ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ನೂರಾರು ಶವಗಳ ಅಕ್ರಮ ಅಂತ್ಯಕ್ರಿಯೆ ಪ್ರಕರಣದ ಬಗ್ಗೆ ತಮ್ಮ ಮೇಲೆ ಬಂದಿರುವ ಆರೋಪಗಳ ಕುರಿತು ತಮಿಳುನಾಡಿನ ತಿರುವಳ್ಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ಸಸಿಕಾಂತ್ ಸೆಂಥಿಲ್ ಅವರು ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ವಿರುದ್ಧ ನ್ಯಾಯಾಲಯ ಮೊರೆ ಹೋಗಿದ್ದಾರೆ.
‘ಧರ್ಮಸ್ಥಳಕ್ಕೆ ಕಳಂಕ ತರುವ ಪಿತೂರಿಯ ಹಿಂದಿನ ರೂವಾರಿ ಶಶಿಕಾಂತ ಸೆಂಥಿಲ್’ ಎಂದು ಆರೋಪಿಸಿದ್ದ ಜನಾರ್ದನ ರೆಡ್ಡಿ ವಿರುದ್ಧ ಶಶಿಕಾಂತ ಸೆಂಥಿಲ್ ಅವರು ಬೆಂಗಳೂರಿನಲ್ಲಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದಾರೆ.
ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ತಮ್ಮ ವಕೀಲರ ಮೂಲಕ ಬೆಳಿಗ್ಗೆ ಖುದ್ದು ಹಾಜರಾಗಿದ್ದರು. ಶಶಿಕಾಂತ ಸೆಂಥಿಲ್ ಪರ ಹಾಜರಾಗಿದ್ದ ಹೈಕೋರ್ಟ್ ವಕೀಲರಾದ ಸೂರ್ಯ ಮುಕುಂದರಾಜ್ ಮತ್ತು ಸಂಜಯ ಯಾದವ್, ದೂರನ್ನು ದಾಖಲು ಮಾಡಿಕೊಳ್ಳುವಂತೆ ಮ್ಯಾಜಿಸ್ಟ್ರೇಟ್ ಕೆ.ಎನ್.ಶಿವಕುಮಾರ್ ಅವರಿಗೆ ಮನವಿ ಮಾಡಿದರು. ಇದನ್ನು ಮಾನ್ಯ ಮಾಡಿದ ನ್ಯಾಯಾಧೀಶರು ಇದೇ ಸೆ.11ಕ್ಕೆ ದೂರಿನ ವಿಚಾರಣೆ ನಡೆಸುವುದಾಗಿ ತಿಳಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಸೆಂಥಿಲ್, “ಈಗ ನಡೆಯುತ್ತಿರುವ ಎಸ್ಐಟಿ ತನಿಖೆಯ ಹಿಂದಿನ ಚಿತ್ರಕಥೆಗಾರ ಮತ್ತು ಮಾಸ್ಟರ್ ಮೈಂಡ್ ಎಂದು ತಮ್ಮನ್ನು ತಪ್ಪಾಗಿ ಬಿಂಬಿಸಲಾಗಿದೆ. ಆರಂಭದಲ್ಲಿ, ನಾನು ಈ ಬಗ್ಗೆ ಪ್ರತಿಕ್ರಿಯಿಸದಿರಲು ನಿರ್ಧರಿಸಿದ್ದೆ. ಜನಾರ್ದನ ರೆಡ್ಡಿಯವರು ಆರೋಪ ಮಾಡಿದ ಸಂದರ್ಭದಲ್ಲಿ ನಾನು ಸಂಸತ್ತು ಅಧಿವೇಶನದಲ್ಲಿ ಭಾಗಿಯಾಗಿದ್ದೆ. ಅವರ ಆರೋಪಗಳು ಬಾಲಿಶವಾಗಿವೆ” ಎಂದರು.
“ಈ ಪ್ರಕರಣದಲ್ಲಿ ನನ್ನ ಹೆಸರನ್ನು ನಿತ್ಯವೂ ಎಳೆದು ತರಲಾಗುತ್ತಿದೆ. ಇದರ ಹಿಂದೆ ರಾಜಕೀಯ ದುರುದ್ದೇಶ ಅಡಗಿದೆ. ನಾನು ಬಲಪಂಥೀಯ ಚಟುವಟಿಕೆಗಳ ಬಗ್ಗೆ ಹೊಂದಿರುವ ನಿಲುವಿನಿಂದಾಗಿಯೇ ಕೆಲವರು ಇಂತಹ ಗುಲ್ಲೆಬ್ಬಿಸುತ್ತಿದ್ದಾರೆ. ಕರ್ನಾಟಕದ ಜನತೆಗೆ ಟೋಪಿ ಹಾಕುತ್ತಿದ್ದಾರೆ. ಜನಾರ್ದನ ರೆಡ್ಡಿ ಗಣಿ ಲೂಟಿ ಹೊಡೆದ ವ್ಯಕ್ತಿ. ಆತ ನ್ಯಾಯಮೂರ್ತಿಗಳನ್ನೇ ಬಿಟ್ಟಿಲ್ಲ” ಎಂದು ಕಿಡಿಕಾರಿದರು.
“ನನ್ನನ್ನು ಕ್ರಿಶ್ಚಿಯನ್ ಎಂದು ಪ್ರಚಾರ ಮಾಡಲಾಗುತ್ತಿದೆ. ಅಸಲಿಗೆ ಸುಬ್ರಹ್ಮಣ್ಯನ ಮತ್ತೊಂದು ಹೆಸರೇ ಸೆಂಥಿಲ್ ಎಂಬುದು ಇವರಿಗೆ ಗೊತ್ತಿಲ್ಲ. ನನ್ನ ವಿರುದ್ಧ ಯಾರೇ ಆಗಲಿ ಯಾವುದೇ ರೀತಿ ಇಲ್ಲಸಲ್ಲದ ಆರೋಪಗಳನ್ನು ಮಾಡಿದರೆ ಅಂಥವರ ವಿರುದ್ಧ ಖಂಡಿತವಾಗಿಯೂ ಕಾನೂನು ಕ್ರಮ ಕೈಗೊಳ್ಳುತ್ತೇನೆ” ಎಂದು ಇದೇ ವೇಳೆ ಎಚ್ಚರಿಸಿದರು.





