ರಾಜ್ಯದಲ್ಲಿರುವ 101 ಪರಿಶಿಷ್ಟ ಜಾತಿಗಳ ವರ್ಗೀಕರಣ ಹಾಗೂ ಒಳಮೀಸಲಾತಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ ದಾಸ್ ಆಯೋಗದ ವರದಿ ಆಧರಿಸಿ 2025ರ ಆಗಸ್ಟ್ 19ರಂದು ರಾಜ್ಯ ಸಚಿವ ಸಂಪುಟ ಸಭೆ ಕೈಗೊಂಡಿರುವ ನಿರ್ಣಯಕ್ಕೆ ಆಕ್ಷೇಪಿಸಿ ಕೊರಚ, ಕೊರಮ, ಲಂಬಾಣಿ, ಭೋವಿ (ಕೊಲಂಭೋ) ಸಮುದಾಯಗಳು ಹೈಕೋರ್ಟ್ ಮೆಟ್ಟಿಲೇರಿವೆ.
ಈ ವಿಚಾರವಾಗಿ ಬಂಜಾರ, ಭೋವಿ, ಕೊರಮ, ಕೊರಚ ಸಮಾಜ ಕಲ್ಯಾಣ ಸಂಘದ ಶಾಮರಾವ್ ಕೆ. ಪವಾರ್ ಅರ್ಜಿ ಸಲ್ಲಿಸಿದ್ದು, ಅರ್ಜಿಯಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಕರ್ನಾಟಕ ರಾಜ್ಯ ಎಸ್ಸಿ-ಎಸ್ಟಿ ಆಯೋಗದ ಅಧ್ಯಕ್ಷರನ್ನು ಪ್ರತಿವಾದಿಯನ್ನಾಗಿ ಮಾಡಲಾಗಿದೆ. ಅರ್ಜಿಯು ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.
ನ್ಯಾ. ನಾಗಮೋಹನ ದಾಸ್ ಆಯೋಗ ಸಲ್ಲಿರುವ ವರದಿಯಲ್ಲಿನ ಜಾತಿವಾರು ವರ್ಗೀಕರಣವನ್ನು ಪರಿಷ್ಕರಿಸಿದ್ದ ಸರ್ಕಾರ 101 ಪರಿಶಿಷ್ಟ ಜಾತಿಗಳನ್ನು ಮೂರು ಗುಂಪುಗಳಾಗಿ ವಿಂಗಡಿಸಿ ಮೀಸಲಾತಿ ಹಂಚಿಕೆ ಮಾಡಿದೆ.
ಮಾದಿಗ (ಎಡಗೈ) ಮತ್ತು ಸಂಬಂಧಿತ ಜಾತಿಗಳು, ಹೊಲೆಯ (ಬಲಗೈ) ಮತ್ತು ಸಂಬಂಧಿತ ಜಾತಿಗಳು, ಅಲೆಮಾರಿ ಮತ್ತು ಸ್ಪೃಶ್ಯ ಜಾತಿಗಳು- ಹೀಗೆ ಮೂರು ವರ್ಗೀಕರಣ ಮಾಡುವ ನಿರ್ಧಾರವನ್ನು ಸಚಿವ ಸಂಪುಟದಲ್ಲಿ ಕೈಗೊಳ್ಳಲಾಗಿತ್ತು.
ಇದನ್ನೂ ಓದಿರಿ: ಒಳಮೀಸಲಾತಿ: ನೇಮಕಾತಿ ಆದೇಶಕ್ಕೆ ಹೈಕೋರ್ಟ್ ತಡೆ
ಅದರಂತೆ ಪರಿಶಿಷ್ಟ ಜಾತಿಗೆ ಇರುವ ಶೇ.17ರಷ್ಟು ಮೀಸಲಾತಿಯಲ್ಲಿ ಎಡಗೈ-ಬಲಗೈ ಸಮುದಾಯಗಳಿಗೆ ತಲಾ ಶೇ.6, ಕೊರಚ, ಕೊರಮ, ಭೋವಿ, ಲಂಬಾಣಿ, ಅಲೆಮಾರಿಗಳನ್ನು ಒಳಗೊಂಡ ಸ್ಪೃಶ್ಯ ಗುಂಪುಗಳಿಗೆ ಶೇ.5ರಷ್ಟು ಮೀಸಲಾತಿ ನಿಗದಿಪಡಿಸಲಾಗಿತ್ತು. ಈ ನಿರ್ಣಯವನ್ನು ಅರ್ಜಿಯಲ್ಲಿ ಪ್ರಶ್ನಿಸಲಾಗಿದೆ. “ಕೊಲಂಭೋಗಳಿಗೆ ಇನ್ನೂ ಹೆಚ್ಚಿನ ಪಾಲು ಸಿಗಬೇಕು ಎಂದು ಕಾನೂನು ಹೋರಾಟ ನಡೆಸಲಾಗುತ್ತಿದೆ” ಎಂದು ಮೂಲಗಳು ಹೇಳಿವೆ.
ಅಸ್ಪೃಶ್ಯ ಅಲೆಮಾರಿಗಳನ್ನು ಸ್ಪೃಶ್ಯರ ಗುಂಪಿಗೆ ಹಾಕಿರುವುದನ್ನು ಈಗಾಗಲೇ ಅಲೆಮಾರಿಗಳು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದಾರೆ. ಜಸ್ಟಿಸ್ ನಾಗಮೋಹನ ದಾಸ್ ಅವರು ಅಲೆಮಾರಿಗಳನ್ನು ಪ್ರವರ್ಗ-1ರಲ್ಲಿ ಇಟ್ಟು ಶೇ.1ರಷ್ಟು ಮೀಸಲಾತಿಯನ್ನು ಶಿಫಾರಸ್ಸು ಮಾಡಿದ್ದರು. ಆದರೆ ಬಲಾಢ್ಯರ ಗುಂಪಿಗೆ ನಮ್ಮನ್ನು ಸೇರಿಸಿರುವುದರಿಂದ ಯಾವುದೇ ಪಾಲು ದಕ್ಕದಂತಾಗಿದೆ ಎಂದು ಅಲೆಮಾರಿಗಳು ಈಗಾಗಲೇ ಹೈಕೋರ್ಟ್ನಲ್ಲಿ ದಾವೆ ಹೂಡಿದ್ದಾರೆ. ಪ್ರಕರಣವನ್ನು ಕೈಗೆತ್ತಿಕೊಂಡಿರುವ ಹೈಕೋರ್ಟ್, “ಸರ್ಕಾರ ನೇಮಕಾತಿ ಪ್ರಕ್ರಿಯೆಗಳನ್ನು ನಡೆಸಬಹುದು. ಆದರೆ ನೇಮಕಾತಿ ಆದೇಶ ಹೊರಡಿಸುವಂತಿಲ್ಲ” ಎಂದು ಸೂಚಿಸಿ, ಮಧ್ಯಂತರ ಆದೇಶ ನೀಡಿದೆ. ಒಟ್ಟಾರೆಯಾಗಿ ಒಳಮೀಸಲಾತಿ ಜಾರಿಯು ಗೊಂದಲದ ಗೂಡಾಗಿದೆ.





