ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳಿಗೆ ಏಪ್ರಿಲ್ 9ರಂದು ಉಪಚುನಾವಣೆ ನಿಗದಿಯಾಗಲಿದೆ. ಎರಡೂ ಕ್ಷೇತ್ರಗಳಿಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಗುರುವಾರ ಘೋಷಿಸಿದೆ. ಬಾಗಲಕೋಟೆಗೆ ವೀರಣ್ಣ ಚರಂತಿಮಠ್ ಮತ್ತು ದಾವಣಗೆರೆ ದಕ್ಷಿಣಕ್ಕೆ ಶ್ರೀನಿವಾಸ ಟಿ ದಾಸಕರಿಯಪ್ಪ ಅವರನ್ನು ಕಣಕ್ಕಿಳಿಸಿದೆ.
ಬಾಗಲಕೋಟೆ ಶಾಸಕರಾಗಿದ್ದ ಎಚ್.ವೈ. ಮೇಟಿ ಮತ್ತು ದಾವಣೆಗೆರೆ ದಕ್ಷಿಣದ ಶಾಸಕರಾಗಿದ್ದ ಶಾಮನೂರು ಶಿವಶಂಕರಪ್ಪ ಅವರು ನಿಧನರಾದ ಹಿನ್ನೆಲೆ ಎರಡೂ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದೆ.
ದಾವಣಗೆರೆಯಲ್ಲಿ ಜಾತಿ ಲೆಕ್ಕಾಚಾರದ ತಂತ್ರ ಹೆಣೆದಿರುವ ಬಿಜೆಪಿ, ಶ್ರೀನಿವಾಸ ಟಿ ದಾಸಕರಿಯಪ್ಪ ಅವರಿಗೆ ಟಿಕೆಟ್ ನೀಡಿದೆ. ಎಸ್ಟಿ ಸಮುದಾಯಕ್ಕೆ ಸೇರಿದ ಶ್ರೀನಿವಾಸ ಅವರು ಎಸ್ಸಿ/ಎಸ್ಟಿ ಮತಗಳನ್ನು ಪಡೆದುಕೊಳ್ಳಬಹುದು, ಜೊತೆಗೆ, ಲಿಂಗಾಯತ ಸಮುದಾಯವೂ ಪಕ್ಷಕ್ಕೆ ಮತ ನೀಡಬಹುದು ಎಂಬ ಲೆಕ್ಕಾಚಾರ ಬಿಜೆಪಿಯಲ್ಲಿದೆ.
ಅಂತೆಯೇ, ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ವೀರಣ್ಣ ಚರಂತಿಮಠ್ ಅವರನ್ನು ಬಾಗಲಕೋಟೆಯಲ್ಲಿ ಕಣಕ್ಕಿಳಿಸಲಾಗಿದೆ. ಕ್ಷೇತ್ರದಲ್ಲಿ ಲಿಂಗಾಯತ ಮತಗಳ ಪ್ರಾಬಲ್ಯ ಹೆಚ್ಚಿರುವುದರಿಂದ, ಗೆಲುವು ಸುಲಭವೆಂದು ಬಿಜೆಪಿ ಭಾವಿಸಿದೆ.




