ಕಲಬುರಗಿಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಅಚ್ಚರಿಯ ಅಭ್ಯರ್ಥಿ ಹೆಸರು ಕೇಳಿ ಬರುತ್ತಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಟಿಕೆಟ್ ಆಕಾಂಕ್ಷಿಗಳಲ್ಲಿ ಮುಂಚೂಣಿಯಲ್ಲಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
81 ವರ್ಷ ವಯಸ್ಸಿನ ಮಲ್ಲಿಕಾರ್ಜುನ ಖರ್ಗೆ ಅವರು 2019ರ ಲೋಕಸಭಾ ಚುನಾವಣೆಯಲ್ಲಿ ಪರಾಭವಗೊಂಡಿದ್ದರು.
”ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಸಕ್ರಿಯರಾಗಿದ್ದು, ಪಕ್ಷದ ಅಧ್ಯಕ್ಷರಾಗಿ ರಾಷ್ಟ್ರಮಟ್ಟದಲ್ಲಿ ಪಕ್ಷವನ್ನು ಮುನ್ನಡೆಸುತ್ತಿದ್ದಾರೆ. ಇದಲ್ಲದೆ ‘ಇಂಡಿಯಾ’ ಮೈತ್ರಿಕೂಟದಲ್ಲೂ ಮಿತ್ರಪಕ್ಷಗಳೊಂದಿಗೆ ಸಮನ್ವಯ ಸಾಧಿಸುತ್ತಿದ್ದಾರೆ.
”ಖರ್ಗೆಯವರಿಗೆ ರಾಜ್ಯಸಭೆಯಲ್ಲಿ ಇನ್ನೂ ನಾಲ್ಕು ವರ್ಷಗಳಿಗೂ ಹೆಚ್ಚಿನ ಅವಧಿಯಿದೆ. ಈ ಹಿನ್ನೆಲೆಯಲ್ಲಿ ಅವರು ಲೋಕಸಭೆಯಲ್ಲಿ ಸ್ಪರ್ಧಿಸುವ ಸಾಧ್ಯತೆ ಕಡಿಮೆಯಿದೆ” ಎಂದು ಹೆಸರೇಳದ ಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ.
ಖರ್ಗೆ ಅವರ ಪುತ್ರ ಪ್ರಿಯಾಂಕ್ ಖರ್ಗೆ ಅವರು ಕಲಬುರಗಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಚಿತ್ತಾಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದು, ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಮಂತ್ರಿಯಾಗಿ ಕೂಡ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು ಲೋಕಸಭೆಯಲ್ಲಿ ಸ್ಪರ್ಧಿಸುವ ಆಸಕ್ತಿ ಹೊಂದಿಲ್ಲ.
ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಉದ್ಯಮಿಯಾಗಿದ್ದು, ಹಲವಾರು ಶೈಕ್ಷಣಿಕ ಸಂಸ್ಥೆಗಳನ್ನು ಮುನ್ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ರಾಧಾಕೃಷ್ಣ ಅವರು ಲೋಕಸಭೆಯಿಂದ ಕಣಕ್ಕಿಳಿಯಲು ಮುಂಚೂಣಿಯಲ್ಲಿರುವಂತೆ ತೋರುತ್ತದೆ ಎಂದು ಹಿರಿಯ ಕಾಂಗ್ರೆಸ್ ನಾಯಕರು ಹೇಳುತ್ತಾರೆ.
ಸ್ವಕ್ಷೇತ್ರ ಕಲಬುರಗಿಯಲ್ಲಿ ಸ್ಪರ್ಧಿಸಬೇಕೋ ಅಥವಾ ಬೇಡವೋ ಎಂಬುದನ್ನು ಪಕ್ಷದ ಪ್ರಮುಖ ನಾಯಕರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಒಳಗೊಂಡು ಹಿರಿಯ ನಾಯಕರೊಂದಿಗೆ ಸಮಾಲೋಚಿಸಿ ಅಂತಿಮ ನಿರ್ಧಾರವನ್ನು ಖರ್ಗೆ ಅವರು ನಿರ್ಧರಿಸುತ್ತಾರೆ ಎಂದು ಪಕ್ಷದ ಮೂಲಗಳು ಹೇಳುತ್ತವೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ವಿದೇಶಿ ಪ್ರವಾಸಿ ಮೇಲೆ ಅತ್ಯಾಚಾರ; ʼಅತಿಥಿ ದೇವೋಭವʼ ಎಂದ ದೇಶದಲ್ಲಿ ಇದೆಂಥಾ ಕ್ರೌರ್ಯ!
ದೊಡ್ಡಮನಿ ಅವರಿಗೆ ಆರಂಭದಲ್ಲಿ ರಾಜಕೀಯಕ್ಕೆ ಬರಲು ಆಸಕ್ತಿಯಿರಲಿಲ್ಲ. ಆದರೆ ಕಾರ್ಯಕರ್ತರ ಒತ್ತಾಯದ ಮೇರೆಗೆ ಕಣಕ್ಕಿಳಿಯಲು ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಇದಲ್ಲದೆ ಕಲಬುರಗಿಯಲ್ಲಿ ಅಳಿಯ ರಾಧಾಕೃಷ್ಣ ಸ್ಪರ್ಧಿಸಬೇಕೋ ಅಥವಾ ಇತರರಿಗೆ ಟಿಕೆಟ್ ನೀಡಬೇಕೋ ಎಂಬ ತೀರ್ಮಾನವನ್ನು ಖರ್ಗೆ ತೆಗೆದುಕೊಳ್ಳಲಿದ್ದಾರೆ ಎಂದು ಪಕ್ಷದ ಮೂಲಗಳು ಹೇಳುತ್ತವೆ.
ಕಲಬುರಗಿಯಲ್ಲಿ ಜನಿಸಿದ ದೊಡ್ಡಮನಿ ಅವರು ರಾಜಕೀಯ ಚಟುವಟಿಕೆಗಳಲ್ಲಿ ನೇರವಾಗಿ ಭಾಗವಹಿಸಿದ್ದು ಕಡಿಮೆ. ಆದರೆ ಖರ್ಗೆಯವರ ಚುನಾವಣಾ ಗೆಲುವಿನ ಯಶಸ್ಸಿನ ಹಿಂದೆ ತೆರೆಮರೆಯಲ್ಲಿ ಕಾರ್ಯತಂತ್ರವನ್ನು ನಿರ್ವಹಿಸಿದ್ದಾರೆ.
ಕಳೆದ ಮೂರು ದಶಕಗಳಿಂದ ಖರ್ಗೆ ಪ್ರತಿನಿಧಿಸುತ್ತಿದ್ದ ವಿಧಾನಸಭಾ ಸ್ವಕ್ಷೇತ್ರವಾದ ಗುರುಮಿಠಕಲ್ನಲ್ಲಿ ತಮ್ಮ ಮಾವನ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಕಾರ್ಯಕರ್ತರು ಹಾಗೂ ಬೆಂಬಲಿಗರು ಹೇಳುತ್ತಾರೆ.
ಇತ್ತೀಚಿಗೆ ಕಲಬುರಗಿಯಲ್ಲಿ ನಡೆದ ಪಕ್ಷದ ಶಾಸಕರು ಹಾಗೂ ಕಾರ್ಯಕರ್ತರ ಸಭೆಯಲ್ಲಿ ರಾಧಾಕೃಷ್ಣ ಕಣಕ್ಕಿಳಿಸುವ ಬಗ್ಗೆ ಚರ್ಚಿಸಲಾಗಿತ್ತು. ಒಂದು ವೇಳೆ ಟಿಕೆಟ್ ನೀಡಿದರೆ ಗೆಲ್ಲಿಸಿಕೊಂಡು ಬರುವುದಾಗಿ ಸಭೆಯಲ್ಲಿ ಪಾಲ್ಗೊಂಡ ಕಾರ್ಯಕರ್ತರು ಹೇಳಿದ್ದರು.
ತಮ್ಮ 50 ವರ್ಷದ ರಾಜಕೀಯ ಜೀವನದಲ್ಲಿ ಒಮ್ಮೆಯೂ ಸೋಲದೆ ಸೋಲಿಲ್ಲದ ಸರದಾರ ಎನಿಸಿಕೊಂಡಿದ್ದ ಕಾಂಗ್ರೆಸ್ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ 2019ರ ಲೋಕಸಭಾ ಚುನಾವಣೆಯಲ್ಲಿ ಮೊದಲ ಬಾರಿಗೆ ಬಿಜೆಪಿ ಅಭ್ಯರ್ಥಿ ವಿರುದ್ಧ ಪರಾಭವಗೊಂಡಿದ್ದರು.
ಕಾಂಗ್ರೆಸ್ ಶಾಸಕರಾಗಿದ್ದ ಉಮೇಶ್ ಜಾಧವ್ ಸ್ವಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿ ಕಲಬುರಗಿಯಿಂದ ಸ್ಪರ್ಧಿಸಿದ್ದ ಖರ್ಗೆ ಅವರನ್ನು 2019ರಲ್ಲಿ ಸೋಲಿಸಿದ್ದರು.
ತಮ್ಮ ಮೊದಲ ಸೋಲಿಗೂ ಮುನ್ನ ಖರ್ಗೆ ಅವರು 9 ಬಾರಿ ಶಾಸಕ ಹಾಗೂ ಎರಡು ಬಾರಿ ಲೋಕಸಭಾ ಸದಸ್ಯರಾಗಿದ್ದರು.
2019ರಲ್ಲಿ ಕಾಂಗ್ರೆಸ್ನ ಪ್ರಮುಖ ನಾಯಕರಾದ ಬಾಬುರಾವ್ ಚಿಂಚನಸೂರ್, ಎ ಬಿ ಮಾಲಕರೆಡ್ಡಿ, ಮಾಲಿಕಯ್ಯ ಗುತ್ತೇದಾರ್ ರಾಜೀನಾಮೆ ನೀಡಿ ಬಿಜೆಪಿ ಸೇರಿ ಖರ್ಗೆಯ ವಿರುದ್ಧ ಕೆಲಸ ಮಾಡಿದ್ದರು.
ಎರಡು ಬಾರಿ ಲೋಕಸಭಾ ಸದಸ್ಯರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಅವರು ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಹಾಗೂ ಮನ್ಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದಲ್ಲಿ ರೈಲ್ವೆ, ಕಾರ್ಮಿಕ ಖಾತೆ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ.
ರಾಜ್ಯದಲ್ಲೂ ಕೂಡ ಹಲವು ಬಾರಿ ಸಚಿವ, ವಿಪಕ್ಷ ನಾಯಕ, ಕೆಪಿಸಿಸಿ ಅಧ್ಯಕ್ಷ ಸೇರಿದಂತೆ ಹಲವು ಹುದ್ದೆಗಳನ್ನು ನಿರ್ವಹಿಸಿದ್ದಾರೆ.
ಕಲಬುರಗಿ ಕಾಂಗ್ರೆಸ್ನ ಭದ್ರಕೋಟೆಯಾಗಿದ್ದು, 2019, 1998 ರಲ್ಲಿ ಬಿಜೆಪಿ ಹಾಗೂ 1996 ರಲ್ಲಿ ಜನತಾ ಪರಿವಾರದ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದು ಬಿಟ್ಟರೆ 1952ರಿಂದಲೂ ಕಾಂಗ್ರೆಸ್ ಅಭ್ಯರ್ಥಿಗಳು ಜಯದ ಪತಾಕೆ ಹಾರಿಸುತ್ತಿದ್ದಾರೆ.
ಕಲಬುರಗಿ ಲೋಕಸಭಾ ವ್ಯಾಪ್ತಿಯಲ್ಲಿ ಎಂಟು ಕ್ಷೇತ್ರಗಳಿದ್ದು, ಸದ್ಯ 6 ಕಾಂಗ್ರೆಸ್ ಹಾಗೂ ತಲಾ ಒಬ್ಬ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರಿದ್ದಾರೆ.





