ಸೌಜನ್ಯ ಹತ್ಯೆ ಮತ್ತು ಧರ್ಮಸ್ಥಳದಲ್ಲಿ ದಶಕಗಳಿಂದ ಆದ ನಿಗೂಢ ಸಾವುಗಳ ಪ್ರಕರಣದಲ್ಲಿ ನ್ಯಾಯಕ್ಕಾಗಿ ಒತ್ತಾಯಿಸಿ ಆನ್ಲೈನ್ ಸಹಿ ಸಂಗ್ರಹ ಅಭಿಯಾನ ನಡೆಯುತ್ತಿದೆ.
ಆನ್ಲೈನ್ ಸಹಿ ಸಂಗ್ರಹ ಅಭಿಯಾನಕ್ಕೆ ಬಹುಭಾಷಾ ನಟ ಪ್ರಕಾಶ್ ರೈ ಬೆಂಬಲ ಘೋಷಿಸಿದ್ದಾರೆ. “ಈ ಹೋರಾಟದಲ್ಲಿ ನಾನೂ ಭಾಗಿಯಾಗಿದ್ದೇನೆ. ನೀವೂ ಭಾಗಿಯಾಗಿ” ಎಂದು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಕರೆ ನೀಡಿದ್ದಾರೆ.
ಈ ಅಭಿಯಾನದಲ್ಲಿ ಒಂದು ಲಕ್ಷ ಸಹಿ ಸಂಗ್ರಹ ಮಾಡುವ ಗುರಿ ಹೊಂದಲಾಗಿದೆ. ಸೌಜನ್ಯ ಹತ್ಯೆ ಮತ್ತು ಧರ್ಮಸ್ಥಳದಲ್ಲಿ ದಶಕಗಳಿಂದ ಆದ ನಿಗೂಢ ಸಾವುಗಳ ಸುಪ್ರೀಂ ಕೋರ್ಟ್ನ ಹಾಲಿ, ನಿವೃತ್ತ ನ್ಯಾಯಾಧೀಶರ ಉಸ್ತುವಾರಿಯಲ್ಲಿ ಎಸ್ಐಟಿ ತನಿಖೆ ಆಗಬೇಕು. ಕೋರ್ಟ್ ತೀರ್ಪಿನಲ್ಲೇ ಸ್ಪಷ್ಟವಾಗಿ ಉಲ್ಲೇಖವಾಗಿರುವಂತೆ, ‘ತನಿಖೆಯನ್ನು ಹಾಳು ಮಾಡಿದ ಅಧಿಕಾರಿಗಳ ಮೇಲೆ ಕ್ರಮ’ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ಸಹಿ ಸಂಗ್ರಹ ಅಭಿಯಾನ ನಡೆಯುತ್ತಿದೆ.
‘ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯ ಎಸ್ಡಿಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಮೇಲೆ 2012ರಲ್ಲಿ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆ’ ಎಂಬ ಆರೋಪದ ಈ ಪ್ರಕರಣವನ್ನು ಬೆಳ್ತಂಗಡಿ ಠಾಣಾ ಪೊಲೀಸರು ಪ್ರಾಥಮಿಕವಾಗಿ ತನಿಖೆ ನಡೆಸಿದ್ದರು. ಬಳಿಕ ತನಿಖೆಯನ್ನು ಸಿಐಡಿಗೆ ವಹಿಸಲಾಗಿತ್ತು. 2012ರ ನವೆಂಬರ್ 6ರಂದು ಸಿಐಡಿ ತನಿಖೆಯನ್ನು ಸಿಬಿಐಗೆ ವರ್ಗಾಯಿಸಿ ಸರ್ಕಾರ ಆದೇಶಿಸಿತ್ತು. ಸಿಬಿಐ, ಕಾರ್ಕಳದ ಸಂತೋಷ್ ರಾವ್ ಆರೋಪಿ ಎಂದು ಗುರುತಿಸಿತ್ತು. 2023ರ ಜುಲೈ 16ರಂದು ಸಿಬಿಐ ವಿಶೇಷ ನ್ಯಾಯಾಲಯ ಸಂತೋಷ್ ರಾವ್ ಖುಲಾಸೆಗೊಳಿಸಿತ್ತು.
ಸೌಜನ್ಯ ಪ್ರಕರಣ ಮತ್ತೆ ಈಗ ಮುನ್ನೆಲೆಗೆ ಬಂದಿದೆ. ಧರ್ಮಸ್ಥಳ ಗ್ರಾಮದಲ್ಲಿ ಹಲವಾರು ಶವಗಳ ಅಂತ್ಯಕ್ರಿಯೆ ಮಾಡಿದ ಸಾಕ್ಷಿದಾರ ಸಾಕ್ಷಿ ಹೇಳಲು ಮುಂದೆ ಬಂದಿದ್ದಾನೆ. ಈಗಾಗಲೇ ನ್ಯಾಯಾಲಯಕ್ಕೆ ಪೊಲೀಸ್ ರಕ್ಷಣೆಯಲ್ಲಿ ಹಾಜರಾಗಿ ತನ್ನ ಅಭಿಪ್ರಾಯ ದಾಖಲಿಸಿದ್ದಾನೆ.
ಈ ಹೋರಾಟದಲ್ಲಿ ನಾನೂ ಭಾಗಿಯಾಗಿದ್ದೇನೆ .. ನೀವೂ ಬನ್ನಿ #justasking pic.twitter.com/roAq1hS6UV
— Prakash Raj (@prakashraaj) July 17, 2025





