂಜುನಾಥ ಅವರು 12 ಆರೋಪಿಗಳು ತಪ್ಪಿತಸ್ಥರೆಂದು ನಿನ್ನೆಯಷ್ಟೇ ತೀರ್ಪು ಪ್ರಕಟಿಸಿ, ಶಿಕ್ಷೆ ಪ್ರಮಾಣವನ್ನು ಇಂದು ಕಾಯ್ದಿರಿಸಿದ್ದರು.
ಇದನ್ನೂ ಓದಿ: ಬೆಳಗಾವಿ | ಸೋಲಾರ ಪ್ಲಾಂಟ್ ನೆಪದಲ್ಲಿ ಸಾವಿರಾರು ಮರಗಳ ಮಾರಣಹೋಮ
ವಂಟಮೂರಿ ಪ್ರಕರಣದಲ್ಲಿ ನ್ಯಾಯಾಲಯ ನೀಡಿರುವ ತೀರ್ಪು ಸಮಾಜಕ್ಕೆ ಹಾಗೂ ಸಮಾಜ ತಲೆ ತಗ್ಗಿಸುವ ಕೆಲಸ ಮಾಡುವ ಯಾರಿಗೇ ಆದರೂ ಸ್ಪಷ್ಟ ಎಚ್ಚರಿಕೆ ನೀಡಿದೆ. ವೈಯಕ್ತಿಕ ವಿಷಯಗಳ ಹೆಸರಿನಲ್ಲಿ ಮಹಿಳೆಯ ಮೇಲಿನ ಹಿಂಸೆ, ಅವಮಾನ ಮತ್ತು ಅಮಾನವೀಯ ಕೃತ್ಯಗಳಿಗೆ ಯಾವುದೇ ಸಹಾನುಭೂತಿ ಇಲ್ಲ ಎಂಬ ಸಂದೇಶವನ್ನು ಈ ತೀರ್ಪು ಬಲವಾಗಿ ಸಾರಿದೆ. ನ್ಯಾಯದ ಪ್ರಕ್ರಿಯೆ ನಿಧಾನವಾದರೂ, ಕೊನೆಯಲ್ಲಿ ಸತ್ಯಕ್ಕೆ ಜಯ ಸಿಗುತ್ತದೆ ಎಂಬ ನಂಬಿಕೆಯನ್ನು ಈ ತೀರ್ಪು ಮತ್ತೊಮ್ಮೆ ಪುನರುಚ್ಚರಿಸಿದೆ.





