ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಹೋರಾಟಕ್ಕೆ ಅಂತಿಮವಾಗಿ ತಾಂತ್ರಿಕ ಜಯವೂ ಸಿಕ್ಕಿದೆ. ಡಿಸೆಂಬರ್ 4, ಗುರುವಾರ ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ 1777 ಎಕರೆ ಡಿನೋಟಿಫೈಗೆ ಒಪ್ಪಿಗೆ ಸೂಚಿಸಲಾಗಿದೆ.
ಕಾನೂನು ಮತ್ತು ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ. ಪಾಟೀಲ್ ಅವರು ಇಂದು ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟದ ಸಭೆಯ ನಿರ್ಣಯಗಳಿಗೆ ಸಂಬಂಧಿಸಿದಂತೆ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ಖಚಿತಪಡಿಸಿದರು.
2025 ಜುಲೈ 15ರಂದು ರೈತರೊಂದಿಗೆ ನಡೆದ ಸಭೆಯಲ್ಲಿ ಕೆಐಎಡಿಬಿ ಅಂತಿಮ ಅಧಿಸೂಚನೆ ರದ್ದುಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದರು. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರೈತರ 1777ಎಕರೆ ಡಿನೋಟಿಫೈಗೆ ಒಪ್ಪಿಗೆ ನೀಡಿದ್ದಾರೆ.
2025ರ ಡಿಸೆಂಬರ್ 2 ರಂದು ನಡೆದ ಸಭೆಯಲ್ಲಿ, “ದೇವನಹಳ್ಳಿಯ 13 ಗ್ರಾಮಗಳ 1,777 ಎಕರೆ ಭೂಸ್ವಾಧೀನ ಪ್ರಕ್ರಿಯೆಗೆ ರೈತರು ಮತ್ತು ಸಂಘಟನೆಗಳ ತೀವ್ರ ಪ್ರತಿರೋಧದ ನಂತರ ಸರ್ಕಾರವು ಜುಲೈ, 15, 2025 ರಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭೂಸ್ವಾಧೀನವನ್ನು ಸಂಪೂರ್ಣವಾಗಿ ಕೈಬಿಡಲಾಗುವುದು, ರೈತರ ಇಚ್ಛೆಯಂತೆ ಕೃಷಿ ಭೂಮಿಯನ್ನಾಗಿ ಮುಂದುವರೆಸಲಾಗುವುದು ಎಂದು ಘೋಷಿಸಿರುವುದರಿಂದ ಯಾವುದೇ ಷರತ್ತುಗಳಿಲ್ಲದೆ ಭೂ ಸ್ವಾಧೀನವನ್ನು ರದ್ದುಪಡಿಸಬೇಕೆಂದು” ರೈತರು ಸರ್ಕಾರವನ್ನು ಒತ್ತಾಯಿಸಿದರು
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕ್ರಿಕೆಟ್ ‘ದೇವರ’ ದಾಖಲೆ ಮುರಿದು ಮುನ್ನುಗ್ಗುತ್ತಿರುವ ಕೊಹ್ಲಿ
ಚನ್ನರಾಯಪಟ್ಟಣದ ಧರಣಿ ಸ್ಥಳದಲ್ಲಿ ನಡೆದ ಸಭೆಯಲ್ಲಿ ನೂರಾರು ರೈತರು ಮತ್ತು ಹೋರಾಟಗಾರರು ಭಾಗವಹಿಸಿದ್ದರು. “ಈ ಬಗ್ಗೆ ಕಳೆದ 1339 ದಿನಗಳಿಂದ ನಡೆಯುತ್ತಿರುವ ಧರಣಿ ಸ್ಥಳದಲ್ಲಿ ಸಭೆ ನಡೆಸಿದ ರೈತರು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಶಿಫಾರಾಸ್ಸಿನ ಪತ್ರದ ಬಗ್ಗೆ ಚರ್ಚಿಸಿದ್ದು ಶಾಶ್ವತ ವಿಶೇಷ ಕೃಷಿ ವಲಯ ( permanent special agricultural zone ) ಎಂದು ಘೋಷಿಸುವ ಮತ್ತು ಪಹಣಿಯಲ್ಲಿ ದಾಖಲಿಸುವ, ನಿಯಮಗಳನ್ನು ರೂಪಿಸಲು ಸಮಿತಿಯನ್ನು ರಚಿಸಲು ಸಲ್ಲಿಸಿರುವ ಪ್ರಸ್ತಾವನೆಗಳನ್ನು ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯು ತೀವ್ರವಾಗಿ ವಿರೋಧಿಸುತ್ತದೆ” ಎಂದರು.
ಭೂ ಸ್ವಾಧೀನ ರದ್ದತಿ ಆದೇಶ ಹೊರಡಿಸುವಂತೆ ಚನ್ನರಾಯಪಟ್ಟಣ ರೈತರಿಂದ ಸಿಎಂಗೆ ಆಗ್ರಹ
2025ರ ಅ.19 ರಂದು ದೊಡ್ಡಬಳ್ಳಾಪುರಕ್ಕೆ ತೆರಳುತ್ತಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದೇವನಹಳ್ಳಿಯಲ್ಲಿ ಭೇಟಿಯಾಗಿದ್ದ ರೈತರು, ಕೂಡಲೇ ಅಂತಿಮ ಅಧಿಸೂಚನೆ ಹೊರಡಿಸಬೇಕು ಎಂದು ಆಗ್ರಹಿಸಿದ್ದರು. ಬೆಂಗಳೂರು ಗ್ರಾಮಾಂತರ ಜಿಲ್ಲೆ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ಭೂ ಸ್ವಾಧೀನ ಕೈಬಿಟ್ಟಿರುವುದಾಗಿ ಮುಖ್ಯಮಂತ್ರಿ ಸಿದ್ದರಾಯಯ್ಯ ಘೋಷಿಸಿ ಮೂರು ತಿಂಗಳು ಕಳೆದರೂ, ಅಧಿಕೃತ ಆದೇಶ ಹೊರಡಿಸದಿರುವುದು ರೈತರ ಆಕ್ರೋಶಕ್ಕೆ ಕಾರಣವಾಗಿತ್ತು.
ಈಗಾಗಲೇ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿ (ಕೆಐಎಡಿಬಿ) ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು, ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಅವರನ್ನು ಭೇಟಿಯಾಗಿ ಬೇಡಿಕೆ ಮುಂದಿಟ್ಟಿರುವ ರೈತರು, ಸಿಎಂ ಸಿದ್ದರಾಮಯ್ಯ ಅವರಿಗೂ ಮನವಿ ಸಲ್ಲಿಸಿದ್ದಾರೆ. ಭೂ ಸ್ವಾಧೀನ ಕೈಬಿಟ್ಟಿರುವ ಕುರಿತು ಅಧಿಕೃತ ಆದೇಶಕ್ಕಾಗಿ ಒತ್ತಾಯಿಸಿದ್ದಾರೆ. ಭಾನುವಾರ (ಅ.19) ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ದೇವನಹಳ್ಳಿಗೆ ಆಗಮಿಸಿದ್ದ ಸಿದ್ದರಾಮಯ್ಯ ಅವರನ್ನು ಭೇಟಿಯಾದ ರೈತರ ನಿಯೋಗ, ಸರ್ಕಾರದ ಧೋರಣೆಯನ್ನು ಖಂಡಿಸಿದೆ. ಸರ್ಕಾರ ರೈತರಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳಲು ಕೂಡಲೇ ಭೂ ಸ್ವಾಧೀನ ರದ್ದತಿ ಬಗ್ಗೆ ಅಧಿಕೃತ ಆದೇಶ ಹೊರಡಿಸಬೇಕು, ಇಲ್ಲವಾದಲ್ಲಿ ಮತ್ತೊಮ್ಮೆ ಬೃಹತ್ ಮಟ್ಟದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದ್ದರು.





