ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲ ಅಧಿವೇಶನ ಆರಂಭವಾಗಿ ಮೂರನೇ ದಿನಕ್ಕೆ ಕಾಲಿಟ್ಟಿದೆ. ಸರ್ಕಾರದ ವಿರುದ್ಧ ಮುಗಿಬಿಳಲು ಪ್ರತಿಪಕ್ಷಗಳು ಸಜ್ಜಾಗಿವೆ. ಅವಿಶ್ವಾಸ ನಿರ್ಣಯ ಮಂಡಿಸುವ ಬಗ್ಗೆಯೂ ಚರ್ಚೆ ನಡೆದಿದೆ. ಇತ್ತ ವಿಪಕ್ಷಗಳನ್ನು ಹೇಗೆ ಎದುರಿಸಬೇಕು ಮತ್ತು ಆಂತರಿಕ ವಿಚಾರಗಳ ಬಗ್ಗೆ ಹೇಗೆ ನಡೆದುಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಶಾಸಕರಿಗೆ ಪಾಠ ಮಾಡಿದ್ದಾರೆ.
ಬೆಳಗಾವಿಯ ಖಾಸಗಿ ಹೋಟೆಲ್ನಲ್ಲಿ ಮಂಗಳವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಸಿಎಂ ಸಿದ್ದರಾಮಯ್ಯ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರು ಅಧಿಕಾರ ಬದಲಾವಣೆ ಬಗ್ಗೆ ಮಾತನಾಡಿರುವುದು ಪಕ್ಷದೊಳಗೆ ಅದರಲ್ಲೂ ಡಿ ಕೆ ಶಿವಕುಮಾರ್ ಬಣದ ನಾಯಕರಿಗೆ ತೀವ್ರ ಬೇಸರ ತರಿಸಿದೆ.
ಈ ಸಂದರ್ಭದಲ್ಲಿ ಅಧಿಕಾರ ಹಂಚಿಕೆಯ ಸೂಕ್ಷ್ಮ ವಿಷಯದ ಬಗ್ಗೆ ಯಾವುದೇ ಸಾರ್ವಜನಿಕ ಅಥವಾ ಆಂತರಿಕ ಹೇಳಿಕೆಗಳನ್ನು ನೀಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಪಕ್ಷದ ಶಾಸಕರಿಗೆ ಎಚ್ಚರಿಕೆ ಮಾತುಗಳನ್ನಾಡಿದ್ದಾರೆ. ಮಾಧ್ಯಮಗಳ ಮುಂದೆ ಶಾಸಕರು ತಮ್ಮ ಮನಸೋ ಇಚ್ಛೆ ಹೇಳಿಕೆಗಳನ್ನು ನೀಡುವುದರಿಂದ ಪಕ್ಷ ಮತ್ತು ಸರ್ಕಾರದೊಳಗೆ ಅನಗತ್ಯ ಗೊಂದಲ ಉಂಟಾಗುತ್ತದೆ. ಇನ್ಮುಂದೆ ಹೀಗಾಗಬಾರದು ಎಂದು ಸೂಚಿಸಿದ್ದಾರೆ ಎನ್ನಲಾಗಿದೆ. ಯತೀಂದ್ರ ಅವರಿಗೂ ವೈಯಕ್ತಿಕವಾಗಿ ಸಿದ್ದರಾಮಯ್ಯ ಅವರು ಇನ್ಮುಂದೆ ಸಿಎಂ ಬದಲಾವಣೆ ಸುತ್ತ ಹೇಳಿಕೆ ನೀಡದಂತೆ ಸೂಚಿಸಿದ್ದಾರೆ.
ಸರ್ಕಾರವು ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷಗಳನ್ನು ಸಮರ್ಥವಾಗಿ ಎದುರಿಸಲು ತಯಾರಿ ನಡೆಸುತ್ತಿರುವ ಸಮಯದಲ್ಲಿ ನಾಯಕತ್ವದ ಪ್ರಶ್ನೆಯು ಸಾರ್ವಜನಿಕ ಪ್ರದರ್ಶನವಾಗಬಾರದು ಎಂದು ಸಿದ್ದರಾಮಯ್ಯ ಒತ್ತಿ ಹೇಳಿದ್ದಾರೆ ಎಂದು ಸಭೆಯ ಮೂಲಗಳು ತಿಳಿಸಿವೆ.
ಉತ್ತರ ಕರ್ನಾಟಕ ಭಾಗದ ಜನರ ಸಮಸ್ಯೆಗಳು ಮತ್ತು ನಮ್ಮ ಸದಸ್ಯರು ಅವುಗಳನ್ನು ಶಾಸಕಾಂಗದಲ್ಲಿ ಹೇಗೆ ಪರಿಣಾಮಕಾರಿಯಾಗಿ ಪ್ರಸ್ತುತಪಡಿಸಬೇಕು ಎಂಬುದರ ಬಗ್ಗೆ ಸಿಎಂ ಶಾಸಕರಿಗೆ ಮನವರಿಕೆ ಮಾಡಿದ್ದಾರೆ. “ಬಿಜೆಪಿಯವರ ಆರ್ಭಟಕ್ಕೆ ಮಣಿಯಬೇಡಿ. ಅವರಿಗೆ ಮಾತಿನಲ್ಲೇ ಸರಿಯಾಗಿ ಚಾಟಿ ಬೀಸಿ. ಸಚಿವರ ಮಾತಿನ ವೇಳೆ ಬೆಂಬಲಕ್ಕೆ ನಿಲ್ಲಿ” ಎಂದು ಸಿಎಂ ಸಲಹೆ ಕೊಟ್ಟಿದ್ದಾರೆ.
“ಯಾವುದೇ ಕಾರಣಕ್ಕೂ ಬಿಜೆಪಿಯವರ ಕೈ ಮೇಲಾಗದಂತೆ ನೋಡಿಕೊಳ್ಳಿ. ಎಲ್ಲ ವಿಚಾರಗಳಲ್ಲೂ ನೀವು ಅಗ್ರೆಸ್ಸೀವ್ ಆಗಿರಿ. ಇಲಾಖಾವಾರು ಸಚಿವರು ಸರಿಯಾಗಿ ಉತ್ತರಿಸಿ. ವಿಷಯ ಅರ್ಥ ಮಾಡಿಕೊಳ್ಳದೇ ಪೇಚಿಗೆ ಸಿಲುಕಬೇಡಿ. ಯಾರೂ ಸದನಕ್ಕೆ ಗೈರಾಗಬೇಡಿ, ಎಲ್ಲರೂ ಹಾಜರಾಗಿ” ಎಂದು ಸಿಎಂ ಹೇಳಿದ್ದಾರೆ.
ಸಿಎಲ್ಪಿ ಸಭೆ ಬಳಿಕ ಮಾತನಾಡಿದ ಮಾಜಿ ಸಚಿವ ಕೆ.ಎನ್. ರಾಜಣ್ಣ, “ಉತ್ತರ ಕರ್ನಾಟಕ ಸಮಸ್ಯೆ ಬಗ್ಗೆ ಚರ್ಚೆ, ಸದನದಲ್ಲಿ ಹೇಗೆ ಮಾತನಾಡಬೇಕೆಂದು ಚರ್ಚೆ ನಡೆಯಿತು. ಸಚಿವರು, ಶಾಸಕರಿಗೆ ಸಿಎಂ ಸೂಚನೆ ಕೊಟ್ಟಿದ್ದಾರೆ. ಪ್ರತಿಪಕ್ಷಗಳನ್ನು ಹೇಗೆ ಎದುರಿಸಬೇಕಂತ ಕೊಟ್ಟಿದ್ದಾರೆ. ಈ ವೇಳೆ ಶಾಸಕರು ಮುಕ್ತ ಅಭಿಪ್ರಾಯ ಹೊರಹಾಕಿದ್ದಾರೆ. ಅದು ಬಿಟ್ಟು ಬೇರೆ ವಿಶೇಷ ಚರ್ಚೆ ನಡೆದಿಲ್ಲ” ಎಂದರು.
ಮತ್ತೊಂದೆಡೆ ಬೆಳಗಾವಿಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಕೂಡ ನಡೆಯಿತು. ಖಾಸಗಿ ಹೋಟೆಲ್ನಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಶಾಸಕರು, ಪರಿಷತ್ ಸದಸ್ಯರು ಭಾಗಿಯಾಗಿದ್ದರು. ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್ ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ನಡೆದ ಸಭೆಗೆ ಬಿಜೆಪಿ ರೆಬೆಲ್ ಶಾಸಕ ರಮೇಶ್ ಜಾರಕಿಹೊಳಿ ಗೈರಾಗಿದ್ದರು. ಉಳಿದಂತೆ ರಮೇಶ್ ಜಾರಕಿಹೊಳಿ ಜೊತೆ ಗುರುತಿಸಿಕೊಂಡಿರುವ ಶಾಸಕ ಬಿಪಿ ಹರೀಶ್ ಸೇರಿ ಶಾಸಕರು ಉಪಸ್ಥಿತರಿದ್ದರು.





