ಉತ್ತರ ಕರ್ನಾಟಕ ಭಾಗವನ್ನು ನಮ್ಮ ಸರ್ಕಾರ ನಿರ್ಲಕ್ಷ್ಯ ಮಾಡಿಲ್ಲ. ಈ ಭಾಗಕ್ಕೆ ಅಗತ್ಯವಾಗಿ ನಾನಾ ಅಭಿವೃದ್ಧಿ ಯೋಜನೆಗಳನ್ನು ರೂಪಿಸಿ, ಜಾರಿಗೊಳಿಸಿದ್ದೇವೆ. ಗ್ಯಾರಂಟಿ ಯೋಜನೆಗಳಿಗಾಗಿ 1.6 ಲಕ್ಷ ಕೋಟಿ ರೂ. ವೆಚ್ಚ ಮಾಡಿದ್ದು, ಇದರಲ್ಲಿ 46,276 ಕೋಟಿ ರೂ,ಗಳನ್ನು ಉತ್ತರ ಕರ್ನಾಟಕ ಭಾಗಕ್ಕೆ ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಕುರಿತಾದ ಚರ್ಚೆಯಲ್ಲಿ ಅವರು ಹಲವಾರು ವಿಚಾರಗಳನ್ನು ಮಂಡಿಸಿದರು. “ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ 42% ಜನರು ಉತ್ತರ ಕರ್ನಾಟಕ ಭಾಗದಲ್ಲಿದ್ದಾರೆ. ಆರ್ಥಿಕ ಮತ್ತು ಸಾಮಾಜಿಕ ಶಕ್ತಿ ತುಂಬುವ ಉದ್ದೇಶದಿಂದ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಉತ್ತರ ಮತ್ತು ದಕ್ಷಿಣ ಕರ್ನಾಟಕ ನಡುವಿನ ಅಸಮಾನತೆಯನ್ನು ಹೋಗಲಾಡಿಸಲು ಈ ಯೋಜನೆಗಳು ಮತ್ತು ಆರ್ಥಿಕ ಚಟುವಟಿಕೆಗಳು ಜಾರಿಯಲ್ಲಿವೆ. ಆರ್ಥಿಕ ಚಟುವಟಿಕೆಗಳಿಲ್ಲದೆ ಜಾತಿ ವ್ಯವಸ್ಥೆ ಹೋಗಲಾಡಿಸಲು ಸಾಧ್ಯವಿಲ್ಲ. ಆರ್ಥಿಕ ಚಟುವಟಿಕೆಗಳೊಂದಿಗೆ ಜಾತಿ ವ್ಯವಸ್ಥೆ ಹೋಗಲಾಡಿಸುವ ದೂರದೃಷ್ಟಿ ಸರ್ಕಾರದ್ದಾಗಿದೆ” ಎಂದು ತಿಳಿಸಿದರು.
“ರಾಜ್ಯದಲ್ಲಿ 82 ಸಕ್ಕರೆ ಕಾರ್ಖಾನೆಗಳಿದ್ದು , ಒಂದೇ ಒಂದು ಸರ್ಕಾರಿ ಸ್ವಾಮ್ಯದ ಸಕ್ಕರೆ ಕಾರ್ಖಾನೆ ಇದೆ. 17 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕಬ್ಬು ಬೆಳೆದಿದ್ದು, 670 ಲಕ್ಷ ಟನ್ ಕಬ್ಬು ಬೆಳೆ ನಿರೀಕ್ಷಿಸಲಾಗಿದೆ. ಕಬ್ಬಿಗೆ 2009-2010ರಿಂದ ಎಫ್ಆರ್ಪಿ ನಿಗದಿ ಮಾಡಲಾಗಿದೆ. ಇದನ್ನು ಕೇಂದ್ರ ಸರ್ಕಾರವು 9.50 ಯಿಂದ 10.28 ರೂ.ಗೆ ನಿಗದಿ ಮಾಡಿದೆ. ಕಬ್ಬಿಗೆ 3,300 ರೂ. ಬೆಂಬಲ ಬೆಲೆಯನ್ನು ರಾಜ್ಯ ಸರ್ಕಾರ ನಿಗದಿ ಮಾಡಿದೆ” ಎಂದು ವಿವರಿಸಿದರು.
“ಕೇಂದ್ರ ಸರ್ಕಾರವು 2019ರಲ್ಲಿ 1 ಕೆಜಿ ಸಕ್ಕರೆಗೆ 31 ರೂ. ಎಂಎಸ್ಪಿ ನಿಗದಿ ಮಾಡಿತು. ಅಂದಿನಿಂದ ಕಳೆದ 6 ವರ್ಷಗಳಿಂದ ಎಂಎಸ್ಪಿ ಬದಲಾಗಿಲ್ಲ. 41 ರೂಗಳಿಗೆ ಹೆಚ್ಚಿಸಲು ಪ್ರಧಾನ ಮಂತ್ರಿಗಳಿಗೆ ಪತ್ರ ಬರೆಯಲಾಗಿದೆ. ಎಥನಾಲ್ ಹಂಚಿಕೆಯನ್ನು ಕೇಂದ್ರ ಸರ್ಕಾರವೇ ಮಾಡುವುದು. ರಫ್ತು ನಿಗದಿ ಮಾಡುವುದು ಕೂಡ ಕೇಂದ್ರ ಸರ್ಕಾರವೇ. ರೈತರಿಗೆ ಅನ್ಯಾಯ ಆಗಲು ಯಾರು ಕಾರಣ? ಎಫ್ಆರ್ಪಿ, ಎಂಎಸ್ಪಿ, ಎಥನಾಲ್ ರಫ್ತು ಹೆಚ್ಚು ಮಾಡಲಿ. ಅಗ, ಸ್ವಾಭಾವಿಕವಾಗಿ ಅಕ್ಕರೆ ಮತ್ತು ಕಬ್ಬಿನ ಬೆಲೆ ಹೆಚ್ಚಾಗುತ್ತದೆ” ಎಂದರು.
“ರಾಜ್ಯದ ಸರಾಸರಿ ತಲಾ ಆದಾಯ 3,39,813 ರೂ. ಇದೆ. ರಾಜ್ಯಗಳ ತಲಾ ಆದಾಯದಲ್ಲಿ ದೇಶದಲ್ಲಿಯೇ ಕರ್ನಾಟಕ ಪ್ರಥಮ ಸ್ಥಾನದಲ್ಲಿದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಫಲವಾಗಿ ತಲಾ ಆದಾಯ ಹೆಚ್ಚಾಗಿದೆ. ಆದರೆ, ಉತ್ತರ ಕರ್ನಾಟಕದ 10 ಜಿಲ್ಲೆಗಳ ತಲಾ ಆದಾಯ 2 ಲಕ್ಷ ರೂ.ಗಿಂತ ಕಡಿಮೆಯಿದೆ” ಎಂದು ತಿಳಿಸಿದರು.
“1985ರಲ್ಲಿ ನಾನು ಹೈನುಗಾರಿಕೆ ಮಂತ್ರಿಯಾಗಿದ್ದೆ. ಅಂದಿನಿಂದಲೂ ಉತ್ತರ ಕರ್ನಾಟಕ ಭಾಗದಲ್ಲಿ ಹೈನುಗಾರಿಕೆಗೆ ಆಸಕ್ತಿ ಕಡಿಮೆಯಿದೆ. ಬೆಂಗಳೂರು ಸಹಕಾರಿ ಹಾಲು ಒಕ್ಕೂಟದಲ್ಲಿ ದಿನ ಒಂದಕ್ಕೆ 17 ಲಕ್ಷ ಲೀಟರ್ ಹಾಲು ಶೇಖರಣೆಯಾಗುತ್ತದೆ. ಆದರೆ, ಕಲಬುರ್ಗಿ, ಯಾದಗಿರಿ, ಬೀದರ್, ರಾಯಚೂರು ಸಹಕಾರಿ ಹಾಲು ಒಕ್ಕೂಟದಲ್ಲಿ ದಿನ ಒಂದಕ್ಕೆ ಕೇವಲ 67 ಸಾವಿರ ಲೀಟರ್ ಹಾಲು ಶೇಖರಣೆಯಾಗುತ್ತದೆ. ರಾಜ್ಯದ ಎಲ್ಲ ಸಹಕಾರಿ ಒಕ್ಕೂಟಗಳಲ್ಲಿ ದಿನ ಒಂದಕ್ಕೆ 1 ಕೋಟಿ ಲೀಟರ್ ಹಾಲು ಸಂಗ್ರಹಣೆಯಾದರೆ, ಇದರಲ್ಲಿ ಉತ್ತರ ಕರ್ನಾಟಕ ಭಾಗದ ಸಹಕಾರಿ ಹಾಲು ಒಕ್ಕೂಟಗಳಲ್ಲಿ ಕೇವಲ 10 ಲಕ್ಷ ಲೀಟರ್ ಮಾತ್ರ. ಹೈನುಗಾರಿಕೆ ಆದಾಯದ ಉತ್ತಮ ಮೂಲವಾಗಿದೆ. ರಾಜ್ಯ ಸರ್ಕಾರವು ಇದಕ್ಕೆ ಪ್ರೋತ್ಸಾಹ ನಿಡುತ್ತಿದ್ದು, ರೈತರಿಗೆ ಪ್ರತಿ ಲೀಟರ್ಗೆ ಪ್ರೋತ್ಸಾಹಧನವನ್ನು7 ರೂ.ಗೆ ಹೆಚ್ಚಿಸುತ್ತಿದ್ದೇವೆ” ಎಂದು ವಿವರಿದ್ದಾರೆ.
“ಹೈದರಾಬಾದ್ ಕರ್ನಾಟಕ ಪ್ರದೇಶದ ಅಭಿವೃದ್ಧಿಗಾಗಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್ಡಿಬಿ) ಕಾರ್ಯನಿರ್ವಹಿಸುತ್ತಿದೆ. ಮಂಡಳಿಗೆ ಹಲವು ಸಂದರ್ಭಗಳಲ್ಲಿ 24,778 ಕೋಟಿ ರೂ. ಅನುದಾನ ನೀಡಲಾಗಿದೆ. ಜೊತೆಗೆ, ಹೈದರಾಬಾದ್ ಕರ್ನಾಟಕ ಭಾಗದ ಎ ಹಾಗೂ ಬಿ ಗ್ರೂಪ್ ಹುದ್ದೆಗಳಲ್ಲಿ 75%, ಸಿ ಗ್ರೂಪ್ ಹುದ್ದೆಗಳಲ್ಲಿ 80% ಹಾಗೂ ಡಿ ಗ್ರೂಪ್ ಹುದ್ದೆಗಳಲ್ಲಿ 85% ಹಾಗೂ ರಾಜ್ಯದ ಇತರೆ ಭಾಗಗಳಲ್ಲಿ 8%ರಷ್ಟು ಉದ್ಯೋಗ ಮತ್ತು ಶಿಕ್ಷಣ ಮೀಸಲಾತಿ ನೀಡಲಾಗಿದೆ. ಇದರಿಂದ, ಸುಮಾರು 51,606 ವಿದ್ಯಾರ್ಥಿಗಳಿಗೆ ಲಾಭವಾಗಿದೆ” ಎಂದರು.
“ಡಾ. ನಂಜುಡಪ್ಪ ವರದಿಯ ಅನುಷ್ಠಾನದ ಕುರಿತು ಅಧ್ಯಯನ ನಡೆಸಲು ಆರ್ಥಿಕ ತಜ್ಞ ಗೋವಿಂದರಾವ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ. ಈ ಸಮಿತಿ ಬರುವ ಜನವರಿಯಲ್ಲಿ ತನ್ನ ವರದಿ ನೀಡಲಿದೆ. ಈಗಾಗಲೇ ಕಲ್ಯಾಣ ಕರ್ನಾಟಕ ಭಾಗದ ಶೈಕ್ಷಣಿಕ ಸ್ಥಿತಿಗತಿಗಳನ್ನು ಅಧ್ಯಯನ ಮಾಡಿ ಆರ್ಥಿಕ ತಜ್ಞೆ ಪ್ರೊ.ಛಾಯಾ ದೇವಣಗಾಂವ್ಕರ್ ಅವರ ಸಮಿತಿ 400 ಪುಟಗಳ ವರದಿ ನೀಡಿದೆ. ಈ ಎರಡು ವರದಿಗಳ ಶಿಫಾರಸ್ಸುಗಳನ್ನು ಯಥಾವತ್ತಾಗಿ ಅನುಷ್ಠಾನಗೊಳಿಸಲಾಗುವುದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು.
“ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಮಾದರಿಯಲ್ಲಿ ಕಿತ್ತೂರು ಕರ್ನಾಟಕ ಅಭಿವೃದ್ಧಿ ಮಂಡಳಿ ಸ್ಥಾಪಿಸಿ, ಪ್ರತಿ ವರ್ಷ 5000 ಕೋಟಿ ರೂ. ಅನುದಾನ ನೀಡುವಂತೆ ಶಾಸಕ ಎನ್.ಹೆಚ್.ಕೋನರೆಡ್ಡಿ ನೇತೃತ್ವದಲ್ಲಿ ಈ ಭಾಗದ ಎಲ್ಲಾ ಶಾಸಕರು ಮನವಿ ನೀಡಿದ್ದಾರೆ. ಪ್ರೊ.ಗೋವಿಂದರಾವ್ ಅವರ ವರದಿ ಬಳಿಕ ಈ ಕುರಿತು ಪರೀಶಿಲನೆ ನಡೆಸಿ ಕ್ರಮ ಕೈಗೊಳ್ಳಲಾಗುತ್ತದೆ” ಎಂದರು.




