ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಪ್ರಕರಣಗಳ ಸುಳಿವನ್ನು ಸರ್ಕಾರಕ್ಕೆ ನೀಡಿದರವರಿಗೆ ಆರೋಗ್ಯ ಇಲಾಖೆಯು ಒಂದು ಲಕ್ಷ ರೂಪಾಯಿ ಬಹುಮಾನವನ್ನು ನೀಡಲಿದೆ. ಈ ಹಿಂದೆ 50 ಸಾವಿರ ರೂಪಾಯಿ ಬಹುಮಾನ ನೀಡಲಾಗುತ್ತಿತ್ತು. ಆದರೆ ಈಗ ಈ ಮೊತ್ತವನ್ನು ಒಂದು ಲಕ್ಷ ರೂಪಾಯಿಗೆ ಹೆಚ್ಚಿಸಲಾಗಿದೆ.
ರಾಜ್ಯದಲ್ಲಿ ಕಳೆದ ಕೆಲವು ವರ್ಷಗಳಿಂದ ಭ್ರೂಣ ಹತ್ಯೆ ಪ್ರಕರಣಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದೆ. ಅದರಲ್ಲೂ ಮುಖ್ಯವಾಗಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣಗಳು ಅಧಿಕವಾಗಿದೆ. ಈ ಭ್ರೂಣ ಲಿಂಗ ಪತ್ತೆ ಮಾಡುವುದು ಮತ್ತು ಹತ್ಯೆ ಮಾಡುವುದನ್ನು ತಡೆಯುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯು ಈ ಯೋಜನೆಯನ್ನು ರೂಪಿಸಿದೆ.
ಭ್ರೂಣ ಲಿಂಗ ಪತ್ತೆ ಮತ್ತು ಹತ್ಯೆ ಮಾಡಲಾಗುತ್ತಿದ್ದರೆ ಇದರ ಬಗ್ಗೆ ಜನರು ಇಲಾಖೆಗೆ ಸುಳಿವು ನೀಡಬಹುದು. ಸುಳಿವು ನೀಡಿದವರಿಗೆ ಬರೋಬ್ಬರಿ ಒಂದು ಲಕ್ಷ ರೂಪಾಯಿ ಬಹುಮಾನ ನೀಡಲಾಗುತ್ತದೆ. ಹಾಗೆಯೇ ಸುಳಿವು ನೀಡಿದವರ ಮಾಹಿತಿಯೂ ಕೂಡಾ ಗೌಪ್ಯವಾಗಿರಿಸಲಾಗುತ್ತದೆ ಎಂದು ಈ ಹಿಂದೆಯೇ ಆರೋಗ್ಯ ಇಲಾಖೆ ತಿಳಿಸಿದೆ.
ಇದನ್ನು ಓದಿದ್ದೀರಾ? ಬೆಂಗಳೂರು | ಸರ್ಕಾರಿ ಆಸ್ಪತ್ರೆಯ ಶೌಚಾಲಯದಲ್ಲಿ ಸಿಕ್ಕಿದ್ದ ಹೆಣ್ಣು ಭ್ರೂಣದ ತಾಯಿ ಪತ್ತೆ
ಇನ್ನು ಗರ್ಭಪೂರ್ವ ಮತ್ತು ಪ್ರಸವಪೂರ್ವ ಭ್ರೂಣ ಲಿಂಗ ಪತ್ತೆ ಕಾಯ್ದೆ (ಪಿಪಿಪಿಎನ್ಡಿಟಿ) ಅನುಷ್ಠಾನಕ್ಕೆ ಸಂಬಂಧಿಸಿದಂತೆ ಗುಪ್ತ ಕಾರ್ಯಾಚರಣೆಯು ಯಶಸ್ವಿಯಾದರೆ ಈ ಬಗ್ಗೆ ಮಾಹಿತಿ ನೀಡಿದವರಿಗೆ ಈ ಬಹುಮಾನವನ್ನು ನೀಡಲಾಗುತ್ತದೆ.
ಒಟ್ಟು ಒಂದು ಲಕ್ಷ ರೂಪಾಯಿ ಬಹುಮಾನದಲ್ಲಿ 50 ಸಾವಿ ರೂಪಾಯಿಯನ್ನು ರಾಷ್ಟ್ರೀಯ ಆರೋಗ್ಯ ಅಭಿಯಾನದಿಂದ ಮತ್ತು ಇನ್ನುಳಿದ 50 ಸಾವಿರ ರೂಪಾಯಿ ಮೊತ್ತವನ್ನು ಆಯಾ ಜಿಲ್ಲೆಗಳಲ್ಲಿ ಸಂಗ್ರಹವಾಗಿರುವ ಪಿಪಿಪಿಎನ್ಡಿಟಿ ಶುಲ್ಕದಿಂದ ಭರಿಸಲಾಗುತ್ತದೆ ಎಂದು ತಿಳಿಸಲಾಗಿದೆ.
ಇದನ್ನು ಓದಿದ್ದೀರಾ? ಮಂಡ್ಯ | ಇನ್ನೂ ನಿಂತಿಲ್ಲ ಭ್ರೂಣಲಿಂಗ ಪತ್ತೆ; ದಂಧೆ ನಡೆಸುತ್ತಿದ್ದ ಮೂವರ ಬಂಧನ
ಎರಡು ವರ್ಷದಲ್ಲಿ ಸುಮಾರು 900 ಹೆಣ್ಣು ಭ್ರೂಣ ಹತ್ಯೆ ಮಾಡಿದ್ದ ತಂಡವೊಂದನ್ನು ಕಳೆದ ಅಕ್ಟೋಬರ್ನಲ್ಲಿ ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು ಬಂಧಿಸಿದ್ದರು. ಶಿವಲಿಂಗೇಗೌಡ, ನಯನ್ ಕುಮಾರ್, ನವೀನ್ ಕುಮಾರ್, ವಿರೇಶ್ ಎಂಬ ನಾಲ್ವರನ್ನು ಬಂಧಿಸಲಾಗಿದೆ.
ಮಂಡ್ಯ ತಾಲೂಕಿನ ಹಾಡ್ಯ ಗ್ರಾಮದ ಬಳಿ ಇರುವ ಆಲೆಮನೆಯಲ್ಲಿ ಕೂಡ ಭ್ರೂಣ ಲಿಂಗ ಪತ್ತೆ ಸ್ಕ್ಯಾನಿಂಗ್ ಮಾಡುವುದು ಬೆಳಕಿಗೆ ಬಂದಿತ್ತು. ಇತ್ತೀಚೆಗೆ ಬೆಳಗಾವಿಯಲ್ಲಿ ಕೂಡ ಮಕ್ಕಳ ಮಾರಾಟ ಮತ್ತು ಭ್ರೂಣ ಹತ್ಯೆ ಮಾಡುತ್ತಿದ್ದ ನಕಲಿ ವೈದ್ಯನನ್ನು ಪೊಲೀಸರು ಬಂಧಿಸಿದ್ದರು.





