ಶ್ರೀರಾಮನನ್ನು ಹೀಯಾಳಿಸಿ, ಅವಹೇಳನ ಮಾಡಿದ್ದಾರೆ ಎಂದು ಸಾಹಿತಿ ಕೆ.ಎಸ್ ಭಗವಾನ್ ವಿರುದ್ಧ ದಾಖಲಿಸಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ನ್ಯಾಯಾಲಯ ರದ್ದುಗೊಳಿಸಿದೆ. ಪ್ರಕರಣದಲ್ಲಿ ಭಗವಾನ್ ಅವರನ್ನು ಖುಲಾಸೆಗೊಳಿಸಿ ತೀರ್ಪು ನೀಡಿದೆ.
ಭಗವಾನ್ ಅವರು ತಮ್ಮ ‘ರಾಮ ಮಂದಿರ ಏಕೆ ಬೇಡ’ ಎಂಬ ಪುಸ್ತಕದಲ್ಲಿ ಶ್ರೀರಾಮನ ವಿರುದ್ಧ ಅವಹೇಳನಕಾರಿ ಪದಗಳನ್ನು ಬಳಿಸಿದ್ದಾರೆ. ಹಿಂದು ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿ ಬಿಜೆಪಿ ಬೆಂಬಲಿತೆ, ವಕೀಲೆ ಮೀರಾ ರಾಘವೇಂದ್ರ ಅವರು ಖಾಸಗಿ ದೂರು ದಾಖಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ 37ನೇ ಎಸಿಎಂಎಂ ನ್ಯಾಯಾಲಯವು ಪ್ರಕರಣವನ್ನು ರದ್ದುಗೊಳಿಸಿದೆ.
ಇದೇ ರೀತಿಯ ಮತ್ತೊಂದು ಪ್ರಕರಣದಲ್ಲಿಯೂ ಭಗವಾನ್ ಅವರನ್ನು ಇತ್ತೀಚೆಗೆ ಖುಲಾಸೆಗೊಳಿಸಲಾಗಿತ್ತು. ಆ ಸಂದರ್ಭದಲ್ಲಿ, ನ್ಯಾಯಾಲಯಕ್ಕೆ ಹಾಜರಾಗಿದ್ದ ಭಗವಾನ್ ಅವರ ಮುಖಕ್ಕೆ ವಕೀಲೆ ಮೀರಾ ರಾಘವೇಂದ್ರ ಅವರು ಮಸಿ ಬಳಿದಿದ್ದರು. ನ್ಯಾಯಾಲಯದ ಆವರಣದಲ್ಲಿ ದುರ್ನಡತೆ ತೋರಿದ ಮೀರಾ ಅವರ ವಕೀಲಿಕೆಗೆ ನ್ಯಾಯಾಲಯವು ನಿರ್ಬಂಧ ಹೇರಿತ್ತು. 3 ತಿಂಗಳ ಕಾಲ ಭಾರತದ ಯಾವುದೇ ನ್ಯಾಯಾಲಯದಲ್ಲಿ ವಕೀಲಿಕೆ ನಡೆಸದಂತೆ ನಿರ್ಬಂಧಿಸಿತ್ತು.




