ಗ್ರಾಮಗಳ ಸಮಗ್ರ ಪ್ರಗತಿಯ ಆಶಯವನ್ನು ಹೊಂದಿದ ‘ಕಾಯಕ ಗ್ರಾಮ’ ಪರಿಕಲ್ಪನೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಚಾಲನೆ ನೀಡಿದರು.
ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ವಿಡಿಯೊ ಸಭೆಯಲ್ಲಿ ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಅನಾವರಣಗೊಳಿಸಿದ ಸಚಿವರು, “ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಆಡಳಿತ ವಿಭಾಗವು ಪಂಚತಂತ್ರ 2.0 ತಂತ್ರಾಂಶದಲ್ಲಿ ಗ್ರಾಮ ಪಂಚಾಯತ್ ಕಾರ್ಯಕ್ಷಮತೆ ಶ್ರೇಯಾಂಕ ವರದಿಯಲ್ಲಿ ಗುರುತಿಸುವಂತೆ ಕೊನೆಯ ಸ್ಥಾನಗಳಲ್ಲಿರುವ ಗ್ರಾಮ ಪಂಚಾಯತಿಗಳನ್ನು ವೈಜ್ಞಾನಿಕವಾಗಿ ಆಯ್ಕೆ ಮಾಡಿಕೊಂಡು ಅಂತಹ ಗ್ರಾಮ ಪಂಚಾಯತಿಗಳ ಸಮರ್ಪಕ ಹಾಗೂ ನಿಗದಿತವಾಗಿ ಪರಿವೀಕ್ಷಣೆ ಮಾಡುವುದು, ಮಾರ್ಗದರ್ಶನ ನೀಡುವುದಲ್ಲದೆ ವಿವಿಧ ಅಭಿವೃದ್ಧಿ ಇಲಾಖೆಗಳ ಸಮನ್ವಯ ಕಾರ್ಯಕೈಗೊಂಡು ಗ್ರಾಮ ಪಂಚಾಯತಿಗಳ ಸಮಗ್ರ ಅಭಿವೃದ್ಧಿಯನ್ನು ಸಾಧಿಸುವ ಜವಾಬ್ದಾರಿಯನ್ನುತಾಲ್ಲೂಕು, ಜಿಲ್ಲೆ ಮತ್ತು ರಾಜ್ಯ ಮಟ್ಟದಲ್ಲಿ ಅಧಿಕಾರಿಗಳು ವಹಿಸಿಕೊಳ್ಳುವ ಮೂಲಕ ಗ್ರಾಮಗಳ ಸಮಗ್ರ ಪ್ರಗತಿಯ ಆಶಯ ಇದರ ಹಿಂದಿದೆ” ಎಂದರು.
“ಮಹಾತ್ಮ ಗಾಂಧೀಜಿಯವರು ಗ್ರಾಮ ಸ್ವರಾಜ್ಯದ ಮೂಲಕ ಸ್ವಾವಲಂಬಿ ಗ್ರಾಮಗಳ ಕನಸು ಕಂಡಿದ್ದರು, ಈ ನಿಟ್ಟಿನಲ್ಲಿ 2025-26ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳಿಂದ ಗ್ರಾಮ ಪಂಚಾಯತಿಗಳನ್ನು ದತ್ತು ಪಡೆದು ಸಮಗ್ರವಾಗಿ ಅಭಿವೃದ್ಧಿಪಡಿಸುವ ಉದ್ದೇಶದಿಂದ ಗ್ರಾಮ ಪಂಚಾಯತಿ ದತ್ತು ಕಾರ್ಯಕ್ರಮವನ್ನು ಆರಂಭಿಸಲಾಗುವುದು ಎಂದು ಮುಖ್ಯಮಂತ್ರಿಗಳು ಘೋಷಿಸಿದ್ದರು. ಈ ಘೋಷಣೆಯನ್ನು ಈಡೇರಿಸಲು ‘ಕಾಯಕ ಗ್ರಾಮʼ ಕಾರ್ಯಕ್ರಮವನ್ನು ರೂಪಿಸಲಾಗಿದೆ” ಎಂದು ತಿಳಿಸಿದರು.
“ಬಸವಣ್ಣನನವರ ಸಂದೇಶದಂತೆ ಕಾಯಕದ ಮೂಲಕ ಎಲ್ಲವನ್ನೂ ಸಾಧಿಸಬಹುದು, ಈ ಸಂದೇಶವನ್ನು ಸಾಕಾರಗೊಳಿಸುವ ಧ್ಯೇಯದೊಂದಿಗೆ ಕಾಯಕ ಗ್ರಾಮ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಜಿಲ್ಲಾ ಪಂಚಾಯತಿ ಮಟ್ಟದಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಸೇರಿದಂತೆ ಆರು ಮಂದಿ ಅಧಿಕಾರಗಳು, ತಾಲ್ಲೂಕು ಮಟ್ಟದಲ್ಲಿ ಮೂವರು ಅಧಿಕಾರಿಗಳು ಹಾಗೂ ರಾಜ್ಯ ಮಟ್ಟದಲ್ಲಿ ಜಿಲ್ಲಾವಾರು ನೇಮಕ ಮಾಡಲಾಗಿರುವ ನೋಡಲ್ ಅಧಿಕಾರಿಗಳು ಹಿಂದುಳಿದಿರುವಂತಹ ತಲಾ ಎರಡು ಗ್ರಾಮ ಪಂಚಾಯತಿಗಳನ್ನು ಆಯ್ಕೆ ಮಾಡಿಕೊಳ್ಳಬೇಕಾಗಿದ್ದು, ಈಗಾಗಲೇ ಈ ಉದ್ದೇಶಕ್ಕಾಗಿ 1310 ಗ್ರಾಮ ಪಂಚಾಯತಿಗಳನ್ನು ಗುರುತಿಸಲಾಗಿದೆ, ಈ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಅಧಿಕಾರಿಗಳು ಜಿಲ್ಲಾ ಪಂಚಾಯತಿ ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತರುವ ಮೂಲಕ ತೀವ್ರ ತೆರನಾದ ಚಟುವಟಿಕೆಗಳನ್ನು ಹಮ್ಮಿಕೊಂಡು ಕಾಲಮಿತಿಯಲ್ಲಿ ಗ್ರಾಮಗಳ ಅಭಿವೃದ್ಧಿಗಾಗಿ ಕಾರ್ಯನಿರ್ವಹಿಸಬೇಕು” ಎಂದು ಸೂಚನೆ ನೀಡಿದರು.
“ಆಯ್ಕೆ ಮಾಡಿಕೊಂಡ ಗ್ರಾಮ ಪಂಚಾಯತಿಗಳ ಸ್ಥಿತಿಗತಿಗಳನ್ನು ಅಧ್ಯಯನ ನಡೆಸಿ ಸುಧಾರಣೆಯಾಗಬೇಕಾಗಿರುವ ಅಂಶಗಳ ಕುರಿತಂತೆ ಜನಪ್ರತಿನಿಧಿಗಳ ಸಹಭಾಗಿತ್ವದಲ್ಲಿ ಕ್ರಿಯಾ ಯೋಜನೆಯನ್ನು ರೂಪಿಸಿಕೊಳ್ಳಬೇಕು. ಪ್ರತಿ ಹದಿನೈದು ದಿನಕ್ಕೊಮ್ಮೆ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ಪ್ರಗತಿಯನ್ನು ಪರಿಶೀಲಿಸಿ, ಅಗತ್ಯ ಸಲಹೆ ಹಾಗೂ ಸಮನ್ವಯ ಕಾರ್ಯಗಳನ್ನು ಕೈಗೊಳ್ಳುವುದು, ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಆಯುಕ್ತರು, ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯ ಹಾಗೂ ಸರ್ಕಾರದ ಕಾರ್ಯದರ್ಶಿಗಳು(ಪಂ.ರಾಜ್) ರವರು ಮಾಸಿಕ ಪ್ರಗತಿ ಪರಿಶೀಲನೆಯನ್ನು ಕೈಗೊಳ್ಳಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು ಬದ್ಧತಾಪೂರ್ಣವಾಗಿ ಕಾರ್ಯನಿರ್ವಹಿಸುವ ಮೂಲಕ ಕಾಯಕ ಗ್ರಾಮ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಬೇಕು” ಎಂದು ಸಲಹೆ ಮಾಡಿದರು.
ʼಕಾಯಕ ಗ್ರಾಮʼ ಅನುಷ್ಠಾನದಿಂದ ಆಶಿಸಲಾಗಿರುವ ಸುಧಾರಣೆಗಳ ಬಗ್ಗೆ ವಿವರಗಳನ್ನು ಹೊಂದಿದ ಕೈಪಿಡಿಯನ್ನು ಸಚಿವರು ಬಿಡುಗಡೆ ಮಾಡಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿ ಸಮೀರ್ ಶುಕ್ಲಾ, ಪಂಚಾಯತ್ ರಾಜ್ ಇಲಾಖೆಯ ಕಾರ್ಯದರ್ಶಿ ಡಿ.ರಂದೀಪ್, ಪಂಚಾಯತ್ ರಾಜ್ ಆಯುಕ್ತೆ ಡಾ.ಅರುಂಧತಿ ಚಂದ್ರಶೇಖರ್ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.





