ಕನ್ನಡ ಸಾಹಿತ್ಯ ಪರಿಷತ್ (ಕಸಾಪ) ಅಧ್ಯಕ್ಷರಾಗಿದ್ದ ಮಹೇಶ್ ಜೋಶಿ ಸಾಲು-ಸಾಲು ಸುಳ್ಳು ಹೇಳುತ್ತಿದ್ದಾರೆ. ಆ ಸುಳ್ಳುಗಳನ್ನೇ ನ್ಯಾಯಾಲಯದ ಮುಂದೆಯೂ ಹೇಳಿದ್ದಾರೆ. ಅವರ ಈ ನಡವಳಿಕೆ ಆಘಾತಕಾರಿಯಾಗಿದೆ ಎಂದು ರಾಜ್ಯ ಸರ್ಕಾರ ಹೈಕೋರ್ಟ್ನಲ್ಲಿ ವಾದಿಸಿದೆ.
2025ರ ಜೂನ್ 26 ಹಾಗೂ 30ರಂದು ಸಹಕಾರ ಸಂಘಗಳ ನೋಂದಣಾಧಿಕಾರಿ ಕಸಾಪ ಪದಾಧಿಕಾರಿಗಳ ಕಾರ್ಯವೈಖರಿ, ಅನುದಾನ ಮತ್ತು ಖರ್ಚು-ವೆಚ್ಚಗಳ ಕುರಿತು ವಿಚಾರಣೆ ನಡೆಸಲು ತನಿಖಾಧಿಕಾರಿ ನೇಮಕ ಮಾಡಿ ಆದೇಶ ಹೊರಡಿಸಿದೆ. ಈ ಆದೇಶಕ್ಕೆ ತಡೆ ಕೋರಿ ಮಹೇಶ್ ಜೋಶಿ ಸಲ್ಲಿಸಿರುವ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿದೆ.
ಇದನ್ನು ಓದಿದ್ದೀರಾ? ಮಾಹಿತಿ ನೀಡಲು ನಿರಾಕರಣೆ ಆರೋಪ : ಕಸಾಪ ಅಧ್ಯಕ್ಷ ಮಹೇಶ ಜೋಶಿಗೆ 50 ಸಾವಿರ ದಂಡ ಹಾಕಿದ ಹೈಕೋರ್ಟ್
ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ತನಿಖೆಗೆ ತಿಂಗಳ ಗಡುವು ವಿಧಿಸಿದೆ. ಹಾಗೆಯೇ ಜೋಶಿ ಸಹಕರಿಸದಿದ್ದರೆ ಗಮನಕ್ಕೆ ತರಲು ನಿರ್ದೇಶನ ನೀಡಿದೆ. “30 ದಿನಗಳಲ್ಲಿ ತನಿಖೆ ಮುಗಿಯಬೇಕು. ಅಲ್ಲಿಯವರೆಗೆ ಯಾವದೇ ಸಭೆ ನಡೆಯುವಂತಿಲ್ಲ. ಜೋಶಿ ತನಿಖೆಗೆ ಸಹಕರಿಸಬೇಕು. ಈ ವಿಚಾರದಲ್ಲಿ ಯಾವುದೇ ಅನುಕಂಪವಿಲ್ಲ” ಎಂದು ಹೇಳಿ ವಿಚಾರಣೆಯನ್ನು ಡಿಸೆಂಬರ್ 8ಕ್ಕೆ ಮುಂದೂಡಿದೆ.
ವಾದ ಮಂಡಿಸಿದ ರಾಜ್ಯ ಸರ್ಕಾರದ ಪರ ಅಡ್ವೊಕೇಟ್ ಜನರಲ್ (ಎಜಿ) ಕೆ. ಶಶಿಕಿರಣ್ ಶೆಟ್ಟಿ, ತನಿಖಾಧಿಕಾರಿ ಮುಂದೆ ಹಾಜರಾಗಲು ನೋಟಿಸ್ ನೀಡಿದಾಗ ಜೋಶಿ ಕುಟುಂಬದಲ್ಲಿ ಸಾವು ಸಂಭವಿಸಿದೆ, ಪ್ರಯಾಣವಿದೆ ಎಂದು ಹೇಳಿ 15 ದಿನ ಕಾಲಾವಕಾಶ ಕೋರಿದ್ದರು. ಆದರೆ ಅವರು ನಿಜವಾಗಿ ಎಲ್ಲೂ ಪ್ರಯಾಣಿಸಿಲ್ಲ. ರೈಲು ಟಿಕೆಟ್ ಬುಕ್ ಮಾಡಿ ಅದನ್ನು ದಾಖಲೆಯಾಗಿ ತೋರಿಸಿದ್ದಾರೆ. ಬಳಿಕ ಟಿಕೆಟ್ ರದ್ದು ಮಾಡಿ ಹಣ ವಾಪಸ್ ಪಡೆದಿದ್ದಾರೆ ಎಂದು ಹೇಳಿದ್ದಾರೆ.
ರೈಲು ಟಿಕೆಟ್ ಕ್ಯಾನ್ಸಲ್ ಮಾಡಿಸಿದ ವಿವರಗಳನ್ನು ಕೊಡದಂತೆ ರೈಲ್ವೆ ಅಧಿಕಾರಿಗಳಿಗೆ ಬೆದರಿಕೆ ಹಾಕಿದ್ದಾರೆ. ಜತೆಗೆ ಪ್ರಯಾಣ ಮಾಡಲಿದ್ದೇನೆ ಎಂದು ಹೇಳಿದ್ದ ದಿನಗಳಲ್ಲಿ ಕಸಾಪ ಕಚೇರಿಗೆ ಬಂದು ತಮ್ಮ ಕಾರ್ಯನಿರ್ವಹಿಸಿದ್ದಾರೆ ಎಂದು ಸರ್ಕಾರ ವಾದಿಸಿದೆ. ಈ ವೇಳೆ ಜೋಶಿ ಕಚೇರಿಗೆ ಬಂದಿದ್ದು ತಿಳಿದಿದ್ದು ಹೇಗೆ ಎಂಬ ಪ್ರಶ್ನೆಗೆ ಉತ್ತರಿಸಿದ ಅಡ್ವೊಕೇಟ್ ಜನರಲ್ ಸಿಸಿ ಕ್ಯಾಮರಾ ದೃಶ್ಯಾವಳಿಗಳಿಂದ ತಿಳಿದುಬಂದಿದೆ ಎಂದಿದ್ದಾರೆ. ಈ ವೇಳೆ ಕಸಾಪ ಅಧ್ಯಕ್ಷರ ಕಚೇರಿಯಲ್ಲಿ ಸಿಸಿ ಕ್ಯಾಮರಾ ಇರುವ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದೆ.
ಇನ್ನು “ಅನಾವಶ್ಯಕವಾಗಿ ಸಿಸಿ ಕ್ಯಾಮರಾ ಅಳವಡಿಸಿದ ಮತ್ತು ಹಣ ದುರ್ಬಳಕೆ ಮಾಡಿದ ಆರೋಪಗಳೂ ಇದೆ. ಸಿಸಿ ಕ್ಯಾಮರಾ ದೃಶ್ಯಾವಳಿ ಕೊಡದಂತೆ ಕಸಾಪ ಸಿಬ್ಬಂದಿಗೆ ಬೆದರಿಕೆ ಹಾಕಲಾಗಿದೆ. ತನಿಖೆ ನಡೆಯಲಿ. ನ್ಯಾಯಾಲಯವೇ ಕಾಲಮಿತಿ ನಿಗದಿಪಡಿಸಿ ಮೇಲ್ವಿಚಾರಣೆ ನಡೆಸಬೇಕು. ವಿಷಯ ತುಂಬಾ ಗಂಭೀರವಾಗಿದ್ದು, ಅವರ ನಡವಳಿಕೆ ಅನುಮಾನಸ್ಪದ ಹಾಗೂ ಆಘಾತಕಾರಿಯಾಗಿದೆ ಎಂದು ಸರ್ಕಾರದ ಪರ ವಕೀಲರು ಹೇಳಿದ್ದಾರೆ.





