ಹುಸಿ ಬಾಂಬ್ ಬೆದರಿಕೆ ಪ್ರಕರಣ ಹೆಚ್ಚಳ ಹಿನ್ನೆಲೆ ಬುಧವಾರವಷ್ಟೇ ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿತ್ತು. ಅದರ ಬೆನ್ನಲ್ಲೇ ಇದೀಗ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ ಕೆ ಶಿವಕುಮಾರ್ ಅವರ ಬೆಂಗಳೂರು ಮನೆಗೇ ಹುಸಿ ಬಾಂಬ್ ಬೆದರಿಕೆ ಸಂದೇಶ ಬಂದಿದೆ. ಆ ಮೂಲಕ ಬಾಂಬ್ ಬೆದರಿಕೆ ಕಾಟ ಇದೀಗ ಮತ್ತೊಂದು ಮಜಲಿಗೆ ತಲುಪಿದೆ. ತಮಿಳುನಾಡಿನ ವ್ಯಕ್ತಿಯೊಬ್ಬನಿಂದ ಬೆದರಿಕೆ ಸಂದೇಶ ಕಳುಹಿಸಿರುವ ಅನುಮಾನಗಳು ವ್ಯಕ್ತವಾಗಿದ್ದು, ಆತನ ಪತ್ತೆಗೆ ಪೊಲೀಸರು ಮುಂದಾಗಿದ್ದಾರೆ.
ಆರ್ನಾ ಅಶ್ವಿನ್ ಶೇಖರ್ (aarna.ashwinshekher@outlook.com) ಎಂಬಾತನ ಐಡಿಯಿಂದ ಡಿಸಿಎಂ ಡಿಕೆ ಶಿವಕುಮಾರ್ ಇ-ಮೇಲ್ ಐಡಿಗೆ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದೆ. ಆರು ಆರ್ಡಿಎಕ್ಸ್ ಬಾಂಬ್ಗಳು ಇಬ್ಬರ ಮನೆಯಲ್ಲೂ ಫಿಕ್ಸ್ ಆಗಿದೆ. ರಿಮೋಟ್ ಮೂಲಕ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿದೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕಾಂಗ್ರೆಸ್ಸಿನೊಳಗೊಂದು ಆರೆಸ್ಸೆಸ್ ಆನೆ ಅವಿತಿರುವ ದುರಂತ!
ಹುಸಿ ಬಾಂಬ್ ಬೆದರಿಕೆ ಸಂದೇಶ ಬಂದ ಬೆನ್ನಲ್ಲೇ ಬಾಂಬ್ ಸ್ಕ್ವಾಡ್ ತಕ್ಷಣ ನಿವಾಸಗಳಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಇನ್ನು ಹುಸಿಬಾಂಬ್ ಕರೆ ಬಂದ ಹಿನ್ನೆಲೆ ಅಶ್ವತ್ಥ್ ನಾರಾಯಣಸ್ವಾಮಿ ಎಂಬುವವರ ದೂರು ಆಧರಿಸಿ ಬೆಂಗಳೂರಿನ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಇನ್ನು ಇತ್ತೀಚೆಗೆ ಬೆಂಗಳೂರಿನಲ್ಲಿ ಹುಸಿ ಬಾಂಬ್ ಬೆದರಿಕೆ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ಶಾಲಾ, ಕಾಲೇಜು, ಹೋಟೆಲ್, ಕೋರ್ಟ್ ಸೇರಿದಂತೆ ಈ ವರ್ಷ ಸುಮಾರು 30ಕ್ಕೂ ಹೆಚ್ಚು ವಿವಿಧ ರೀತಿಯಲ್ಲಿ ಬಾಂಬ್ ಬೆದರಿಕೆಗಳು ಬಂದಿವೆ. ಹೀಗಾಗಿ ಹುಸಿ ಬಾಂಬ್ ಬೆದರಿಕೆ ಕೇಸ್ಗಳ ಕುರಿತು ತನಿಖೆ ನಡೆಸಲು ರಾಜ್ಯ ಸರ್ಕಾರ ಉತ್ತರ ವಿಭಾಗ ಡಿಸಿಪಿ ಬಿ.ಎಸ್.ನೇಮಗೌಡ ನೇತೃತ್ವದಲ್ಲಿ ಎಸ್ಐಟಿ ರಚನೆ ಮಾಡಿದೆ.





