ಬಡ ಮಕ್ಕಳ ಶಿಕ್ಷಣ, ಆರೋಗ್ಯದ ಜವಾಬ್ದಾರಿ ಹೊತ್ತ ಮೊರಾರ್ಜಿ ವಸತಿ ಶಾಲೆಯಲ್ಲಿ ಎರಡು ತಿಂಗಳ ಅವಧಿಯಲ್ಲಿ ಆಹಾರ ಸೇವನೆಯಿಂದ ಮಕ್ಕಳು ಅಸ್ವಸ್ಥ ಘಟನೆ ಪದೇಪದೆ ಸಂಭವಿಸಿರುವುದು ಜವಾಬ್ದಾರಿ ಹೊತ್ತ ಶಿಕ್ಷಣ ಇಲಾಖೆಯ ನಿರ್ಲಕ್ಷ್ಯತನದ ನಿರ್ವಹಣೆಯನ್ನು ಸಾಬೀತು ಪಡಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಕಿಡಿಕಾರಿದ್ದಾರೆ.
ಈ ಕುರಿತು ಎಕ್ಸ್ ತಾಣದಲ್ಲಿ ಬರದುಕೊಂಡಿರುವ ಅವರು, “ಚಿಕ್ಕೋಡಿ ಜಿಲ್ಲೆಯ ಹಿರೇಕೋಡಿಯ ಮೊರಾರ್ಜಿ ವಸತಿ ಶಾಲೆಯ 39 ಮಕ್ಕಳು ಕಲುಷಿತ ಆಹಾರ ಸೇವನೆಯ ಪರಿಣಾಮದಿಂದ ಅಸ್ವಸ್ಥಗೊಂಡಿರುವ ವರದಿ ಕಳವಳ ಉಂಟು ಮಾಡಿದೆ” ಎಂದಿದ್ದಾರೆ.
“ಮಕ್ಕಳಿಗೆ ಸುರಕ್ಷಿತ ಆಹಾರ ಒದಗಿಸುವಲ್ಲಿ ಅಧಿಕಾರಿಗಳು ಉಡಾಫೆತನ ತೋರುತ್ತಿದ್ದಾರೆ, ರಾಜ್ಯದ ಅನೇಕ ಸರ್ಕಾರಿ ವಸತಿ ಶಾಲೆಗಳಲ್ಲಿ ಈ ರೀತಿಯ ಆಘಾತಕಾರಿ ಘಟನೆಗಳು ಸಂಭವಿಸುತ್ತಿದ್ದರೂ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿರುವುದು ಅತ್ಯಂತ ಆತಂಕಕಾರಿ ನಡೆಯಾಗಿದೆ” ಎಂದು ಟೀಕಿಸಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಈ ಕೂಡಲೇ ಅಸ್ವಸ್ಥ ಮಕ್ಕಳಿಗೆ ಸೂಕ್ತ ಚಿಕಿತ್ಸೆ ಒದಗಿಸಿ, ಮಕ್ಕಳಿಗೆ ಹಾಗೂ ಪೋಷಕರಿಗೆ ಆತ್ಮಸ್ಥೈರ್ಯ ತುಂಬಲಿ. ಈ ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಂಡು, ಮತ್ತೆ ಇಂಥಾ ಘಟನೆ ಮರುಕಳಿಸದಂತೆ ಹೆಚ್ಚಿನ ಮುಂಜಾಗರೂಕತಾ ಕ್ರಮ ವಹಿಸಲಿ” ಎಂದು ಆಗ್ರಹಿಸಿದ್ದಾರೆ.
ಅತಿವೃಷ್ಟಿ, ರೈತರ ಸಂಕಷ್ಟಕ್ಕೆ ಸ್ಪಂದಿಸದ ಸಚಿವರು
ಭೀಕರ ಮಳೆಯಿಂದ ತೊಂದರೆಗೆ ಸಿಲುಕಿದ ರೈತರು ರಾಜ್ಯ ಸರಕಾರ ಪರಿಹಾರ ಕೊಡಬೇಕೆಂದು ಒತ್ತಾಯಿಸಿದ್ದಾರೆ. ಆದರೆ, ಜಿಲ್ಲಾ ಉಸ್ತುವಾರಿ ಸಚಿವರು ತಲೆ ಕೆಡಿಸಿಕೊಂಡಿಲ್ಲ; ಇಲಾಖೆಯ ಅಧಿಕಾರಿಗಳೂ ತಲೆ ಕೆಡಿಸಿಕೊಂಡಿಲ್ಲ; ಕಂದಾಯ, ಕೃಷಿ ಸಚಿವರು ಉತ್ತರ ಕರ್ನಾಟಕದ ಪ್ರವಾಸ ಮಾಡಿಲ್ಲ ಎಂದು ಬೆಳಗಾವಿಯಲ್ಲಿ ವಿಜಯೇಂದ್ರ ಅವರು ಆಕ್ಷೇಪಿಸಿದ್ದಾರೆ.
ಮಂಗಳವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಬೆಳಗಾವಿ, ಬಾಗಲಕೋಟೆ, ಬಿಜಾಪುರ ಜಿಲ್ಲೆ ಸೇರಿ ಈ ಭಾಗದ ಕಬ್ಬು ಬೆಳೆಗಾರರು ಹೋರಾಟ, ಪ್ರತಿಭಟನೆ ಮಾಡುತ್ತಿದ್ದಾರೆ. ಅವರ ನ್ಯಾಯಯುತ ಬೇಡಿಕೆಗಳನ್ನು ರಾಜ್ಯ ಸರಕಾರವು ತನ್ನ ಮುಂದಾಳತ್ವದಲ್ಲಿ ಈಡೇರಿಸಬೇಕೆಂದು ಒತ್ತಾಯಿಸುತ್ತಿದ್ದಾರೆ ಎಂದು ಗಮನ ಸೆಳೆದರು. ರಾಜ್ಯ ಸರಕಾರವು ರೈತರ ಬಗ್ಗೆ ನಿರ್ಲಕ್ಷ್ಯ ವಹಿಸುತ್ತಿದ್ದು, ನಾವು ರೈತರ ಪರವಾಗಿ ಹೋರಾಟ ಮಾಡಬೇಕಾಗುತ್ತದೆ” ಎಂದು ಎಚ್ಚರಿಸಿದರು.
“6 ಮಿಲಿಯ ಟನ್ ಕಬ್ಬು ಅರೆಯುತ್ತಿದ್ದು, ಮೊಲಾಸೆಸ್, ಎಥೆನಾಲ್ ಮೊದಲಾದವುಗಳಿಂದ ರಾಜ್ಯ ಸರಕಾರಕ್ಕೆ ತೆರಿಗೆ ಮೂಲಕ ಸುಮಾರು 50- 55 ಸಾವಿರ ಕೋಟಿ ಆದಾಯ ಬರುತ್ತದೆ. ರಾಜ್ಯ ಸರಕಾರದ ಕರ್ತವ್ಯವೂ ಇರುತ್ತದೆಯಲ್ಲವೇ? ಸರಕಾರವು ಸಂಕಷ್ಟದಲ್ಲಿರುವ ರೈತರ ಸಮಸ್ಯೆ ಆಲಿಸುತ್ತಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಲೆಮಾರಿಗಳ ಛಲಕ್ಕೊಂದು ಸಲಾಂ; ಮಾತು ತಪ್ಪದಿರಲಿ ಸರ್ಕಾರ
“ಸಾವಿರಾರು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಸರಕಾರವು ತನ್ನ ಜವಾಬ್ದಾರಿ ಅರಿತು ನಡೆದುಕೊಳ್ಳಬೇಕು. ವಿಪಕ್ಷವಾಗಿ ನಾವು ಹೊಣೆಯರಿತು ಕೆಲಸ ಮಾಡುತ್ತಿದ್ದೇವೆ. ನಾಡಿಗೆ ಅನ್ನ ನೀಡುವ ರೈತರ ವಿಚಾರ ಬಂದಾಗ ಪಕ್ಷಾತೀತವಾಗಿ ನಾವು ರೈತರ ಪರವಾಗಿ ನಿಲ್ಲಬೇಕಾಗುತ್ತದೆ. ಹಾಗಾಗಿ ನಾನು, ನಮ್ಮ ಪಕ್ಷದ ಮುಖಂಡರ ಜೊತೆ ಚರ್ಚೆ ಮಾಡಿ ರೈತರ ಪ್ರತಿಭಟನೆಗೆ ಬೆಂಬಲ ನೀಡಲು ಇಲ್ಲಿ ಬಂದಿದ್ದೇನೆ” ಎಂದು ತಿಳಿಸಿದರು.
“2014ರಲ್ಲಿ ಬೆಳಗಾವಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದಾಗ ರೈತ ವಿಠಲ ಅರಬಾವಿ ಅವರು ಕಬ್ಬಿನ ದರದ ವಿಚಾರದಲ್ಲಿ ಪ್ರಾಣ ಕಳಕೊಂಡರು. ಯಡಿಯೂರಪ್ಪ ಅವರೂ ಬೀದಿಗಿಳಿದು ಹೋರಾಟ ಮಾಡಿ ಅಂದಿನ ಮುಖ್ಯಮಂತ್ರಿಗಳಿಗೆ 150 ರೂ. ಹೆಚ್ಚುವರಿ ದರಕ್ಕೆ ಒತ್ತಾಯ ಮಾಡಿದ್ದರು. ಅವರ ಹೋರಾಟ ಆಗ ಯಶಸ್ವಿ ಆಗಿತ್ತು” ಎಂದು ನೆನಪಿಸಿದರು.
ಸಿಎಂ ಕುರ್ಚಿಗೆ ಯುದ್ಧ
“ಮುಖ್ಯಮಂತ್ರಿ ಕುರ್ಚಿಗೆ ಕಳೆದ ಕೆಲವು ದಿನಗಳಿಂದ ಯುದ್ಧ ಪ್ರಾರಂಭವಾಗಿದೆ. ಅದು ಯಾವ ಮಟ್ಟಕ್ಕೆ ಹೋಗಲಿದೆ ಎಂಬುದು ಬಿಹಾರ ಚುನಾವಣೆ ಫಲಿತಾಂಶದ ಬಳಿಕ ಅದು ಗೊತ್ತಾಗಲಿದೆ” ಎಂದು ಪ್ರಶ್ನೆಯೊಂದಕ್ಕೆ ವಿಜಯೇಂದ್ರ ಉತ್ತರಿಸಿದರು.
“ನಾಡಿನ ರೈತರು ಇವತ್ತು ಸಂಕಷ್ಟದಲ್ಲಿದ್ದಾರೆ. ಅತಿವೃಷ್ಟಿ ಸಂದರ್ಭದಲ್ಲಿ ನಾನು ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರವಾಸ ಮಾಡಿದ್ದೇನೆ. ಗುಲ್ಬರ್ಗ, ಯಾದಗಿರಿ, ರಾಯಚೂರು- ಈ ಭಾಗದಲ್ಲಿ ನಮ್ಮ ವಿಪಕ್ಷ ನಾಯಕರೂ ಪ್ರವಾಸ ಮಾಡಿದ್ದಾರೆ ಎಂದು ಗಮನಕ್ಕೆ ತಂದರು. ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯ ಸರಕಾರವು ಕೂಡಲೇ ರೈತರ ಸಮಸ್ಯೆಗೆ ಸ್ಪಂದಿಸಬೇಕಿದೆ” ಎಂದು ಒತ್ತಾಯಿಸಿದರು.





