ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಸಿಬ್ಬಂದಿಗೆ 2018ರ ಏಪ್ರಿಲ್ನಿಂದ ಅನ್ವಯವಾಗುವಂತೆ 6ನೇ ವೇತನ ಆಯೋಗದ ಶಿಫಾರಸಿನಂತೆ ವೇತನ ಪರಿಷ್ಕರಣೆಗೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.
ಅಲ್ಲದೆ, 2018ರಿಂದ ಅನ್ವಯವಾಗುವಂತೆ 6ನೇ ವೇತನ ಆಯೋಗದ ಶಿಫಾರಸಿನಂತೆ ವೇತನ ಪರಿಷ್ಕರಣೆ ಮಾಡಿ ಪಾವತಿ ಮಾಡಬೇಕು ಎಂದು ಆದೇಶಿಸಿರುವ ಏಕ ಸದಸ್ಯ ಪೀಠದ ಆದೇಶವನ್ನು ಮುಂದಿನ ಎಂಟು ವಾರಗಳಲ್ಲಿ ಜಾರಿ ಮಾಡಬೇಕೆಂದು ನಿರ್ದೇಶಿಸಿದೆ.
ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಸಿಬ್ಬಂದಿಗೆ 2018ರಿಂದ 6ನೇ ವೇತನ ಆಯೋಗದ ಶಿಫಾರಸಿನಂತೆ ವೇತನ ಪರಿಷ್ಕರಣೆಗೆ ಸೂಚನೆ ನೀಡಿದ್ದ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಮತ್ತು ಏಕ ಸದಸ್ಯ ಪೀಠದ ಆದೇಶ ಜಾರಿ ಮಾಡದ ಸರ್ಕಾರದ ಕ್ರಮ ಪ್ರಶ್ನಿಸಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಎಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿರುವ ಕೆ.ಸಿ. ಉದಯ್ ಕುಮಾರ್ ಸೇರಿ ಮತ್ತಿತರರು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.
ಈ ಎರಡೂ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನು ಶಿವರಾಮನ್ ಮತ್ತು ನ್ಯಾಯಮೂರ್ತಿ ವಿಜಯ್ ಕುಮಾರ್ ಎ. ಪಾಟೀಲ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿ, ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾಗೊಳಿಸಿ ಆದೇಶಿಸಿದೆ.





