ಧರ್ಮಸ್ಥಳದಲ್ಲಿ ಸಂಭವಿಸಿರುವ 74 ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಎಫ್ಐಆರ್ ದಾಖಲಿಸಿರುವ ವಿಚಾರವಾಗಿ ಕರ್ನಾಟಕ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ. ಸರ್ಕಾರವು ನ್ಯಾಯಾಲಯದಲ್ಲಿ ಇರುವ ದಾಖಲೆಗಳನ್ನು ಪಡೆದುಕೊಂಡು, ಅಭಿಪ್ರಾಯ ತಿಳಿಸುವಂತೆ ಸೂಚಿಸಿದೆ.
ಸೌಜನ್ಯ ತಾಯಿ ಕುಸುಮಾವತಿ ಅವರು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದು, “ಧರ್ಮಸ್ಥಳದಲ್ಲಿ ಘಟಿಸಿರುವ 74 ಅಸಹಜ ಸಾವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಎಫ್ಐಆರ್ ದಾಖಲಿಸಬೇಕು ಮತ್ತು ಎಸ್ಐಟಿ ತನಿಖೆಗೆ ಸೂಚಿಸಬೇಕು” ಎಂದು ಮನವಿ ಮಾಡಿದ್ದರು.
ಅವರ ಅರ್ಜಿಯನ್ನು ಹೈಕೋರ್ಟ್ ಮುಖ್ಯನ್ಯಾಯಮೂರ್ತಿ ವಲ್ಲೂರಿ ಕಾಮೇಶ್ವರ್ ರಾವ್ ಅವರ ಪೀಠವು ಆಲಿಸಿದೆ. ನ್ಯಾಯಾಲಯದಲ್ಲಿ ಕುಸುಮಾವತಿ ಪರವಾಗಿ ವಾದ ಮಂಡಿಸಿದ ಹಿರಿಯ ವಕೀಲ ಎಸ್ ಬಾಲನ್, “ಧರ್ಮಸ್ಥಳದ ಪೋಲೀಸ್ ಠಾಣಾ ವ್ಯಾಪ್ತಿಯೊಂದರಲ್ಲೇ 74 ಅಸಹಜ ಸಾವುಗಳು ನಡೆದಿರುವುದಾಗಿ ವರದಿಯಾಗಿದೆ. ಈ ಪ್ರಕರಣಗಳ ತನಿಖೆ ಮಾಡಲೆಂದೇ ರಾಜ್ಯ ಸರ್ಕಾರ ಎಸ್ಐಟಿ ರಚಿಸಿದೆ. ಆದರೆ, ಎಸ್ಐಟಿ ಕೇವಲ ಒಂದು ಎಫ್ಐಆರ್ ದಾಖಲಿಸಿದೆ. ಉಳಿದ 74 ಕೊಲೆ, ನಾಪತ್ತೆ, ಸಾವು ಪ್ರಕರಣಗಳಿಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿಲ್ಲ. ಇದು ಸರಿಯಾದ ಕ್ರಮವಲ್ಲ” ಎಂದು ನ್ಯಾಯಾಲಯದ ಗಮನಕ್ಕೆ ತಂದಿದ್ದಾರೆ.
ಅವರ ವಾದಕ್ಕೆ ಪ್ರತಿವಾದ ಮಂಡಿಸಿದ ಸರ್ಕಾರದ ಪರ ವಕೀಲರು, “ಸರ್ಕಾರಕ್ಕೆ ಇನ್ನೂ ಪ್ರಕರಣದ ದಾಖಲೆಗಳನ್ನು ಸಲ್ಲಿಸಿಲ್ಲ. ದಾಖಲೆ ಇಲ್ಲದೇ ಸರ್ಕಾರ ಅಭಿಪ್ರಾಯ ಹೇಳಲು ಹೇಗೆ ಸಾಧ್ಯ?” ಎಂದಿದ್ದಾರೆ.
ವಾದ-ಪ್ರತಿವಾದ ಆಲಿಸಿದ ಪೀಠವು, “ಪ್ರಕರಣ ಇರುವುದು 74 ಅಸಹಜ ಸಾವುಗಳಿಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿಲ್ಲ ಎಂಬುದರ ಕುರಿತು. ಸರ್ಕಾರವು ನ್ಯಾಯಾಲಯದಲ್ಲಿ ಲಭ್ಯವಿರುವ ದಾಖಲೆಯನ್ನೇ ಪಡೆದುಕೊಂಡು ಅಭಿಪ್ರಾಯ ಸಲ್ಲಿಸಬೇಕು” ಎಂದು ಸೂಚಿಸಿದ್ದಾರೆ. ಅರ್ಜಿ ವಿಚಾರಣೆಯನ್ನು ಫೆಬ್ರವರಿ 03ಕ್ಕೆ ಮಂದೂಡಿದ್ದಾರೆ.




