ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ವಿಚಾರಣಗೆ ಹಾಜರಾಗುವಂತೆ ಸೂಚಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.
ಖುದ್ದು ವಿಚಾರಣೆಗೆ ಹಾಜರಾಗುವಂತೆ ಹೈಕೋರ್ಟ್ ಆದೇಶ ನೀಡಿದ ತೀರ್ಪು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ಯಡಿಯೂರಪ್ಪ ಅವರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದಂತಾಗಿದೆ.
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಿ ಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣವನ್ನು ರದ್ದುಗೊಳಿಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿತ್ತು. ಪ್ರಕರಣದ ಆರೋಪಿಗಳಾದ ಬಿ.ಎಸ್.ಯಡಿಯೂರಪ್ಪ, ವೈ.ಎಂ.ಅರುಣ, ಎಂ.ರುದ್ರೇಶ ಹಾಗೂ ಜಿ.ಮರಿಸ್ವಾಮಿ ಅವರಿಗೆ ಸಮನ್ಸ್ ಜಾರಿಗೊಳಿಸಿದ್ದ ವಿಶೇಷ ಸೆಷನ್ಸ್ ನ್ಯಾಯಾಲಯವು ಡಿಸೆಂಬರ್ 2ರಂದು ಕೋರ್ಟ್ಗೆ ಖುದ್ದು ಹಾಜರಾಗುವಂತೆ ಆದೇಶಿಸಿತ್ತು.
ಕೇಸ್ ಸಂಬಂಧ ಮಂಗಳವಾರ ವಿಚಾರಣಾಧೀನ ನ್ಯಾಯಾಲಯಕ್ಕೆ ಯಡಿಯೂರಪ್ಪ ಹಾಜರಾಗಬೇಕಿತ್ತು. ಯಡಿಯೂರಪ್ಪ ಅವರ ಮೇಲ್ಮನವಿ ಅರ್ಜಿ ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ದ್ವಿ ಸದಸ್ಯ ಪೀಠ, ಬಿಎಸ್ವೈ ವಿರುದ್ಧದ ಪ್ರಕರಣಕ್ಕೆ ತಾತ್ಕಾಲಿಕ ತಡೆ ನೀಡಿದೆ.
ಬೆಂಗಳೂರಿನ ಕೋರ್ಟ್ನಲ್ಲೂ ಬಿಎಸ್ವೈ ವಿರುದ್ಧ ಕೇಸ್ ವಿಚಾರಣೆ ನಡೆದಿತ್ತು. ಈ ವೇಳೆ ಯಡಿಯೂರಪ್ಪ ಪರ ವಕೀಲರು ಸುಪ್ರೀಂ ಕೋರ್ಟ್ ನಲ್ಲಿ ತಡೆ ಸಿಕ್ಕಿರುವುದಾಗಿ ಕೋರ್ಟ್ ಗಮನಕ್ಕೆ ಬಂದಿದ್ದಾರೆ. ತಡೆ ಸಿಕ್ಕಿದೆ ಎನ್ನುವುದಕ್ಕೆ ದಾಖಲೆ ನೀಡುವಂತೆ ಜಡ್ಜ್ ಕೇಳಿದ್ದು, ಈಗಷ್ಟೇ ಮಾಹಿತಿ ಸಿಕ್ಕಿದೆ, ದಾಖಲೆ ನೀಡುವುದಾಗಿ ಯಡಿಯೂರಪ್ಪ ಪರ ವಕೀಲರು ತಿಳಿಸಿದ್ದಾರೆ.
2024ರ ಫೆಬ್ರವರಿಯಲ್ಲಿ ಬೆಂಗಳೂರಿನ ತಮ್ಮ ನಿವಾಸದಲ್ಲಿ ನಡೆದ ಸಭೆಯ ಸಂದರ್ಭದಲ್ಲಿ ಯಡಿಯೂರಪ್ಪ ಅವರು ತಮ್ಮ 17 ವರ್ಷದ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ. ಈ ಬಗ್ಗೆ ಸಂತ್ರಸ್ತೆಯ ತಾಯಿ ದೂರು ನೀಡಿದ್ದರು.
ಸದಾಶಿವನಗರ ಪೊಲೀಸರು ಮಾರ್ಚ್ 14, 2024 ರಂದು ಪ್ರಕರಣ ದಾಖಲಿಸಿಕೊಂಡಿದ್ದರು. ನಂತರ ಹೆಚ್ಚಿನ ತನಿಖೆಗಾಗಿ ಕೇಸ್ ಅನ್ನು ಸಿಐಡಿಗೆ ವರ್ಗಾಯಿಸಲಾಗಿತು. ಸಂಸ್ಥೆಯು ಎಫ್ಐಆರ್ ಮರು ದಾಖಲಿಸಿ, ಮಾಜಿ ಸಿಎಂ ವಿರುದ್ಧ ಆರೋಪಪಟ್ಟಿ ಸಲ್ಲಿಸಿತ್ತು.





