ಲೈಂಗಿಕ ಕಿರುಕುಳ ನೀಡಿದ್ದಕ್ಕೆ ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದ ಸಂತ್ರಸ್ತ ಬಾಲಕಿಗೆ ಮಾನಸಿಕ ಹಾಗೂ ದೈಹಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಚಿಕ್ಕಪ್ಪನ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಬಾಲನ್ಯಾಯ ಕಾಯ್ದೆಯಡಿ ಎಫ್ಐಆರ್ ದಾಖಲಿಸುವಂತೆ ಮಕ್ಕಳ ಕಲ್ಯಾಣ ಸಮಿತಿ ಶಿಫಾರಸು ಮಾಡಿದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ.
ಚಿಕ್ಕಪ್ಪನ ಮನೆಯಲ್ಲಿ ಆಶ್ರಯ ಪಡೆದಿದ್ದ ಸಂತ್ರಸ್ತ ಬಾಲಕಿ 22ರಂದು ನಾಪತ್ತೆಯಾಗಿದ್ದಳು. ಈ ಬಗ್ಗೆ ಆಕೆಯ ಚಿಕ್ಕಪ್ಪ ಮೇ 24ರಂದು ಚಿತ್ರದುರ್ಗದ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ನಾಪತ್ತೆಯಾಗಿದ್ದ ಪೋಕ್ಸೋ ಪ್ರಕರಣದ ಸಂತ್ರಸ್ತ ಬಾಲಕಿ ಮೈಸೂರಿನ ಒಡನಾಡಿ ಸಂಸ್ಥೆಯಲ್ಲಿ ಪತ್ತೆಯಾಗಿದ್ದಳು. ಈ ಬಗ್ಗೆ ಮೈಸೂರಿನ ಒಡನಾಡಿ ಸಂಸ್ಥೆಯು ಕೂಡ ಪೊಲೀಸ್ ಠಾಣೆಗೆ ಮಾಹಿತಿ ನೀಡಿತ್ತು.
ಮುರುಘಾಶ್ರೀ ಬೆಂಬಲಿಗರಿಂದ ಸಂತ್ರಸ್ತೆ ಚಿಕ್ಕಪ್ಪನ ಮೂಲಕ ಬಾಲಕಿಗೆ ಒತ್ತಡ ಹಾಕುತ್ತಿದ್ದರಿಂದ ಆಕೆ ಮನೆಬಿಟ್ಟು ಬಂದಿದ್ದಾಳೆ ಎಂದು ತಿಳಿದುಬಂದಿತ್ತು.
ಮೈಸೂರಿನ ಒಡನಾಡಿ ಸೇವಾ ಸಂಸ್ಥೆಯ ನೆರವಿನೊಂದಿಗೆ ಮಕ್ಕಳ ರಕ್ಷಣಾಧಿಕಾರಿ ಎದುರು ಹಾಜರಾದ ಸಂತ್ರಸ್ತ ಬಾಲಕಿಯನ್ನು ಆಪ್ತ ಸಮಾಲೋಚನೆಗೆ ಒಳಪಡಿಸಲಾಯಿತು. ಮಕ್ಕಳ ಕಲ್ಯಾಣ ಸಮಿತಿಯು ಸಂತ್ರಸ್ತೆಯ ಅಳಲು ಆಲಿಸಿ, ಬಾಲನ್ಯಾಯ ಕಾಯ್ದೆಯ ಕಾಲಂ 75ರ ಅಡಿಯಲ್ಲಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಚಿಕ್ಕಪ್ಪನ ವಿರುದ್ಧ ದೂರು ದಾಖಲಿಸುವಂತೆ ಮಕ್ಕಳ ರಕ್ಷಣಾಧಿಕಾರಿಗೆ ಆದೇಶಿಸಿತು.
ತಂದೆಯ ಅನಾರೋಗ್ಯದ ಕಾರಣಕ್ಕೆ ಚಿಕ್ಕಪ್ಪನ ಆಶ್ರಯದಲ್ಲಿದ್ದ ಬಾಲಕಿ ಮೇ 22ರಂದು ಮನೆ ತೊರೆದಿದ್ದಳು. ಪುತ್ರಿ ಕಾಣೆಯಾಗಿರುವ ಬಗ್ಗೆ ಮೇ 24ರಂದು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಮೈಸೂರಿನ ಒಡನಾಡಿ ಸೇವಾ ಸಂಸ್ಥೆಗೆ ಮರಳಿದ್ದ ಬಾಲಕಿ, ಸಂಸ್ಥೆಯ ನಿರ್ದೇಶಕ ಸ್ಪ್ಯಾನ್ಲಿ ಅವರೊಂದಿಗೆ ಮಂಗಳವಾರ ಚಿತ್ರದುರ್ಗಕ್ಕೆ ಬಂದಿದ್ದರು. ಪೋಕ್ಕೊ ಪ್ರಕರಣದ ಸಾಕ್ಷ್ಯ ನುಡಿಯುವ ವೇಳೆ ಸಂತ್ರಸ್ತೆಯ ಮೇಲೆ ಪ್ರಭಾವ ಬೀರಲು ಪ್ರಯತ್ನ ನಡೆದಿದೆ ಎಂಬ ಆರೋಪ ಕೇಳಿಬಂದಿದೆ.
ಇದನ್ನು ಓದಿದ್ದೀರಾ? ಯುಎಪಿಎ ಪ್ರಕರಣ | ಪಿಎಫ್ಐ ಮುಖ್ಯಸ್ಥ ಅಬೂಬಕ್ಕರ್ಗೆ ಜಾಮೀನು ನೀಡಲು ನಿರಾಕರಿಸಿದ ದೆಹಲಿ ಹೈಕೋರ್ಟ್
“ಮನೆ ತೊರೆದ ಬಾಲಕಿ ಒಡನಾಡಿ ಸೇವಾ ಸಂಸ್ಥೆಗೆ ಬಂದಿದ್ದಳು. ಮಕ್ಕಳ ಕಲ್ಯಾಣ ಸಮಿತಿ ಎದುರು ಹಾಜರುಪಡಿಸಿ ಚಿಕ್ಕಪ್ಪನ ಕಿರುಕುಳದ ಬಗ್ಗೆ ವಿವರಿಸಲಾಗಿದೆ. ಪೋಕ್ಸೋ ಪ್ರಕರಣದ ದಿಕ್ಕು ತಪ್ಪಿಸುವ ಪ್ರಯತ್ನ ವ್ಯವಸ್ಥಿತವಾಗಿ ನಡೆದಿದೆ. ಪ್ರಕರಣದಿಂದ ಹಿಂದೆ ಸರಿಯುವಂತೆ ಬೆದರಿಸಲಾಗಿದೆ. ಹಣ, ಚಿನ್ನಾಭರಣದ ಆಮಿಷ ಒಡ್ಡಲಾಗಿದೆ. ಈ ಕುರಿತು ಸೂಕ್ತ ತನಿಖೆಯಾಗಬೇಕು” ಎಂದು ಒಡನಾಡಿ ಸೇವಾ ಸಂಸ್ಥೆಯ ನಿರ್ದೇಶಕ ಸ್ಪ್ಯಾನ್ಲಿ ಒತ್ತಾಯಿಸಿದ್ದಾರೆ.





