ಬಿಹಾರ ಚುನಾವಣೆಯ ಫಲಿತಾಂಶ ಬೆನ್ನಲ್ಲೇ ರಾಜ್ಯ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳು ಗರಿಗೆದರಿವೆ. ಶನಿವಾರವಷ್ಟೇ ದೆಹಲಿಗೆ ತೆರಳಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರನ್ನು ಭೇಟಿಯಾಗಿದ್ದರು.
ಇಂದು (ನ.17) ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರತ್ಯೇಕವಾಗಿ ಸಿಎಂ ಸಿದ್ದರಾಮಯ್ಯ ಭೇಟಿಯಾಗಿದ್ದಾರೆ. ಇಲ್ಲಿಗೆ ಬಹುತೇಕ ಸಚಿವ ಸಂಪುಟ ಪುನಾರಚನೆ ಆಗುವ ಲಕ್ಷಣಗಳು ಗೋಚರಿಸುತ್ತಿವೆ.
ಮಲ್ಲಿಕಾರ್ಜುನ ಖರ್ಗೆ ಭೇಟಿಗೂ ಮುನ್ನ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, “ನವೆಂಬರ್ 20ಕ್ಕೆ ನಮ್ಮ ಸರ್ಕಾರ ಎರಡೂವರೆ ವರ್ಷ ಪೂರೈಸಲಿದೆ. ಎಲ್ಲ ಶಾಸಕರಿಗೂ ಸಚಿವರಾಗಬೇಕು ಎನ್ನುವ ಬಯಕೆ ಇರುತ್ತದೆ. ಎಲ್ಲರೂ ಸಮರ್ಥರಿದ್ದಾರೆ” ಎನ್ನುವ ಮೂಲಕ ಸಂಪುಟ ಪುನಾರಚನೆಯ ಸುಳಿವನ್ನು ನೀಡಿದ್ದಾರೆ.
ಸಚಿವ ಸಂಪುಟದಲ್ಲಿ ಯಾರನ್ನು ತೆಗೆಯಬೇಕು, ಯಾರನ್ನು ಉಳಿಸಿಕೊಳ್ಳಬೇಕು ಹಾಗೂ ಹೊಸದಾಗಿ ಯಾವ ಶಾಸಕರಗೆ ಸಚಿವ ಸ್ಥಾನ ನೀಡಬೇಕು ಎಂಬುದರ ಬಗ್ಗೆ ಮೊದಲ ಸುತ್ತಿನ ಮಾತುಕತೆ ಇದಾಗಿದೆ ಎನ್ನುವ ಮಾಹಿತಿ ಮೂಲಗಳಿಂದ ತಿಳಿದುಬಂದಿದೆ.
ರಾಹುಲ್ ಗಾಂಧಿ ಅವರ ಜೊತೆ ಸಿದ್ದರಾಮಯ್ಯ ಕ್ಲೋಸ್ ಡೋರ್ ಮೀಟಿಂಗ್ ನಡೆಸಿದ ವೇಳೆಯಲ್ಲಿಯೇ ಸಂಪುಟ ಪುನಾರಚನೆಗೆ ರಾಹುಲ್ ಗಾಂಧಿ ಗ್ರೀನ್ ಸಿಗ್ನಲ್ ನೀಡಿದ್ದರು ಎನ್ನುವ ಮಾಹಿತಿ ಲಭ್ಯವಾಗಿತ್ತು. ಮತ್ತೊಮ್ಮೆ ದೆಹಲಿಗೆ ಬಂದು ಎಐಸಿಸಿ ಅಧ್ಯಕ್ಷರ ಜೊತೆ ಚರ್ಚಿಸಿ, ಬಳಿಕ ಸಂಪುಟ ಪುನಾರಚನೆ ಮಾಡಿ ಅಂತ ರಾಹುಲ್ ಗಾಂಧಿ ಸೂಚನೆ ನೀಡಿದ್ದರು ಎನ್ನಲಾಗಿದೆ. ಆ ಪ್ರಕಾರ ಇಂದು ಸಿದ್ದರಾಮಯ್ಯ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿದ್ದಾರೆ.
ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿಯಾದ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಶನಿವಾರದಿಂದ ದೆಹಲಿಯಲ್ಲೇ ಬೀಡು ಬಿಟ್ಟಿದ್ದಾರೆ. ಸಚಿವ ಸಂಪುಟ ಪುನಾರಚನೆ ತಡೆದು, ತಾವೇ ಮುಖ್ಯಮಂತ್ರಿಯಾಗಬೇಕು ಎನ್ನುವ ಇಂಗಿತವನ್ನು ಹೈಕಮಾಂಡ್ ಬಳಿ ಬಲವಾಗಿ ಪ್ರತಿಪಾದಿಸುವ ಸಾಧ್ಯತೆ ಇದೆ. ಆದರೆ ಬಿಹಾರ ಫಲಿತಾಂಶ ಗಮನಿಸಿದರೆ ಹೈಕಾಂಡ್ ಸಿದ್ದರಾಮಯ್ಯ ಅವರನ್ನು ಕೆಳಗಿಸುವ ಯೋಚನೆಯನ್ನು ಕನಸಿನಲ್ಲಿಯೂ ಮಾಡಲ್ಲ ಎನ್ನುತ್ತವೆ ಮೂಲಗಳು.





