ಮಂಡ್ಯ, ಮೈಸೂರು, ಕೊಡಗು, ಚಾಮರಾಜನಗರ ಭಾಗದ ರೈತರನ್ನು ಆರ್ಥಿಕವಾಗಿ ಅಭಿವೃದ್ಧಿ ಮಾಡಲು ಮಂಡ್ಯದ ವಿ.ಸಿ ಫಾರಂ ನಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲಾಗಿದೆ ಎಂದು ಕೃಷಿ ಮತ್ತು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಹೇಳಿದರು.
ಕೃಷಿ ಮತ್ತು ತೋಟಗಾರಿಕೆ ಇಲಾಖೆ, ಪಶು ಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳು ಜಲಾನಯನ ಅಭಿವೃದ್ಧಿ ಇಲಾಖೆ, ರೇಷ್ಮೆ, ಅರಣ್ಯ, ಮೀನುಗಾರಿಕೆ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ನಬಾರ್ಡ್ ಇವರುಗಳ ಸಂಯುಕ್ತಾಶ್ರಯದಲ್ಲಿ ನಗರದ ವಿ.ಸಿ ಫಾರಂ ಆವರಣದಲ್ಲಿ ಆಯೋಜಿಸಲಾಗಿದ್ದ “ಕೃಷಿ ಮೇಳ 2025” ಸಮಗ್ರ ಕೃಷಿಯಿಂದ ಸುಸ್ಥಿರತೆ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.
“ಪ್ರತಿ ವರ್ಷ ವಿ.ಸಿ ಫಾರಂ ನಲ್ಲಿ ಕೃಷಿ ಮೇಳ ಆಯೋಜನೆ ಮಾಡಿಕೊಂಡು ಬರಲಾಗುತ್ತಿದೆ ಸದರಿ ವರ್ಷ ಮಂಡ್ಯ ವಿಶ್ವವಿದ್ಯಾಲಯ ಸ್ಥಾಪನೆಯಾದ ನಂತರ ಮೊದಲ ಬೃಹತ್ ಕೃಷಿ ಮೇಳವನ್ನು ಆಯೋಜಿಸಲಾಗಿದೆ. ಕೃಷಿ ಮೇಳ 2025 ರಲ್ಲಿ ಹೆಚ್ಚಿನ ಕೃಷಿ ತಳಿಗಳು, ತಂತ್ರಜ್ಞಾನಗಳನ್ನು ಆಧುನಿಕ ಯಂತ್ರೋಪಕರಣಗಳನ್ನು ಮೇಳದಲ್ಲಿ ಇರಿಸಲಾಗಿದೆ” ಎಂದು ಹೇಳಿದರು.
“ಬೆಂಗಳೂರು ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆಯೋಜಿಸಲಾಗಿದ್ದ ಕೃಷಿ ಮೇಳದಲ್ಲಿ ಸುಮಾರು 50 ಲಕ್ಷಕ್ಕೂ ಹೆಚ್ಚು ಜನ ಭಾಗಿಯಾಗಿ ಯಶಸ್ವಿಗೊಳಿಸಿದರು. ಮುಂದಿನ ದಿನಗಳಲ್ಲಿ ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯ ಕೃಷಿ ಮೇಳದಲ್ಲಿ ದೊಡ್ಡ ಮಟ್ಟದಲ್ಲಿ ಜನರು ಭಾಗಿಯಾಗುತ್ತಾರೆ” ಎಂದು ತಿಳಿಸಿದರು.
“1939ರಲ್ಲಿ ಮೊದಲು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು 630 ಎಕ್ಕರೆ ಜಾಗದಲ್ಲಿ ಮಂಡ್ಯದಲ್ಲಿ ಕೃಷಿ ವಿಜ್ಞಾನಿಗಳ ಸಂಶೋಧನಾ ಕೇಂದ್ರವನ್ನು ತೆರೆದರು. ನಂತರ ರಾಜ್ಯದ 4 ಭಾಗದಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲಾಯಿತು. ರಾಜ್ಯದ ಎಲ್ಲ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಉತ್ತಮ ಕೊಡುಗೆ ಹಾಗೂ ಕಾರ್ಯ ಮಾಡುತ್ತ ಮುಂದೆ ಸಾಗುತ್ತಿವೆ” ಎಂದು ಅಭಿಪ್ರಾಯಪಟ್ಟರು.
“ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ರಾಜ್ಯದ 5 ನೇ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯವಾಗಿ ಹೊರಹೊಮ್ಮಿದೆ. ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆಯಾದ. ಮೊದಲ ವರ್ಷದಲ್ಲೇ ಯು.ಜಿ.ಸಿ ಮಾನ್ಯತೆ ಪಡೆದಿದೆ. ಶಿವಮೊಗ್ಗ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯಕ್ಕೆ 2008 ರಲ್ಲಿ ಅನುಮತಿ ದೊರೆತಿತ್ತು ಆದರೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ 2013 ರ ಅವಧಿಯಲ್ಲಿ ಶಿವಮೊಗ್ಗ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲಾಯಿತು” ಎಂದು ಹೇಳಿದರು.
“ಬೆಳಗಾವಿಯಲ್ಲಿ ಆದ ಬೆಳೆ ನಾಶಕ್ಕೆ ಎನ್ಡಿಆರ್ಎಫ್ ಪರಿಹಾರದ ಮೊತ್ತದ ಜೊತೆಗೆ ರಾಜ್ಯ ಸರ್ಕಾರ ಪರಿಹಾರವನ್ನು ನೀಡಿತು. ರಾಜ್ಯ ಕಬ್ಬು ಬೆಳೆಗಾರರ ಆರ್ಥಿಕ ಅಭಿವೃದ್ಧಿಗಾಗಿ ಟನ್ ಕಬ್ಬಿಗೆ ರೂ.50 ಅನ್ನು ಸರ್ಕಾರ ನೀಡುತ್ತಿದೆ. ರಾಜ್ಯ ಸರ್ಕಾರ ಬಡವರು, ರೈತರು, ಶ್ರಮಿಕರು, ಮಹಿಳೆಯರು ಮತ್ತು ಶೋಷಿತ ಸಮುದಾಯದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ” ಎಂದರು.
“ಫಿಲಿಪೈನ್ಸ್ ಅಂತರಾಷ್ಟ್ರೀಯ ರೈಸ್ ರಿಸರ್ಚ್ ಸೆಂಟರ್ ನೊಂದಿಗೆ ಒಡಂಬಡಿಕೆ ಮಾಡಿಕೊಂಡು ರೋಗನಿರೋಧಕ ಭತ್ತದ ತಳಿಗಳನ್ನು ನಮ್ಮಲ್ಲಿ ಬೆಳೆಯಲಾಗುವುದು. ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯದ ಪೀಠೋಪಕರಣಗಳ ಅಭಿವೃದ್ಧಿಗಾಗಿ ರೂ.100 ಕೋಟಿ ಮುಖ್ಯಮಂತ್ರಿಗಳು ಮಂಜೂರು ಮಾಡಿದ್ದಾರೆ. ಜಿಲ್ಲೆಯ ಜನತೆ ಹೇಗೆ ಕೃಷಿಯನ್ನು ಲಾಭದಾಯಕವಾಗಿ ಮಾಡಬೇಕು ಎಂಬುದರ ಕುರಿತಾಗಿ ಕೃಷಿ ಮೇಳ ಆಯೋಜಿಸಲಾಗಿದೆ ರೈತರು ಇದರಲ್ಲಿ ಭಾಗವಹಿಸಿ ಕೃಷಿ ಮೇಳದ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ” ಎಂದು ಹೇಳಿದರು.
ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಅಧ್ಯಕ್ಷತೆವಹಿಸಿ ಮಾತನಾಡಿ ಈ ಭಾಗಕ್ಕೆ ವಿಶ್ವವಿದ್ಯಾಲಯ ನೀಡಿರುವುದಕ್ಕೆ ಮುಖ್ಯಮಂತ್ರಿಗಳಿಗೆ ಕೃತಜ್ಞತೆ ತಿಳಿಸಿದರು. ಮಣ್ಣಿನ ಗುಣಮಟ್ಟವನ್ನು ಕಾಪಾಡುವ ಹಾಗೂ ಕಡಿಮೆ ನೀರು ಬಳಕೆ ಮಾಡಿ ಹೆಚ್ಚು ಇಳುವರಿ ಪಡೆಯಬಹುದು. ಕೃಷಿ ಮೇಳದಲ್ಲಿ ಅನೇಕ ಹೊಸ ತಳಿಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತಿದೆ ಇದನ್ನು ರೈತರು ತಮ್ಮ ಬೇಸಾಯದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ರೈತರ ಜೀವನವನ್ನು ಸುಧಾರಿಸುವುದು ಬಹಳ ಮುಖ್ಯ. ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಹೆಚ್ಚಿನ ಪ್ರಶಸ್ತ್ಯ ನೀಡಬೇಕು . ರೈತರು ಸಮಗ್ರ ಕೃಷಿ ಜೊತೆಗೆ ಉಪ ಉತ್ಪನ್ನ ಮಾಡುವುದು ತಾವು ಉತ್ಪಾದಿಸಿದ ಉತ್ಪನ್ನಗಳಿಗೆ ಮೌಲ್ಯವರ್ಧನೆ ಮಾಡಿ ಹೆಚ್ಚಿನ ಲಾಭ ಗಳಿಸಬೇಕು ಎಂದರು.
ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಅಭಿವೃದ್ಧಿ ಪಡಿಸಿದ ಐದು ಕೃಷಿ ತಳಿಗಳನ್ನು ಮತ್ತು 9 ತಾಂತ್ರಿಕತೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಿದರು. ಮೇಲುಕೋಟೆ ವಿಧಾನ ಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಕೃಷಿ ಕ್ಯಾಲೆಂಡರ್ ಅನ್ನು ಬಿಡುಗಡೆಗೊಳಿಸಿದರು.
ಕಾರ್ಯಕ್ರಮದಲ್ಲಿ ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಅಧ್ಯಕ್ಷ ಪಿ ಎನ್ ನರೇಂದ್ರಸ್ವಾಮಿ,ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ರವಿಕುಮಾರ್ ಗಣಿಗ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಎ.ಬಿ. ರಮೇಶ್ ಬಾಬು ಬಂಡಿಸಿದ್ದೇಗೌಡ, ಮೇಲುಕೋಟೆ ವಿಧಾನ ಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ, ವಿಧಾನ ಪರಿಷತ್ ಸದಸ್ಯ ಮಧು ಜಿ ಮಾದೇಗೌಡ, ಮೈ ಶುಗರ್ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಸಿ.ಡಿ ಗಂಗಾಧರ, ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ವಿಶೇಷಾಧಿಕಾರಿ ಡಾ.ಕೆ.ಎಂ ಹರಿಣಿ ಕುಮಾರ್, ರಾಜ್ಯ ಸಣ್ಣ ಕೈಗಾರಿಕೆಗಳ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಎಂ.ಡಿ.ಸಿ.ಸಿ ಬ್ಯಾಂಕ್ ಅಧ್ಯಕ್ಷ ಸಚಿನ್ ಚಲುವರಾಯಸ್ವಾಮಿ, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ.ಆರ್ ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕ್ಷಕ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.





