ಹೊಸ ವರ್ಷಾಚರಣೆಯ ಸಂಭ್ರಮದ ವೇಳೆ ನಗರದಲ್ಲಿ ಮಹಿಳೆಯರ ಸುರಕ್ಷತೆಗಾಗಿ ಕೈಗೊಂಡಿರುವ ಮುಂಜಾಗ್ರತಾ ಕ್ರಮಗಳ ಕುರಿತು ತುರ್ತು ವರದಿ ನೀಡುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗವು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಸೂಚಿಸಿದೆ.
ಈ ಕುರಿತು ಸೋಮವಾರ (ಡಿ.29) ಪತ್ರ ಬರೆದಿರುವ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು, ಡಿಸೆಂಬರ್ 31 ಮತ್ತು ಜನವರಿ 1ರ ಮಧ್ಯರಾತ್ರಿ ನಗರದಾದ್ಯಂತ ದೊಡ್ಡ ಸಂಖ್ಯೆಯಲ್ಲಿ ಜನರು ಸೇರುವ ನಿರೀಕ್ಷೆಯಿದ್ದು, ಇದರಲ್ಲಿ ಮಹಿಳೆಯರು ಮತ್ತು ಯುವತಿಯರು ಹೆಚ್ಚಿನ ಸಂಖ್ಯೆಯಲ್ಲಿ ಇರಲಿದ್ದಾರೆ ಎಂದು ಉಲ್ಲೇಖಿಸಿದ್ದಾರೆ.
ಸುರಕ್ಷತೆಗೆ ಆದ್ಯತೆ
ಡಿಸೆಂಬರ್ 31ರ ಬೆಳಿಗ್ಗೆಯಿಂದಲೇ ಸಂಭ್ರಮಾಚರಣೆಗಳು ಪ್ರಾರಂಭವಾಗಲಿವೆ. ಆಚರಣೆ ನಡೆಯುವ ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರಿಗೆ ರಕ್ಷಣೆ ನೀಡುವುದು ಹಾಗೂ ಅವರು ಸುರಕ್ಷಿತವಾಗಿ ತಮ್ಮ ಮನೆಗಳಿಗೆ ಮರಳುವುದನ್ನು ಖಚಿತಪಡಿಸಿಕೊಳ್ಳಲು ಇಲಾಖೆ ಯಾವೆಲ್ಲಾ ಕ್ರಮಗಳನ್ನು ಕೈಗೊಂಡಿದೆ ಎಂಬುದನ್ನು ವಿವರಿಸುವಂತೆ ಆಯೋಗವು ಕೋರಿದೆ.
ಯಾವುದೇ ಭದ್ರತಾ ಲೋಪಗಳು ಉಂಟಾಗದಂತೆ ತಡೆಯಲು ಆಯಾ ವ್ಯಾಪ್ತಿಯ ಪೊಲೀಸ್ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಹಾಗೂ ಕೈಗೊಂಡ ಕ್ರಮಗಳ ವರದಿಯನ್ನು ಎರಡು ದಿನಗಳ ಒಳಗಾಗಿ ಸಲ್ಲಿಸಬೇಕು ಎಂದು ಆಯೋಗವು ತಾಕೀತು ಮಾಡಿದೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಇನ್ನಾದರೂ ಪ್ರೀತಿ ಬಿತ್ತೋಣ, ಮಾನವೀಯತೆ ಮೆರೆಯೋಣ…
ಪೊಲೀಸ್ ಇಲಾಖೆಯ ಸಿದ್ಧತೆ
ಇದಕ್ಕೂ ಮುನ್ನ, ಡಿಸೆಂಬರ್ 26ರಂದು ಮಾತನಾಡಿದ್ದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ ಕುಮಾರ್ ಸಿಂಗ್, ಹೊಸ ವರ್ಷಾಚರಣೆಗೆ ಸಮಗ್ರ ಭದ್ರತಾ ಯೋಜನೆಯನ್ನು ರೂಪಿಸಲಾಗಿದೆ ಎಂದು ತಿಳಿಸಿದ್ದರು. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳಾ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗುವುದು, ಜೊತೆಗೆ ಮಹಿಳೆಯರಿಗಾಗಿ ಪ್ರತ್ಯೇಕ ‘ಹೆಲ್ಪ್ ಡೆಸ್ಕ್’ ಮತ್ತು ಶೌಚಾಲಯ ವ್ಯವಸ್ಥೆಗಳನ್ನು ಕಲ್ಪಿಸಲಾಗುವುದು ಎಂದು ಭರವಸೆ ನೀಡಿದ್ದರು. ಸಾರ್ವಜನಿಕರು ಯಾವುದೇ ಅಶಿಸ್ತಿನ ವರ್ತನೆ ಅಥವಾ ಕಿರುಕುಳವನ್ನು ಗಮನಿಸಿದರೆ ತಕ್ಷಣ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡುವಂತೆ ಮನವಿ ಮಾಡಿದ್ದರು.
ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ಇಂದಿರಾನಗರ ಮತ್ತು ಕೋರಮಂಗಲದಂತಹ ಪ್ರಮುಖ ವಾಣಿಜ್ಯ ಪ್ರದೇಶಗಳಲ್ಲಿ ವಾಹನ ಸಂಚಾರ ಬದಲಾವಣೆ ಮತ್ತು ನಿರ್ಬಂಧಗಳನ್ನು ಈಗಾಗಲೇ ಘೋಷಿಸಲಾಗಿದೆ.
ಮಾಧ್ಯಮಗಳ ಅತಿರೇಕದ ಬಗ್ಗೆ ಕಳವಳ
ಕಳೆದ ಎರಡು ವರ್ಷಗಳಲ್ಲಿ ಹೊಸ ವರ್ಷಾಚರಣೆಯ ವರದಿಗಾರಿಕೆಯ ಹೆಸರಿನಲ್ಲಿ ಕೆಲವು ಸ್ಥಳೀಯ ಸುದ್ದಿ ವಾಹಿನಿಗಳು ನಡೆದುಕೊಂಡ ರೀತಿ ಟೀಕೆಗೆ ಗುರಿಯಾಗಿತ್ತು. ಜನನಿಬಿಡ ಎಂ.ಜಿ. ರಸ್ತೆ, ಚರ್ಚ್ ಸ್ಟ್ರೀಟ್ ಮುಂತಾದ ಕಡೆಗಳಲ್ಲಿ ಮಹಿಳೆಯರು ಮತ್ತು ಜೋಡಿಗಳನ್ನು ಕ್ಯಾಮೆರಾ ಹಿಡಿದು ಬೆನ್ನಟ್ಟುವುದು ಹಾಗೂ ಅಸಭ್ಯವಾಗಿ ವರ್ತಿಸುವ ಮೂಲಕ ಅವರ ಖಾಸಗಿತನಕ್ಕೆ ಧಕ್ಕೆ ತಂದಿರುವ ಬಗ್ಗೆ ವರದಿಗಳಾಗಿದ್ದವು. ಈ ಬಾರಿಯಾದರೂ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರ ವಹಿಸಬೇಕಿದೆ ಎಂಬ ಒತ್ತಾಯವೂ ಕೇಳಿಬಂದಿದೆ.





