ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ (ಕಸಾಪ) ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಆಡಳಿತಾಧಿಕಾರಿ ಜಾರಿ ಮಾಡಿರುವ ಶೋಕಾಸ್ ನೋಟಿಸ್ಗೆ ಮಾರ್ಚ್ 2ರೊಳಗೆ ಉತ್ತರಿಸುವಂತೆ ಕಸಾಪ ಮಾಜಿ ಅಧ್ಯಕ್ಷ ಮಹೇಶ್ ಜೋಶಿ ಅವರಿಗೆ ಕರ್ನಾಟಕ ಹೈಕೋರ್ಟ್ ಬುಧವಾರ ನಿರ್ದೇಶನ ನೀಡಿದೆ.
ಅಲ್ಲದೆ, ಈ ಪ್ರಕರಣದಲ್ಲಿ ಮಹೇಶ್ ಜೋಶಿ ಅವರ ವಿರುದ್ಧ ತಳೆಯುವ ಯಾವುದೇ ದಂಡನೀಯ ನಿಲುವನ್ನು (ಕ್ರಮವನ್ನು) ಮುಂದಿನ ವಿಚಾರಣೆಯವರೆಗೆ ಜಾರಿಗೊಳಿಸಬಾರದು ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸ್ಪಷ್ಟ ಸೂಚನೆ ನೀಡಿದೆ.
ಕಸಾಪ ಅಕ್ರಮಗಳಿಗೆ ಸಂಬಂಧಿಸಿದಂತೆ ಆಡಳಿತಾಧಿಕಾರಿ ನೀಡಿರುವ ಶೋಕಾಸ್ ನೋಟಿಸ್ ಅನ್ನು ಪ್ರಶ್ನಿಸಿ ಮಹೇಶ್ ಜೋಶಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಬಿ.ಎಂ. ಶ್ಯಾಮ್ ಪ್ರಸಾದ್ ಅವರ ನೇತೃತ್ವದ ಏಕಸದಸ್ಯ ಪೀಠವು ನಡೆಸಿತು.
ಇದನ್ನು ಓದಿದ್ದೀರಾ? ಪ್ರೀಮಿಯಂ ಲೇಖನ | ಜಾಗತಿಕ ಆರ್ಥಿಕತೆಯ ಅವಳಿ ಅಸ್ತ್ರಗಳು: ಐಎಂಎಫ್, ವಿಶ್ವಬ್ಯಾಂಕ್ನ ಒಳಹೊರಗು
ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಪೀಠವು, “ಶೋಕಾಸ್ ನೋಟಿಸ್ಗೆ ಪ್ರತಿಕ್ರಿಯೆ ಸಲ್ಲಿಸುವ ಕಾಲಾವಧಿ ಈಗಾಗಲೇ ಮುಕ್ತಾಯಗೊಂಡಿದ್ದರೂ, ಅರ್ಜಿದಾರರಿಗೆ ತಮ್ಮ ಉತ್ತರ ಸಲ್ಲಿಸಲು ಸಕಾರಣವಾದ ಕಾಲಾವಕಾಶ ಒದಗಿಸಬೇಕಿದೆ. ಹೀಗಾಗಿ ಮಾರ್ಚ್ 2ರ ಒಳಗೆ ಜೋಶಿ ಅವರು ನೋಟಿಸ್ಗೆ ಉತ್ತರಿಸಬೇಕು. ಎಲ್ಲಾ ವಿಚಾರಗಳನ್ನು ಪರಿಗಣಿಸಲಾಗಿದ್ದು, ಮುಂದಿನ ವಿಚಾರಣೆಯವರೆಗೆ ಜೋಶಿ ವಿರುದ್ಧ ಕೈಗೊಳ್ಳುವ ಕ್ರಮವನ್ನು ಜಾರಿಗೊಳಿಸಕೂಡದು” ಎಂದು ಸರ್ಕಾರಕ್ಕೆ ನಿರ್ದೇಶಿಸಿತು.
“ಮೇಲ್ನೋಟಕ್ಕೆ, ಆಡಳಿತಾಧಿಕಾರಿಗೆ ಶೋಕಾಸ್ ನೋಟಿಸ್ ನೀಡುವ ಅಧಿಕಾರ ವ್ಯಾಪ್ತಿ ಇದೆಯೇ ಎಂಬುದನ್ನು ಸಮರ್ಥಿಸಿದ್ದಾರೆಯೇ ಎಂಬ ಪ್ರಶ್ನೆ ಇದೆ. ಈ ಕುರಿತು ಪಕ್ಷಕಾರರ ವಾದ ಆಲಿಸಿದ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು” ಎಂದು ನ್ಯಾಯಾಲಯ ಆದೇಶದಲ್ಲಿ ಉಲ್ಲೇಖಿಸಿದೆ.





