ಕರ್ನಾಟಕ ಗೃಹ ಮಂಡಳಿಯ ವತಿಯಿಂದ ಬೆಂಗಳೂರು ಸೂರ್ಯನಗರ -4 ನೇ ಹಂತದ ಬಡಾವಣೆಯ ಸಮಗ್ರ ಅಭಿವೃದ್ಧಿ ಯೋಜನೆಯಡಿ 75 ಎಕರೆಯಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಮತ್ತು ಕ್ರೀಡಾಂಗಣ ಸಂಕೀರ್ಣ 2350 ಕೋಟಿ ರೂ. ಯೋಜನಾ ಮೊತ್ತದಲ್ಲಿ ಅನುಷ್ಠಾನಗೊಳಿಸಲು ಸಂಪುಟ ಒಪ್ಪಿಗೆ ನೀಡಿದೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ಸಂಪುಟ ಸಭೆಯ ನಂತರ ಈ ಕುರಿತು ಮಾತನಾಡಿದ ಅವರು, ಇದೊಂದು ಮಹತ್ವದ ಯೋಜನೆ ಆಗಿದೆ. 80 ಸಾವಿರ ಆಸನಗಳ ವ್ಯವಸ್ಥೆಯ ಕ್ರಿಕೆಟ್ ಕ್ರೀಡಾಂಗಣ, 24 ವಿವಿಧ ಒಳಾಂಗಣ ಮತ್ತು ಹೊರಾಂಗಣ ಕ್ರೀಡೆಗಳು ಹಾಗೂ 3000 ಆಸನ ಗಳ ಸಮಾವೇಶ ಸಭಾಂಗಣ ಸೇರಿ ವಿಶ್ವ ದರ್ಜೆಯ ಸೌಲಭ್ಯ ಇಲ್ಲಿ ಇರಲಿದ್ದು, ದೇಶದ ಅತಿ ದೊಡ್ಡ ಕ್ರೀಡಾಂಗಣ ಸಾಲಿಗೆ ಸೇರಲಿದೆ ಎಂದು ತಿಳಿಸಿದರು.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಮಿತಿ ಮೀರಿದ ಭ್ರಷ್ಟಾಚಾರ ನೈತಿಕತೆಯ ಅಧಃಪತನದ ಸಂಕೇತವೇ?
ಸದರಿ ಯೋಜನೆ ಸಂಬಂಧ ಆಗಸ್ಟ್ 8 ರಂದು ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಯವರ ಅಧ್ಯಕ್ಷ ತೆಯಲ್ಲಿ ನಡೆದ ಸಭೆಯಲ್ಲಿ ಪ್ರಸ್ತಾವನೆ ತಯಾರಿಸಿ ಸಚಿವ ಸಂಪುಟ ಸಭೆಗೆ ಮಂಡಿಸಲು ಸೂಚಿಸಲಾಗಿತ್ತು.
ಅದರಂತೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಸದರಿ ಯೋಜನೆಯ ಪ್ರಸ್ತಾವನೆಯನ್ನು ಮಂಡಿಸಲಾಗಿ ಸಚಿವ ಸಂಪುಟದ ಸಭೆಯಲ್ಲಿ ತಾತ್ವಿಕ ಅನುಮೋದನೆ ದೊರೆತಿದೆ ಎಂದು ಹೇಳಿದರು.





