ಮುಖ್ಯಮಂತ್ರಿ ಬದಲಾವಣೆ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೊಸ ನೇಮಕ ಹಾಗೂ ಸಚಿವ ಸಂಪುಟ ಪುನಾರಚನೆ ಸುತ್ತ ನಡೆಯುತ್ತಿರುವ ಬೆಳವಣಿಗೆಗಳ ಒಟ್ಟು ಕೇಂದ್ರವಾದ ನವೆಂಬರ್ ಕ್ರಾಂತಿ ಮೇಲೆಯೇ ರಾಜಕೀಯ ಆಸಕ್ತರ ಕಣ್ಣು ನೆಟ್ಟಿದೆ. ನ.20ಕ್ಕೆ ರಾಜ್ಯ ಸರ್ಕಾರಕ್ಕೆ ಎರಡೂವರೆ ವರ್ಷ ಪೂರೈಸಲಿದ್ದು, ಸಹಜವಾಗಿಯೇ ಕಾಂಗ್ರೆಸ್ನೊಳಗಿನ ವಿದ್ಯಮಾನಗಳು ಕುತೂಹಲ ಕೆರಳಿಸಿವೆ.
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಅವರು ನ.20ರೊಳಗೆ ಹೈಕಮಾಂಡ್ ಭೇಟಿ ಮಾಡುವ ಸಾಧ್ಯತೆ ಇದೆ ಎನ್ನುವಾಗಲೇ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಪ್ರಬಲ ಆಕಾಂಕ್ಷಿ ಸತೀಶ್ ಜಾರಕಿಹೊಳಿ ಸದ್ದಿಲ್ಲದೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನಾ) ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಿದ್ದಾರೆ. ಈ ಭೇಟಿ ತೀವ್ರ ಕುತೂಹಲ ಮೂಡಿಸಿದೆ.
ಸತೀಶ್ ಜಾರಕಿಹೊಳಿಯವರು ಸಿದ್ದರಾಮಯ್ಯ ಅವರ ಆಪ್ತವಲಯದ ಮುಂಚೂಣಿ ನಾಯಕರು. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೂ ಆಪ್ತರು. ಸಿಎಂ, ಡಿಸಿಎಂ ದೆಹಲಿ ಭೇಟಿಗೂ ಮುನ್ನವೇ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೈಕಮಾಂಡ್ನ ಎರಡನೇ ಲೈನ್ ನಾಯಕರನ್ನು ಭೇಟಿಯಾಗಿ ಪ್ರಸ್ತುತ ರಾಜ್ಯದ ವಿದ್ಯಮಾನಗಳ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗುತ್ತಿದೆ.
ನವೆಂಬರ್ ಕ್ರಾಂತಿ ಚರ್ಚೆಯ ನಡುವಲ್ಲೇ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ಭೇಟಿ ನೀಡಿದ್ದು, ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಬೇಕು ಎನ್ನುವ ಸಂದೇಶವನ್ನು ಹೈಕಮಾಂಡ್ಗೆ ಈ ಮೂಲಕ ತಿಳಿಸಿದ್ದಾರೆ ಎನ್ನುತ್ತವೆ ಮೂಲಗಳು. ಜೊತೆಗೆ ಸಚಿವ ಸಂಪುಟ ಪುನಾರಚನೆಗೂ ಸಲಹೆ ನೀಡಿದ್ದಾರೆ ಎನ್ನಲಾಗಿದೆ.
ಹಾಗೆಯೇ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಹೈಕಮಾಂಡ್ ಮುಂದಾದರೆ ತಾವೇ ಅಧಿಕಾರ ವಹಿಸಿಕೊಳ್ಳುವ ಇಚ್ಛೆಯನ್ನು ಸಹ ಜಾರಕಿಹೊಳಿ ವ್ಯಕ್ತಪಡಿಸಿದ್ದಾರೆಂದು ಎಂದು ಮೂಲಗಳು ಹೇಳಿವೆ. ಇನ್ನು, ಬಿ. ನಾಗೇಂದ್ರ ಅವರ ರಾಜೀನಾಮೆ ಮತ್ತು ಎಸ್ಟಿ ಸಮುದಾಯದ ಕೆ.ಎನ್. ರಾಜಣ್ಣ ಅವರ ವಜಾದ ನಂತರ ಎರಡು ಸಚಿವ ಸ್ಥಾನಗಳು ಖಾಲಿಯಾಗಿದ್ದು, ಸಚಿವರ ನೇಮಕಕ್ಕೆ ಸಿದ್ದರಾಮಯ್ಯ ಅವರಿಗೆ ಅವಕಾಶ ನೀಡುವಂತೆಯೂ ಸತೀಶ್ ಜಾರಕಿಹೊಳಿಯವರು ಹೈಕಮಾಂಡ್’ಗೆ ಮನವಿ ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರು ಸತೀಶ್ ಜಾರಕಿಹೊಳಿ ಅವರು ಸಿದ್ದರಾಮಯ್ಯ ಅವರ ಉತ್ತರಾಧಿಕಾರಿಯಾಗಲಿದ್ದಾರೆ ಎಂಬ ಹೇಳಿಕೆ ರಾಜ್ಯ ರಾಜಕಾರಣಲ್ಲಿ ಬಿರುಗಾಳಿ ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಈ ಎಲ್ಲ ರಾಜಕೀಯ ಬೆಳವಣಿಗೆಗೆಳ ಮಧ್ಯೆ ಸಚಿವ ಸತೀಶ್ ಜಾರಕಿಹೊಳಿ ಅವರು ದೆಹಲಿ ಪ್ರವಾಸ ಕೈಗೊಂಡು ಸುರ್ಜೇವಾಲಾ ಅವರ ಮನೆಗೆ ಭೇಟಿ ನೀಡಿರುವುದು ಪ್ರಸ್ತುತ ರಾಜ್ಯ ರಾಜಕಾರಣದ ಕಾವನ್ನು ಮತ್ತೆ ಬಿಸಿಯಾಗಿಸಿದೆ.
ಕಾಂಗ್ರೆಸ್ ಪಕ್ಷದಲ್ಲಿ ಪ್ರಬಲ ಹಿಡಿತ ಹೊಂದಿರುವ ಸಚಿವ ಸತೀಶ ಜಾರಕಿಹೊಳಿ ಅವರು ಪ್ರಭಾವಿ ನಾಯಕರಾಗಿಯೂ ಹೊರಹೊಮ್ಮಿದ್ದಾರೆ. ಪಕ್ಷದ ಹೈಕಮಾಂಡ್ನೊಂದಿಗೆ ನೇರ ಸಂಪರ್ಕ ಸಹ ಸಾಧಿಸಿದ್ದಾರೆ. ಒಟ್ಟಾರೆ ನವೆಂಬರ್ ಕ್ರಾಂತಿ ಆಗುತ್ತಾ? ಅದು ಇನ್ನೂ ಮುಂದಕ್ಕೆ ಹೋಗುತ್ತದಾ ಎಂಬುದು ನಿಗೂಢವಾಗಿಯೇ ಇದೆ. ಆದರೆ ಈ ಎಲ್ಲ ಬೆಳವಣಿಗೆಗಳು ಮುಂಬರುವ ದಿನಗಳಲ್ಲಿ ಹರಳುಗಟ್ಟಿ ಬದಲಾವಣೆಯ ಸ್ಫೋಟವೂ ಆಗಬಹುದು.

ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.




