ಹಿರಿಯ ಪೊಲೀಸ್ ಅಧಿಕಾರಿ ಡಿಜಿಪಿ ರಾಮಚಂದ್ರ ರಾವ್ ಅವರ ಅಶ್ಲೀಲ ವಿಡಿಯೋ ವೈರಲ್ ಆಗಿದೆ. ಕಚೇರಿಯಲ್ಲಿ ಪೊಲೀಸ್ ಸಮವಸ್ತ್ರದಲ್ಲಿರುವ ಈ ವಿಡಿಯೋ ಸುಮಾರು ಒಂದು ವರ್ಷ ಹಳೆಯದ್ದು ಎಂದು ಹೇಳಲಾಗಿದೆ.
ಸದ್ಯ ಡಿಸಿಆರ್ಇ ಡಿಜಿಪಿಯಾಗಿ ಕಾರ್ಯನಿರ್ವಹಿಸುತ್ತಿರುವ ರಾಮಚಂದ್ರ ರಾವ್ ಅವರ ಪುತ್ರಿ ರನ್ಯಾರಾವ್ ಈ ಹಿಂದೆ ಚಿನ್ನ ಕಳ್ಳಸಾಗಾಣಿಕೆ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದರು. ಈ ವೇಳೆ ಡಿಜಿಪಿ ಹೆಸರೂ ತಳಕು ಹಾಕಿಕೊಂಡಿತ್ತು. ಈ ಪ್ರಕರಣದಲ್ಲಿ ರಾಮಚಂದ್ರ ರಾವ್ ಕೂಡಾ ಶಾಮೀಲಾಗಿದ್ದಾರೆಯೇ ಎಂಬ ಬಗ್ಗೆ ತನಿಖೆಗೆ ಸೂಚಿಸಲಾಗಿತ್ತು.
ಇದನ್ನು ಓದಿದ್ದೀರಾ? ರನ್ಯಾ ರಾವ್ ಪ್ರಕರಣ | ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಪಾತ್ರ ಬಗ್ಗೆ ತನಿಖೆಗೆ ಸರ್ಕಾರ ಸಮಿತಿ ರಚನೆ
ಇದೀಗ ಡಿಜಿಪಿ ರಾಮಚಂದ್ರ ರಾವ್ ಅವರ ಅಶ್ಲೀಲ ವಿಡಿಯೋ ವೈರಲ್ ಆಗಿದ್ದು, ಈ ಆರೋಪವನ್ನು ರಾಮಚಂದ್ರ ರಾವ್ ತಳ್ಳಿಹಾಕಿದ್ದಾರೆ. “ಇದು ಎಐ ವಿಡಿಯೋ, ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ. ನಾನು ಈ ವಿಡಿಯೋ ನೋಡಿದ್ದು, ಇದು ನನ್ನದಲ್ಲ” ಎಂದು ಹೇಳಿಕೊಂಡಿದ್ದಾರೆ.
“ಈ ಕಾಲದಲ್ಲಿ ಏನು ಬೇಕಾದರೂ ಮಾಡುವ ಸಾಧ್ಯತೆಯಿದೆ. ಎಂಟು ವರ್ಷಗಳ ಹಿಂದೆ ನಾನು ಬೆಳಗಾವಿಯಲ್ಲಿದ್ದೆ, ಇದರ ಬಗ್ಗೆ ನನ್ನ ವಕೀಲರ ಜತೆ ಮಾತಾನಾಡುತ್ತೇನೆ. ಈ ಬಗ್ಗೆ ತನಿಖೆ ಆಗಬೇಕು. ಗೃಹ ಸಚಿವರಿಗೆ ಈ ಬಗ್ಗೆ ಮಾಹಿತಿ ನೀಡಲಿರುವೆ” ಎಂದಿದ್ದಾರೆ.
ಇನ್ನು ಗೃಹ ಸಚಿವ ಪರಮೇಶ್ವರ್ ಬಳಿ ಮಾತನಾಡಲು ರಾಮಚಂದ್ರ ರಾವ್ ಅವರು ಸಚಿವರ ನಿವಾಸಕ್ಕೆ ತೆರಳಿದ್ದು, ಭೇಟಿ ಮಾಡಲು ಪರಮೇಶ್ವರ್ ನಿರಾಕರಿಸಿದ್ದಾರೆ.
ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, “ವಿಚಾರಣೆ ನಡೆಸಿ ಶಿಸ್ತುಕ್ರಮಕೈಗೊಳ್ಳುತ್ತೇವೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ” ಎಂದು ಹೇಳಿದ್ದಾರೆ.
ರಾಮಚಂದ್ರ ರಾವ್ ಯಾರು?
ಕರ್ನಾಟಕ ಕೇಡರ್ನ ಐಪಿಎಸ್ ಅಧಿಕಾರಿಯಾಗಿರುವ ಕೆ. ರಾಮಚಂದ್ರ ರಾವ್ ಅವರು ಈ ಹಿಂದೆ ಈ ಹಿಂದೆ ಕರ್ನಾಟಕ ರಾಜ್ಯ ಪೊಲೀಸ್ ವಸತಿ ನಿಗಮ ಲಿಮಿಟೆಡ್ನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಮತ್ತು ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಗಿ ಸೇವೆ ಸಲ್ಲಿಸಿದವರು. ಹಾಗೆಯೇ 2023ರಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಸೌಕರ್ಯ ಅಭಿವೃದ್ಧಿ ನಿಗಮ ಲಿಮಿಟೆಡ್ನ ಡಿಜಿಪಿ ಮತ್ತು ಅಧ್ಯಕ್ಷ ಮತ್ತು ಎಂಡಿ ಆಗಿ ಬಡ್ತಿ ಪಡೆದಿದ್ದರು. ಅದಾದ ಬಳಿಕ ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯದ ಡಿಜಿಪಿಯಾಗಿ ನೇಮಕಗೊಂಡಿದ್ದರು.
ಈ ಹಿಂದೆ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಡಿಜಿಪಿ ಮಲಮಗಳು ರನ್ಯಾ ರಾವ್ ಸಿಕ್ಕಿಬಿದ್ದಿದ್ದು, ರಾಮಚಂದ್ರ ರಾವ್ ಭಾಗಿಯಾಗಿರುವ ಶಂಕೆಯೂ ವ್ಯಕ್ತವಾಗಿತ್ತು. ಈ ಹಿನ್ನೆಲೆ 2025ರ ಮಾರ್ಚ್ನಲ್ಲಿ ರಾವ್ ಅವರನ್ನು ಕಡ್ಡಾಯ ರಜೆಯ ಮೇರೆಗೆ ಕಳುಹಿಸಲಾಗಿತ್ತು.





