ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯಲ್ಲಿ ಖಾಲಿ ಇರುವ 1,600ಕ್ಕೂ ಹೆಚ್ಚು ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತದೆ. ಈ ಸಂಬಂಧ ಮುಖ್ಯಮಂತ್ರಿಗೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ ತಿಳಿಸಿದ್ದಾರೆ.
ಬನ್ನೇರುಘಟ್ಟ ರಸ್ತೆಯಲ್ಲಿರುವ ಆರ್.ಎ. ಮುಂಡ್ಕೂರು ಅಗ್ನಿಶಾಮಕ ತರಬೇತಿ ಅಕಾಡೆಮಿಯಲ್ಲಿ ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆ, ಗೃಹರಕ್ಷಕ ದಳ, ನಾಗರಿಕ ರಕ್ಷಣಾ ಹಾಗೂ ಎಸ್ಡಿಆರ್ಎಫ್ನ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ‘ಮುಖ್ಯಮಂತ್ರಿಗಳ ಪದಕ’ ಪ್ರದಾನ ಮಾಡಿ ಅವರು ಮಾತನಾಡಿದರು.
“ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಯು ತನ್ನ ಶ್ಲಾಘನೀಯ ಸೇವೆಯ ಮೂಲಕ ರಾಷ್ಟ್ರೀಯ ಮನ್ನಣೆಯನ್ನು ಗಳಿಸಿದೆ. ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪೊಲೀಸ್ ಇಲಾಖೆಯಂತೆಯೇ ಶಿಸ್ತಿನ ಮಾನದಂಡಗಳನ್ನು ಕಾಯ್ದುಕೊಂಡಿದ್ದಾರೆ. ಪ್ರತಿದಿನ ನಾವು ಹಲವಾರು ದುರಂತಗಳನ್ನು ನೋಡುತ್ತೇವೆ. ತುರ್ತು ಸಂದರ್ಭಗಳಲ್ಲಿ, ಸಾರ್ವಜನಿಕ ಆಸ್ತಿಯನ್ನು ರಕ್ಷಿಸಲು ಮತ್ತು ನಾಗರಿಕರನ್ನು ಉಳಿಸಲು ಇಲಾಖೆಯ ಸಿಬ್ಬಂದಿಗಳು ಪ್ರಾಣ ಪಣಕ್ಕಿಟ್ಟು ಕಾರ್ಯನಿರ್ವಹಿಸುತ್ತಾರೆ. ಮಡಿಕೇರಿ ಸೇರಿದಂತೆ ಪ್ರವಾಹದ ಸಮಯದಲ್ಲಿ ಜನರನ್ನು ರಕ್ಷಿಸುವಲ್ಲಿ ಸಿಬ್ಬಂದಿಗಳ ಧೈರ್ಯಶಾಲಿ ಪ್ರಯತ್ನಗಳನ್ನು ನಾನು ನೆನಪಿಸಿಕೊಳ್ಳುತ್ತೇನೆ” ಎಂದರು.
“15 ಹೊಸ ತಾಲೂಕುಗಳಲ್ಲಿ ಅಗ್ನಿಶಾಮಕ ಠಾಣೆಗಳನ್ನು ಸ್ಥಾಪಿಸಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇನೆ. ಪೊಲೀಸ್ ವಸತಿ ಯೋಜನೆಯಡಿಯಲ್ಲಿ 40,000 ಮನೆಗಳನ್ನು ನಿರ್ಮಿಸಲಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿಗೆ ವಸತಿ ಸೌಲಭ್ಯಗಳನ್ನು ಒದಗಿಸಲಾಗುವುದು ಮತ್ತು ಅಗತ್ಯ ಹಣವನ್ನು ಮಂಜೂರು ಮಾಡಲಾಗುವುದು” ಎಂದು ಘೋಷಿಸಿದರು.




