ಕರ್ನಾಟಕದಲ್ಲಿ ರಾಜ್ಯ ಸರ್ಕಾರವು ಜಾರಿಗೆ ತಂದಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಕ್ಕೆ ಆಗಿರುವ ಅನ್ಯಾಯವನ್ನು ಪ್ರಶ್ನಿಸಿ ಒಳಮೀಸಲಾತಿ ಹೋರಾಟಗಾರರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಹೈಕೋರ್ಟ್ನಲ್ಲಿ ಸರ್ಕಾರವು ತನ್ನ ನಿರ್ಧಾರವನ್ನು ಸಮರ್ಥಿಸಿಕೊಳ್ಳಲು ಈ ಹಿಂದೆ, ಬಿಜೆಪಿ ಸರ್ಕಾರದಲ್ಲಿ ಅಕ್ಟೋಕೇಟ್ ಜನರಲ್ ಆಗಿದ್ದ ಹಿರಿಯ ವಕೀಲ ಉದಯ್ ಹೊಳ್ಳ ಅವರನ್ನು ನೇಮಕ ಮಾಡಿದೆ.
ರಾಜ್ಯದಲ್ಲಿ ಪರಿಶಿಷ ಜಾತಿ ಪಟ್ಟಿಯಲ್ಲಿರುವ 101 ಜಾತಿಗಳಲ್ಲಿ ಎಲ್ಲ ಸಮುದಾಯಗಳಿಗೆ ಸರಿಯಾಗಿ ಅವಕಾಶಗಳು ದೊರೆಯಬೇಕೆಂದರೆ ಒಳಮೀಸಲಾತಿ ಜಾರಿಯಾಗಬೇಕೆಂದು ಕಳೆದು 30 ವರ್ಷಗಳಿಂದ ಹೋರಾಟಗಳು ನಡೆದಿದ್ದವು. ಸುದೀರ್ಘ ಹೋರಾಟಕ್ಕೆ ಮಣಿದ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೆ ತಂದಿದೆ. ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಲು ‘ಎ, ಬಿ, ಸಿ’ ಪ್ರವರ್ಗಗಳಾಗಿ ಎಸ್ಸಿ ಸಮುದಾಯಗಳನ್ನು ವರ್ಗಿಕರಿಸಿದೆ. ಆದಾಗ್ಯೂ, ಅಲೆಮಾರಿ ಸಮುದಾಯಗಳಿಗೆ ಅನ್ಯಾಯ ಮಾಡಿದೆ.
ಅಲೆಮಾರಿ ಸಮುದಾಯಗಳಿಗೆ ಆಗಿರುವ ಅನ್ಯಾಯವನ್ನು ಪ್ರಶ್ನಿಸಿ, ಈ ಸಮುದಾಯಗಳಿಗೆ ಪ್ರತ್ಯೇಕ 1% ಮೀಸಲಾತಿ ಹಂಚಿಕೆ ಮಾಡಲು ನಿರ್ದೇಶಿಸುವಂತೆ ಕೋರಿ ‘ಕರ್ನಾಟಕದ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಒಕ್ಕೂಟ’ ಮತ್ತು ಇತರರು ಹೈಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅಲ್ಲದೆ, ದೆಹಲಿಯವರೆಗೆ ಹೋಗಿ ಹೋರಾಟ ನಡೆಸುತ್ತಿದ್ದಾರೆ.
ಈ ಲೇಖನ ಓದಿದ್ದೀರಾ?: RSS- ದೇಶಭಕ್ತರ ಸಂಘಟನೆಯೇ! ಯಶವಂತ್ ಶಿಂದೆ ಅಫಿಡವಿಟ್ ಹೇಳುತ್ತಿರುವುದೇನು?
ಅಲೆಮಾರಿಗೆ ಅನ್ಯಾಯ ಆಗಿದೆ ಎಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಒಪ್ಪಿಕೊಂಡಿದ್ದಾರೆ. ಆದರೆ, ಸರ್ಕಾರವು ಅಲೆಮಾರಿ ಸಮುದಾಯವನ್ನು ಬಲಗೈ ಸಮುದಾಯಗಳೊಂದಿಗೆ ಸೇರಿಸಿರುವ ತನ್ನ ಧೋರಣೆಯನ್ನು ನ್ಯಾಯಾಲಯದಲ್ಲಿ ಸಮರ್ಥಿಸಿಕೊಳ್ಳಲು ಮುಂದಾಗಿದೆ. ಅದಕ್ಕಾಗಿ, ಉದಯ್ ಹೊಳ್ಳ ಅವರನ್ನು ವಿಶೇಷ ನ್ಯಾಯವಾದಿಯಾಗಿ ನೇಮಿಸಿಕೊಂಡಿದೆ.





