ರೈಲ್ವೆ ಇಲಾಖೆಯ ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಕಡೆಗಣಿಸಲಾಗಿತ್ತು. ಇದನ್ನು ವಿರೋಧಿಸಿ ಕನ್ನಡಪರ ಹೋರಾಟಗಾರರು ನಡೆಸಿದ ಹೋರಾಟಕ್ಕೆ ಅಧಿಕಾರಿಗಳು ಮಣಿಸಿದ್ದಾರೆ. ಮಂಗಳವಾರ (ಮಾರ್ಚ್ 17)ರಂದು ನಡೆಯಬೇಕಿದ್ದ ಪರೀಕ್ಷೆ ರದ್ದಾಗಿದೆ. ಪರೀಕ್ಷೆಯನ್ನು ರದ್ದುಗೊಳಿಸಿ ರೈಲ್ವೆ ಇಲಾಖೆ ದಿಢೀರ್ ಆದೇಶ ಹೊರಡಿಸಿದೆ.
ರೈಲ್ವೆಯ ಮುಂಬಡ್ತಿ ಪರೀಕ್ಷೆಯಲ್ಲಿ ಇಂಗ್ಲಿಷ್ ಮತ್ತು ಹಿಂದಿ ಭಾಷೆಯಲ್ಲಿ ಮಾತ್ರವೇ ಪ್ರಶ್ನೆಗಳಿದ್ದವು. ಉತ್ತರವನ್ನೂ ಈ ಎರಡು ಭಾಷೆಗಳಲ್ಲಿಯೇ ಬರೆಯಬೇಕಿತ್ತು. ಕನ್ನಡ ಭಾಷೆಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಇಲ್ಲದಿರುವುದನ್ನು ಖಂಡಿಸಿ, ಕನ್ನಡಪರ ಸಂಘಟನೆಗಳು ಹೋರಾಟಕ್ಕಿಳಿದಿದ್ದವು.
ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಬೇಕೆಂದು ತಮ್ಮ ಕಾರ್ಯಕರ್ತರಿಗೆ ಕರ್ನಾಟಕ ರಕ್ಷಣಾ ವೇದಿಕೆಯ (ಕರವೇ) ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಕರೆಕೊಟ್ಟಿದ್ದರು. ಅದಂತೆ, ಪರೀಕ್ಷೆಗಳು ನಡೆಯುತ್ತಿದ್ದ ಬೆಂಗಳೂರು, ಹುಬ್ಬಳ್ಳಿ, ದಾವಣಗೆರೆ, ಮೈಸೂರು ಸೇರಿದಂತೆ ಹಲವು ಪರೀಕ್ಷಾ ಕೇಂದ್ರಗಳಿಗೆ ಕನ್ನಡಪರ ಹೋರಾಟಗಾರರು ಮುತ್ತಿಗೆ ಹಾಕಿ, ಪ್ರತಿಭಟನೆ ನಡೆಸಿದ್ದಾರೆ. ಅಲ್ಲದೆ, ಹುಬ್ಬಳ್ಳಿಯ ಆರ್ಆರ್ಸಿ (RRC) ಕಚೇರಿಯ ಎದುರು ಕೂಡ ಪ್ರತಿಭಟನೆಗಳು ನಡೆದಿವೆ.
ಈ ಲೇಖನ ಓದಿದ್ದೀರಾ?: ವರದಕ್ಷಿಣೆ ಸಾವು | 3 ತಿಂಗಳಲ್ಲಿ 508 ಮಂದಿಗೆ ಜಾಮೀನು: ಹೈಕೋರ್ಟ್ ನ್ಯಾಯಾಧೀಶರಿಗೆ ಸುಪ್ರೀಂ…
ಪ್ರತಿಭಟನೆಗಳಿಗೆ ಮಣಿದ ರೈಲ್ವೆ ಅಧಿಕಾರಿಗಳು ನಡೆಯುತ್ತಿದ್ದ ಪರೀಕ್ಷೆಯನ್ನು ಅರ್ಧಕ್ಕೆ ರದ್ದುಗೊಳಿಸಿದ್ದಾರೆ. ಪರೀಕ್ಷೆಯನ್ನು ಮುಂದೂಡಿದ್ದಾರೆ. ಪರೀಕ್ಷೆಗೆ ಹಾಜರಾಗಿದ್ದ ಅಭ್ಯರ್ಥಿಗಳು ಅರ್ಧದಲ್ಲಿಯೇ ಪರೀಕ್ಷೆ ಬಿಟ್ಟು ಹೊರಬಂದಿದ್ದಾರೆ. ಕನ್ನಡದಲ್ಲಿ ಪರೀಕ್ಷೆ ಬರೆಯುವುದರಿಂದ ವಂಚಿತರಾಗಿದ್ದ ಅಭ್ಯರ್ಥಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.
ಪರೀಕ್ಷೆ ಮುಂದೂಡಿಕೆ ಕುರಿತು ಮಾತನಾಡಿದ ಹುಬ್ಬಳ್ಳಿ ಆರ್ಆರ್ಸಿ ಚೇರ್ಮನ್ ಆಸಿಫ್ ಅನ್ಸಾರಿ, “ಪರೀಕ್ಷೆಯನ್ನು ಕನ್ನಡದಲ್ಲಿ ನಡೆಸುವ ಬಗ್ಗೆ ಮೇಲಧಿಕಾರಿಗಳು ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಪರೀಕ್ಷೆಯ ಮುಂದಿನ ದಿನಾಂಕವನ್ನು ಶೀಘ್ರವೇ ಪ್ರಕಟಿಸಲಾಗುವುದು” ಎಂದು ತಿಳಿಸಿದ್ದಾರೆ.




