ಬೆಂಗಳೂರಿನ ದಕ್ಷಿಣ ಹೊರವಲಯದಲ್ಲಿ 100 ಎಕರೆ ಪ್ರದೇಶದಲ್ಲಿ ಕ್ರೀಡಾ ಹಬ್ ನಿರ್ಮಿಸುವ ಕರ್ನಾಟಕ ಗೃಹ ಮಂಡಳಿಯ (ಕೆಎಚ್ಬಿ) ಮಹತ್ವಾಕಾಂಕ್ಷೆಯ ಯೋಜನೆಗೆ ರಾಜ್ಯ ಸರಕಾರ ಅನುಮೋದನೆ ನೀಡಿದೆ. ಈ ಯೋಜನೆಯ ಸಂಪೂರ್ಣ ವೆಚ್ಚವನ್ನು ಗೃಹ ಮಂಡಳಿಯೇ ಭರಿಸಲಿದೆ.
ಗಾರ್ಡನ್ ಸಿಟಿ ಕ್ರಿಕೆಟ್ ಪ್ರೇಮಿಗಳ ನಗರ ಎಂದೇ ಹೆಸರುವಾಸಿ. ಭಾರತೀಯ ಕ್ರಿಕೆಟ್ನ ಹಲವು ಐತಿಹಾಸಿಕ ಕ್ಷಣಗಳಿಗೆ ಸಾಕ್ಷಿಯಾಗಿರುವ ಬೆಂಗಳೂರಿನಲ್ಲಿ ಈ ಮೂಲಕ ಬೃಹತ್ ಕ್ರಿಕೆಟ್ ಕ್ರೀಡಾಂಗಣವೊಂದು ತಲೆ ಎತ್ತಲಿದೆ.
ಬೊಮ್ಮಸಂದ್ರದ ಸೂರ್ಯ ಸಿಟಿಯಲ್ಲಿ 1,650 ಕೋಟಿ ರೂಪಾಯಿ ವೆಚ್ಚದಲ್ಲಿ ಮೆಗಾ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ನಿರ್ಮಾಣಕ್ಕೆ ಸಿಎಂ ಸಿದ್ದರಾಮಯ್ಯ ಅವರು ಅನುಮೋದನೆ ನೀಡಿದ್ದಾರೆ. ಈ ಕ್ರೀಡಾ ಸಂಕೀರ್ಣದಲ್ಲಿ 80,000 ಆಸನ ಸಾಮರ್ಥ್ಯದ ಬೃಹತ್ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣವಾಗಲಿದೆ.
ಇದು ಪೂರ್ಣಗೊಂಡ ನಂತರ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದ ನಂತರ ಭಾರತದ ಎರಡನೇ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣ ಎನಿಸಿಕೊಳ್ಳಲಿದೆ.
ಜೂನ್ 4 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಂಭ್ರಮಾಚರಣೆ ವೇಳೆ ಎಂ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಮೃತಪಟ್ಟಿದ್ದರು. ಕೇವಲ 17 ಎಕರೆ ವಿಸ್ತೀರ್ಣದಲ್ಲಿರುವ ಈ ಕ್ರೀಡಾಂಗಣ ಕೇವಲ 32,000 ಆಸನ ಸಾಮರ್ಥ್ಯವನ್ನು ಮಾತ್ರ ಹೊಂದಿದೆ.
ಕಾಲ್ತುಳಿತ ಘಟನೆ ಸಂಬಂಧ ತನಿಖೆಗೆ ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹಾ ಆಯೋಗವನ್ನು ನೇಮಕ ಮಾಡಲಾಗಿತ್ತು. ಆಯೋಗವು ಈ ಕ್ರೀಡಾಂಗಣವು ದೊಡ್ಡ ಕಾರ್ಯಕ್ರಮಗಳನ್ನು ಆಯೋಜಿಸಲು ಅಸುರಕ್ಷಿತ ಎಂದು ವರದಿಯಲ್ಲಿ ಉಲ್ಲೇಖಿಸಿತ್ತು. ಅಷ್ಟೇ ಅಲ್ಲದೆ, ಹೆಚ್ಚು ಜನ ಸೇರುವ ಪಂದ್ಯಗಳನ್ನು ಸಾಕಷ್ಟು ಪಾರ್ಕಿಂಗ್ ಮತ್ತು ಜನಸಂದಣಿ ನಿರ್ವಹಣಾ ಸೌಲಭ್ಯಗಳಿರುವ ದೊಡ್ಡ ಮತ್ತು ಸುಸಜ್ಜಿತ ಸ್ಥಳಗಳಿಗೆ ಸ್ಥಳಾಂತರಿಸುವಂತೆ ಶಿಫಾರಸನ್ನೂ ಮಾಡಿತ್ತು.





