ತೀವ್ರ ಕುತೂಹಲ ಮೂಡಿಸಿದ್ದ ಕಲಬುರಗಿ ಜಿಲ್ಲೆಯ ಚಿತ್ತಾಪುರದಲ್ಲಿನ ಆರ್ಎಸ್ಎಸ್ ಪಥಸಂಚಲನಕ್ಕೆ ಕರ್ನಾಟಕ ಹೈಕೋರ್ಟ್ನ ಕಲಬುರಗಿಯ ವಿಭಾಗೀಯ ಪೀಠ ಷರತ್ತುಬದ್ಧ ಅನುಮತಿ ನೀಡಿದೆ. RSS ಪಥಸಂಚಲನಕ್ಕೆ ಕಲಬುರಗಿ ಜಿಲ್ಲಾಡಳಿತ ಅನುಮತಿ ನೀಡಿದೆ.
ಅಕ್ಟೋಬರ್ 18ರಿಂದ ಆರ್ಎಸ್ಎಸ್ ಪಥಸಂಚಲನ ಪಾಲಿಟಿಕ್ಸ್ನ ಹಗ್ಗಜಗ್ಗಾಟ ನಡೆಯುತ್ತ ಬಂದಿದ್ದು, ಈಗ ತಾರ್ಕಿಕ ಅಂತ್ಯಕ್ಕೆ ಬಂದಿದೆ. ನ.16 (ಭಾನುವಾರ ) ಪಥಸಂಚಲನಕ್ಕೆ ಅವಕಾಶ ನೀಡಲಾಗಿದ್ದು, ಒಟ್ಟು 350 ಜನರು ಮಾತ್ರ ಪಥಸಂಚಲನದಲ್ಲಿ ಭಾಗಿಯಾಗಲು ಜಿಲ್ಲಾಡಳಿತ ಅನುಮತಿಸಿದೆ.
ಪಥಸಂಚನ ಅನುಮತಿ ನಿರಾಕಿಸಿದ್ದನ್ನು ಪ್ರಶ್ನಿಸಿ ಆರ್ಎಸ್ಎಸ್ನ ಮುಖಂಡ ಅಶೋಕ್ ಪಾಟೀಲ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಸಂಬಂಧ ಅರ್ಜಿ ವಿಚಾರಣೆ ನಡೆಸಿದ ಕಲಬುರಗಿ ಹೈಕೋರ್ಟ್ ಪೀಠದ ನ್ಯಾಯಮೂರ್ತಿ ಎಂ.ಜಿ.ಎಸ್ ಕಮಲ್ ಅವರಿದ್ದ ಏಕ ಸದಸ್ಯ ನ್ಯಾಯಪೀಠವು, ‘ಪಥಸಂಚಲನದಲ್ಲಿ 300 ಮಂದಿ ಗಣವೇಷಧಾರಿಗಳು ಹಾಗೂ 50 ಮಂದಿ ಘೋಷ್ ವೃಂದಕ್ಕೆ ಅವಕಾಶ ನೀಡಲಾಗಿದೆ’ ಎಂದು ಆದೇಶ ನೀಡಿ ಅರ್ಜಿ ಇತ್ಯರ್ಥಗೊಳಿಸಿದ್ದಾರೆ.
ಪ್ರಿಯಾಂಕ್ ಖರ್ಗೆ ಹೇಳಿದ್ದೇನು?
“ಯಾವ ಸಂಘಗಳೇ ಆಗಲಿ ಸಂವಿಧಾನದ ಮುಂದೆ ಯಾರೂ ದೊಡ್ಡವರಲ್ಲ, ಯಾರೂ ನಿಯಮಗಳಿಗೆ ಅತೀತರಲ್ಲ. ಸಂವಿಧಾನಕ್ಕೆ ತಲೆಬಾಗಿದರೆ ಮಾತ್ರ ಬದುಕು ಸುಂದರ. ಸಂವಿಧಾನಕ್ಕೆ ಸವಾಲು ಹಾಕಿದರೆ ಬದುಕು ದುಸ್ಥರ! ಆರ್ಎಸ್ಎಸ್ ಎಂಬ ಸಂಘಟನೆಗೆ ಈ ಸತ್ಯದ ಅರಿವಾಗಿದೆ ಎಂದು ಭಾವಿಸಿದ್ದೇನೆ” ಎಂದು ಚಿತ್ತಾಪುರ ಶಾಸಕ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯಿಸಿದ್ದಾರೆ.
ಎಕ್ಸ್ ತಾಣದಲ್ಲಿ ಬರೆದುಕೊಂಡಿರುವ ಅವರು, “ಸಂವಿಧಾನ, ಕಾನೂನುಗಳು ನಮಗೆ ಅನ್ವಯಿಸುವುದಿಲ್ಲ ಎಂಬಂತೆ ನಡೆದುಕೊಳ್ಳುತ್ತಿದ್ದ RSSಗೆ ಈಗ ಸಂವಿಧಾನದ ಶಕ್ತಿ ಅರ್ಥವಾಗಿದೆ. ಯಾವುದೇ ಸಂಘಗಳು, ವ್ಯಕ್ತಿಗಳು ಇದನ್ನು ಅರ್ಥೈಸಿಕೊಂಡು ನೀತಿ, ನಿಯಮಗಳಿಗೆ ಬದ್ಧರಾಗಿ ನಡೆಯಬೇಕು. ಸರ್ಕಾರ ಮತ್ತು ಕಲಬುರಗಿ ಜಿಲ್ಲಾಡಳಿತ ರೂಪಿಸಿರುವ ಮಾನದಂಡಗಳನ್ನು ಒಪ್ಪಿ, ನಿಯಮಗಳಿಗೆ ಅನುಸಾರವಾಗಿ ಆರ್ಎಸ್ಎಸ್ ತಮ್ಮ ಕಾರ್ಯಕ್ರಮ ನಡೆಸಬೇಕು ಇದರ ಹೊರತಾಗಿ ಯಾವುದೇ ಅತಿ ಬುದ್ದಿವಂತಿಕೆಗೂ ಅವಕಾಶವಿಲ್ಲ” ಎಂದಿದ್ದಾರೆ.
“300 ಜನರು ಮಾತ್ರ ಭಾಗವಹಿಸಬೇಕು. ಸರ್ಕಾರ ನಿಗದಿಪಡಿಸಿದ ಸ್ಥಳಗಳಲ್ಲಿ ಮಾತ್ರ ಅವಕಾಶ. ಚಿತ್ತಾಪುರದ ಹೊರಗಿನವರು ಭಾಗಿಯಾಗುವಂತಿಲ್ಲ. ಯಾವುದೇ ಅಹಿತಕರ ಘಟನೆಗಳಿಗೆ ಅವಕಾಶ ಮಾಡಿಕೊಡುವಂತಿಲ್ಲ. ಈ ನಿಯಮಗಳ ಮೂಲಕ ಸರ್ಕಾರ ತೋರಿದ ಉದಾರತೆಯನ್ನು, ಕಲಬುರಗಿ ಜಿಲ್ಲಾಡಳಿತ ತೋರಿದ ಸಹನೆಯನ್ನು ಗೌರವಿಸಿ ತಮ್ಮ ಕಾರ್ಯಕ್ರಮವನ್ನು ಪೂರೈಸಿಕೊಳ್ಳಬೇಕು” ಎಂದು ಕಿವಿಮಾತು ಹೇಳಿದ್ದಾರೆ.





