ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸೌಧದ ನಿರ್ಮಾತೃ ದಿ. ಕೆಂಗಲ್ ಹನುಮಂತಯ್ಯ ಅವರ ಪುಣ್ಯತಿಥಿ ಅಂಗವಾಗಿ ಇಂದು ವಿಧಾನಸೌಧದ ಮುಂಭಾಗದಲ್ಲಿರುವ ಅವರ ಪ್ರತಿಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡಿ, ಪುಷ್ಪ ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ದಿವಂಗತ ಕೆಂಗಲ್ ಹನುಮಂತಯ್ಯ ನವರ ಮೊಮ್ಮಗನಾದ ಕೆಂಗಲ್ ಶ್ರೀಪಾದ ರೇಣು ಅವರು ಉಪಸ್ಥಿತರಿದ್ದು, ಮುಖ್ಯಮಂತ್ರಿಗಳ ಜೊತೆಗೂಡಿ ಪ್ರತಿಮೆಗೆ ಪುಷ್ಪಗುಚ್ಛ ಸಮರ್ಪಿಸಿದರು.
ಬೆಂಗಳೂರಿನ ಇಂದಿನ ಅಭಿವೃದ್ಧಿಗೆ ಕೆಂಗಲ್ ಹನುಮಂತಯ್ಯ ಕಾರಣ
ಕೆಂಗಲ್ ಹನುಮಂತಯ್ಯ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ವಿಧಾನಸೌಧದ ಆವರಣದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಡಿಸಿಎಂ ಡಿ ಕೆ ಶಿವಕುಮಾರ್ , “ಇಂದು ನಾವೆಲ್ಲರೂ ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರನ್ನು ಸ್ಮರಿಸುತ್ತಿದ್ದೇವೆ. ವಿಧಾನ ಸೌಧ ಕಟ್ಟಿದವರು ಕೆಂಗಲ್ ಹನುಮಂತಯ್ಯ ಅವರು, ವಿಕಾಸ ಸೌಧ ಕಟ್ಟಿದವರು ಎಸ್.ಎಂ ಕೃಷ್ಣ ಅವರು, ಬೆಂಗಳೂರನ್ನು ಕಟ್ಟಿದ್ದು ಕೆಂಪೇಗೌಡರು. ಇವೆಲ್ಲವೂ ಈ ನಾಯಕರು ಬಿಟ್ಟು ಹೋಗಿರುವ ಸಾಕ್ಷಿಗುಡ್ಡೆ” ಎಂದರು.
“ಅಂದಿನ ಕಾಲದಲ್ಲಿ ರಾಜಧಾನಿಯನ್ನಾಗಿ ಬೇರೆ ಪ್ರದೇಶವನ್ನು ಆಯ್ಕೆ ಮಾಡಿದ್ದರೆ, ಇಂದು ಬೆಂಗಳೂರು ಈ ಮಟ್ಟಕ್ಕೆ ಬೆಳೆಯಲು ಸಾಧ್ಯವಾಗುತ್ತಿರಲಿಲ್ಲ. ಬೆಂಗಳೂರಿನಲ್ಲಿರುವ ಹವಾಮಾನ ಕಂಡು ಇಡೀ ವಿಶ್ವದ ಜನ ಆಕರ್ಷಿತರಾಗುತ್ತಾರೆ. ಸಮುದ್ರದ ಪಕ್ಕದಲ್ಲಿನ ನಗರಗಳಿಗೆ ಆಗುತ್ತಿರುವ ಸಮಸ್ಯೆ ನೀವು ಗಮನಿಸಿದ್ದೀರಿ. ಬೆಂಗಳೂರು ದೇಶದಲ್ಲೇ ಅತ್ಯುತ್ತಮ ಸುರಕ್ಷಿತ ಪ್ರದೇಶ. ಇದಕ್ಕೆ ಮುನ್ನುಡಿ ಬರೆದವರು ಕೆಂಗಲ್ ಹನುಮಂತಯ್ಯನವರು. ನಮಗೆ ಅಧಿಕಾರ ಸಿಕ್ಕಾಗ ಇಂತಹ ಸಾಕ್ಷಿಗುಡ್ಡೆಗಳನ್ನು ಬಿಟ್ಟುಹೋಗಬೇಕು” ಎಂದು ತಿಳಿಸಿದರು.
ಐಟಿ-ಬಿಟಿ ಸಚಿವರಾದ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ಸೇರಿದಂತೆ ಹಲವು ಗಣ್ಯರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.





