ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣ ಸಂಬಂಧ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವೀರೇಂದ್ರ ಅಲಿಯಾಸ್ ವೀರೇಂದ್ರ ಪಪ್ಪಿ ಅವರನ್ನು ಬಂಧಿಸಿರುವ ಜಾರಿ ನಿರ್ದೇಶನಾಲಯದ (ಇ.ಡಿ) ಕ್ರಮ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ವೀರೇಂದ್ರ ಅವರ ಬಂಧನವನ್ನು ಕಾನೂನುಬಾಹಿರವೆಂದು ಘೋಷಿಸಿ, ತಕ್ಷಣವೇ ಬಿಡುಗಡೆಗೊಳಿಸಲು ಆದೇಶಿಸುವಂತೆ ಕೋರಿ ವೀರೇಂದ್ರ ಪತ್ನಿ ಆರ್.ಡಿ.ಚೈತ್ರಾ ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ಪೂರ್ಣಗೊಳಿಸಿ, ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಂ.ಐ. ಅರುಣ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಪ್ರಕಟಿಸಿತು.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪಟೇಲರನ್ನು ಹೈಜಾಕ್ ಮಾಡುವುದು ಆರ್ಎಸ್ಎಸ್ಗೆ ಸುಲಭವಲ್ಲ!
ಶಾಸಕ ಕೆ.ಸಿ.ವೀರೇಂದ್ರ ಬಂಧನವನ್ನು ಕಾನೂನುಬಾಹಿರವೆಂದು ಘೋಷಿಸಲು ನಿರಾಕರಿಸಿರುವ ಹೈಕೋರ್ಟ್, ಅಕ್ರಮ ಹಣ ವರ್ಗಾವಣೆ ತಡೆ (ಪಿಎಂಎಲ್) ಕಾಯ್ದೆಯ ಸೆಕ್ಷನ್ 2(1)(ಯು) ತಿದ್ದುಪಡಿ ಮಾಡಿರುವುದು ಜಾರಿ ನಿರ್ದೇಶನಾಲಯದ ನೆರವಿಗೆ ಬಂದಿದೆ. ಕನಕಪುರದ ಹಾರೋಹಳ್ಳಿ ಠಾಣೆಯಲ್ಲಿ ಬಾಕಿ ಇರುವ ಪ್ರಕರಣವನ್ನು ಆಧರಿಸಿ ಈಡಿ ತನಿಖೆ ಮುಂದುವರಿಯಲು ತಿದ್ದುಪಡಿ ಕಾಯ್ದೆ ಅವಕಾಶ ಕಲ್ಪಿಸುತ್ತದೆ ಎಂದು ಹೇಳಿದೆ.
ಹಾಲಿ ಅರ್ಜಿಯನ್ನು ವಜಾಗೊಳಿಸಿರುವುದು ಬೇರೆ ನ್ಯಾಯಾಲಯದಲ್ಲಿನ ವೀರೇಂದ್ರ ಅವರ ಜಾಮೀನು ಅರ್ಜಿ ಮತ್ತಿತರ ಅರ್ಜಿಗಳ ವಿಚಾರಣೆ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಹಾರೋಹಳ್ಳಿ ಪ್ರಕರಣದಲ್ಲಿ ಪೊಲೀಸರು ಹಾಕಿರುವ ಬಿ ವರದಿಯನ್ನು ಸಕ್ಷಮ ನ್ಯಾಯಾಲಯ ಅಂಗೀಕರಿಸಿದರೆ, ವೀರೇಂದ್ರ ಅವರ ಬಂಧನ ಆದೇಶವನ್ನು ಮತ್ತೊಮ್ಮೆ ಪ್ರಶ್ನಿಸುವ ಸ್ವಾತಂತ್ರ್ಯ ಹೊಂದಲಿದ್ದಾರೆ ಎಂದು ನ್ಯಾಯಪೀಠ ಆದೇಶದಲ್ಲಿ ಸ್ಪಷ್ಟಪಡಿಸಿದೆ. ವಿಸ್ತೃತ ತೀರ್ಪಿನ ಪ್ರತಿ ಇನ್ನಷ್ಟೇ ಲಭ್ಯವಾಗಬೇಕಿದೆ.





