ಜಾತಿ ಸಮೀಕ್ಷೆ ವಿಚಾರದಲ್ಲಿ ಬಿಜೆಪಿಯೊಳಗೆ ಭಿನ್ನಮತ ವ್ಯಕ್ತವಾಗಿದೆ. ಸಮೀಕ್ಷೆಗೆ ಬಂದಾಗ ಮಾಹಿತಿ ನಿರಾಕರಿಸಿ ಎಂದಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮತ್ತು ತೇಜಸ್ವಿ ಸೂರ್ಯ ಅವರ ಹೇಳಿಕೆಯನ್ನು ಶಾಸಕ ವಿ.ಸುನೀಲ್ ಕುಮಾರ್ ಪರೋಕ್ಷವಾಗಿ ಟೀಕಿಸಿದ್ದಾರೆ.
‘ಸಮೀಕ್ಷೆಗೆ ಬಂದಾಗ ಮಾಹಿತಿ ಕೊಡಬೇಡಿ. ನಿಮ್ಮ ಮಾಹಿತಿಯನ್ನು ರಾಜ್ಯ ಸರ್ಕಾರ ದುರುಪಯೋಗ ಮಾಡಿಕೊಳ್ಳುತ್ತದೆ. ನಾನು ಮಾಹಿತಿ ಕೊಡುವುದಿಲ್ಲ. ನೀವೂ ಸಮೀಕ್ಷೆಯನ್ನು ನಿರಾಕರಿಸಿ’ ಎಂದು ಬ್ರಾಹ್ಮಣ ಸಮುದಾಯದ ಪ್ರಲ್ಹಾದ ಜೋಶಿ ಹಾಗೂ ತೇಜಸ್ವಿ ಸೂರ್ಯ ಹೇಳಿಕೆ ನೀಡಿದ್ದರು. ಇಂತಹ ಹೇಳಿಕೆಗೆ ಕುರಿತಂತೆ ಪ್ರತಿಕ್ರಿಯಿಸಿರುವ ಸುನೀಲ್ ಕುಮಾರ್, “ಅದು ಅವರ ವೈಯಕ್ತಿಕ ನಿಲುವು. ಅದು ಪಕ್ಷದ ನಿಲುವಲ್ಲ” ಎಂದಿದ್ದಾರೆ.
“ಸಮೀಕ್ಷೆಗೆ ನಮ್ಮ ವಿರೋಧ ಇಲ್ಲ. ಆದರೆ ಈ ಸಮೀಕ್ಷೆಯನ್ನು ಸರ್ಕಾರ ಅಂಗೀಕಾರ ಮಾಡುವುದಿಲ್ಲ. ತರಾತುರಿಯಲ್ಲಿ ಸಮೀಕ್ಷೆ ನಡೆಸುವ ಅಗತ್ಯ ಏನಿದೆ” ಎಂದು ಕೇಳಿದ್ದಾರೆ.
“ಸಮೀಕ್ಷೆ ಬಹಿಷ್ಕಾರದ ಬಗ್ಗೆ ವ್ಯಕ್ತವಾಗಿರುವ ಅಭಿಪ್ರಾಯಗಳು ವೈಯಕ್ತಿಕ. ಆದರೆ ನಮ್ಮ ಪಕ್ಷದ ರಾಜ್ಯಾಧ್ಯಕ್ಷರೇ ಸಮೀಕ್ಷೆಗೆ ನಮ್ಮ ವಿರೋಧ ಇಲ್ಲ ಎಂದಿದ್ದಾರೆ. ನವೆಂಬರ್ನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅವಧಿ ಮುಗಿಯಲಿದೆ. ಹಾಗಾಗಿ ಅದನ್ನು ವಿಸ್ತರಣೆ ಮಾಡುವ ಉದ್ದೇಶದಿಂದ ಸಮೀಕ್ಷೆ ನಡೆಸಲಾಗುತ್ತಿದೆ” ಎಂದು ಆರೋಪ ಮಾಡಿದ್ದಾರೆ.
ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು, “ನಾವು ಸಮೀಕ್ಷೆಯನ್ನು ವಿರೋಧ ಮಾಡುವುದಿಲ್ಲ. ಆದರೆ ಈ ಸಮೀಕ್ಷೆಯ ಉದ್ದೇಶ ಸರಿ ಇಲ್ಲ. ಸಿದ್ದರಾಮಯ್ಯ ಅವರು ಧರ್ಮ, ಜಾತಿಯನ್ನು ಒಡೆಯುವ ಅಜೆಂಡಾಗೆ ನಮ್ಮ ವಿರೋಧವಿದೆ” ಎಂದು ಆಕ್ಷೇಪಿಸಿದ್ದರು.
ಒಟ್ಟಿನಲ್ಲಿ ಬಿಜೆಪಿ ನಾಯಕರಲ್ಲೇ ಸಮೀಕ್ಷೆ ನಿರಾಕರಣೆ ಬಗ್ಗೆ ಒಮ್ಮತವಿಲ್ಲದೆ ಇರುವುದು ಬಯಲಾಗಿದೆ. ಆ ಮೂಲಕ ಗೊಂದಲಕಾರಿ ವಾತಾವರಣವನ್ನು ಸೃಷ್ಟಿಸುವ ಪ್ರಯತ್ನಗಳು ಮುಂದುವರಿದಿವೆ.
ಬಿಜೆಪಿ ನಾಯಕರು ಸಮೀಕ್ಷೆ ಬಹಿಷ್ಕರಿಸಿರುವುದನ್ನು ಟೀಕಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, “ನ್ಯಾಯಾಲಯ ಸಮೀಕ್ಷೆಗೆ ಮಾಡಲು ಒಪ್ಪಿಗೆ ನೀಡಿದೆ. ಹೀಗಿರುವಾಗ ಸಮೀಕ್ಷೆಯನ್ನು ಬಹಿಷ್ಕಾರ ಮಾಡುವ ನಿಲುವು ನ್ಯಾಯಾಲಯದ ಆದೇಶದ ವಿರುದ್ಧವಾಗಿದೆ. ರಾಜ್ಯ ಸರ್ಕಾರದ ಸಮೀಕ್ಷೆಯನ್ನು ವಿರೋಧ ಮಾಡುವ ಬಿಜೆಪಿ ಕೇಂದ್ರ ಸರ್ಕಾರದ ಸಮೀಕ್ಷೆಯನ್ನು ಒಪ್ಪುತ್ತಾ?” ಎಂದು ಪ್ರಶ್ನಿಸಿದ್ದರು.
ಇದನ್ನೂ ಓದಿರಿ: ಸಮೀಕ್ಷೆ | ಬಿಜೆಪಿ ನಾಯಕರ ಅಂತರಂಗದ ಮನುವಾದ ಬಯಲು: ಸಿದ್ದರಾಮಯ್ಯ
“ನಮ್ಮ ಸರ್ಕಾರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಪ್ರಾರಂಭಿಸುತ್ತಿದ್ದಂತೆಯೇ ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ಎಂದು ಕೂಗು ಹಾಕುತ್ತಿರುವವರ ಆಂತರ್ಯದಲ್ಲಿರುವ ನಿಜ ಬಣ್ಣ ಬಯಲಾಗುತ್ತಿದೆ. ರಾಜ್ಯ ಬಿಜೆಪಿಯ ನಾಯಕರು ಒಬ್ಬೊಬ್ಬರಾಗಿ ಹೊರಗೆ ಬಂದು ನಮ್ಮ ಸಮೀಕ್ಷೆಯನ್ನು ಬಹಿಷ್ಕರಿಸುವಂತೆ ಕರೆನೀಡುವ ಮೂಲಕ ಸಾರ್ವಜನಿಕರ ಎದುರು ಬೆತ್ತಲಾಗುತ್ತಿದ್ದಾರೆ. ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿರುವ ಸಮೀಕ್ಷೆ ಯಾವುದೇ ಒಂದು ಜಾತಿ-ಧರ್ಮಗಳಿಗೆ ಸೀಮಿತವಾದುದಲ್ಲ. ಇದು ರಾಜ್ಯದ ಏಳು ಕೋಟಿ ಜನರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ. ಇದು ಯಾರ ವಿರುದ್ಧವೂ ಅಲ್ಲ, ಇದು ಎಲ್ಲರ ಪರವಾಗಿರುವ ಸಮೀಕ್ಷೆ. ಇದರ ಮುಖ್ಯ ಉದ್ದೇಶ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮಾನತೆಯನ್ನು ಸಾಧಿಸಿ ಸರ್ವರಿಗೂ ಸಮಪಾಲು, ಸಮಬಾಳು ನೀಡುವುದಾಗಿದೆ. ಸಂಪತ್ತು, ಅವಕಾಶ ಮತ್ತು ಪ್ರಾತಿನಿಧ್ಯ ಎಲ್ಲವೂ ಯಥಾಸ್ಥಿತಿಯಲ್ಲಿಯೇ ಇರಬೇಕು. ಬಡವರು ಬಡವರಾಗಿಯೇ ಉಳಿಯಬೇಕು, ಹಿಂದುಳಿದವರು ಹಿಂದೆಯೇ ಉಳಿಯಬೇಕು ಮಹಿಳೆಯರು ಅವಕಾಶ ವಂಚಿತರಾಗಿಯೇ ಇರಬೇಕು, ವರ್ಣ ಮತ್ತು ವರ್ಗಗಳ ನಡುವಿನ ಅಸಮಾನತೆ ಮುಂದುವರಿಯಬೇಕು ಎನ್ನುವುದು ಮನುವಾದ. ಬಿಜೆಪಿ ನಾಯಕರ ಅಂತರಂಗದಲ್ಲಿರುವುದು ಇದೇ ಮನುವಾದಿ ಮನಸ್ಥಿತಿ” ಎಂದು ಟೀಕಿಸಿದ್ದರು.
ಜೋಶಿ ಮತ್ತು ತೇಜಸ್ವಿ ಹೇಳಿಕೆ ವಿರುದ್ಧ ಒಬಿಸಿ ಸಮುದಾಯಗಳು ತಿರುಗಿ ಬೀಳುವ ಸೂಚನೆ ಕಂಡು ಬಂದಿದೆ. ಸಾಮಾಜಿಕ ಮಾಧ್ಯಮಗಳ ಮೂಲಕ ಈಗಾಗಲೇ ಅನೇಕರು ಖಂಡನೆ ವ್ಯಕ್ತಪಡಿಸಿದ್ದಾರೆ. ಈಗ ಬಿಜೆಪಿಯೊಳಗೆಯೇ ಭಿನ್ನಮತ ಹುಟ್ಟಿಕೊಂಡಿದ್ದು, ಸುನೀಲ್ ಕುಮಾರ್ ಹೇಳಿಕೆ ಅದರ ಭಾಗವಾಗಿ ಹೊರಬಿದ್ದಿದೆ ಎನ್ನಲಾಗುತ್ತಿದೆ.





