ಜೆಡಿಎಸ್ ನಾಯಕರಾದ ಎಚ್ಡಿ ರೇವಣ್ಣ ಮತ್ತು ಅವರ ಪುತ್ರ, ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಮತ್ತು ಅಪಹರಣ ಪ್ರಕರಣಗಳಲ್ಲಿ ಕರ್ನಾಟಕ ರಾಜ್ಯವು ಹಿರಿಯ ವಕೀಲ ಪ್ರೊಫೆಸರ್ ರವಿವರ್ಮ ಕುಮಾರ್ ಅವರನ್ನು ವಿಶೇಷ ಸರ್ಕಾರಿ ಅಭಿಯೋಜಕರ (ಎಸ್ಪಿಪಿ- ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್) ಆಗಿ ನೇಮಿಸಿದೆ.
ಕುಮಾರ್ ಅವರು ಈ ಹಿಂದೆ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಹಾಗೆಯೇ ಹಿಜಾಬ್ ನಿಷೇಧ ಪ್ರಕರಣದಲ್ಲಿ ಅರ್ಜಿದಾರರ ಪರವಾಗಿ ವಾದಿಸಿದವರು ಕುಮಾರ್. 2013ರಿಂದ 2015ರವರೆಗೆ ಕರ್ನಾಟಕದ ಅಡ್ವೊಕೇಟ್ ಜನರಲ್ ಆಗಿ ಸೇವೆ ಸಲ್ಲಿಸಿದ್ದಾರೆ.
Prof Ravivarma Kumar appointed special public prosecutor in Prajwal Revanna sexual abuse case
report by @AB_Hazardous https://t.co/m0kKwkFC6D
— Bar and Bench (@barandbench) May 21, 2024
ಈ ಹಿಂದೆ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದ ಪ್ರಕರಣದ ವಿಚಾರಣೆಗೆ ಎಸ್ಪಿಪಿಯಾಗಿ ಬಿ.ಎನ್.ಜಗದೀಶ ಅವರನ್ನು ನೇಮಿಸಲಾಗಿತ್ತು. ಎನ್.ಜಗದೀಶ್ ಅವರು ಸದ್ಯ ಹಾಲಿ ಹೆಚ್ಚುವರಿ ರಾಜ್ಯ ಅಭಿಯೋಜಕರಾಗಿದ್ದಾರೆ.
ಇದನ್ನು ಓದಿದ್ದೀರಾ? ಲೈಂಗಿಕ ಹಗರಣ | ಪ್ರಜ್ವಲ್ ಪಾಸ್ಪೋರ್ಟ್ ರದ್ದು ಕೋರಿ ಕೇಂದ್ರಕ್ಕೆ ಎಸ್ಐಟಿ ಪತ್ರ
ಇನ್ನು ಲೈಂಗಿಕ ದೌರ್ಜನ್ಯ, ಅಪಹರಣ ಪ್ರಕರಣದಲ್ಲಿ ಮೇ 8ರಂದು ಎಸ್ಐಟಿಗೆ ಮೂರು ದಿನಗಳ ಕಸ್ಟಡಿಗೆ ಒಳಗಾಗಿದ್ದ ಹೆಚ್ಡಿ ರೇವಣ್ಣ ಅವರನ್ನು ಮೇ 14ರವರೆಗೆ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿತ್ತು. ಹೆಚ್ಡಿ ರೇವಣ್ಣ ವಿರುದ್ಧದ ಪ್ರಕರಣಗಳಿಗೆ ಸಂಬಂಧಿಸಿದಂತೆ ಎರಡು ಆದೇಶಗಳಲ್ಲಿ ಜಾಮೀನು ಪಡೆದಿದ್ದಾರೆ.
ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವನ್ನು ಎಸಗಿ ಅದನ್ನು ಚಿತ್ರೀಕರಿಸಿದ ಆರೋಪವನ್ನು ಪ್ರಜ್ವಲ್ ರೇವಣ್ಣ ಹೊತ್ತಿದ್ದಾರೆ. 2,900ಕ್ಕೂ ಹೆಚ್ಚು ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ಕಿರುಕುಳ ಪ್ರಕರಣಗಳು ದಾಖಲಾಗಿದೆ.
ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯದ ವಿಡಿಯೋಗಳು ವೈರಲ್ ಆಗುತ್ತಿದ್ದಂತೆ ಚುನಾವಣೆ ಮುಗಿದ ಕೂಡಲೇ ಏಪ್ರಿಲ್ 26ರಂದು ಪ್ರಜ್ವಲ್ ರೇವಣ್ಣ ಜರ್ಮನಿಗೆ ಪಲಾಯನ ಮಾಡಿದ್ದಾರೆ.
ಇದನ್ನು ಓದಿದ್ದೀರಾ? ಹಾಸನ | ಪ್ರಜ್ವಲ್ ರೇವಣ್ಣ ಬಂಧನಕ್ಕೆ ಆಗ್ರಹ; ಮೇ 30ರಂದು ಜನಪರ ಚಳವಳಿಗಳ ಒಕ್ಕೂಟದಿಂದ ಬೃಹತ್ ಪ್ರತಿಭಟನೆ
ಭಾರತೀಯ ಪೊಲೀಸ್ ಸೇವೆಯ (ಐಪಿಎಸ್) ಹಿರಿಯ ಅಧಿಕಾರಿ ಬಿಕೆ ಸಿಂಗ್ ನೇತೃತ್ವದ ಎಸ್ಐಟಿ ತಂಡವು ಈ ಪ್ರಕರಣದ ತನಿಖೆ ನಡೆಸುತ್ತಿದ್ದು, ಪರಾರಿಯಾಗಿರುವ ಪ್ರಜ್ವಲ್ ರೇವಣ್ಣ ಅವರಿಗೆ ಸಮನ್ಸ್ ನೀಡಿದೆ.
ಇನ್ನು ಲೈಂಗಿಕ ದೌರ್ಜನ್ಯ ಆರೋಪಿ ಪ್ರಜ್ವಲ್ ರೇವಣ್ಣ ಪಾಸ್ಪೋರ್ಟ್ ರದ್ದು ಮಾಡುವಂತೆ ಕೋರಿ ಕೇಂದ್ರ ವಿದೇಶಾಂಗ ವ್ಯವಹಾರ ಸಚಿವಾಲಯಕ್ಕೆ ಎಸ್ಐಟಿ ಪತ್ರ ಬರೆದಿದೆ.





