ಸರ್ಕಾರಿ ಜಾಗದಲ್ಲಿ ಆರ್ಎಸ್ಎಸ್ ಸೇರಿದಂತೆ ಖಾಸಗಿ ಸಂಘಟನೆಗಳು ಯಾವುದೇ ಚಟುವಟಿಕೆಗಳನ್ನು ನಡೆಸುವುದಾದರೆ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿದ್ದ ಸರ್ಕಾರದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ನ ಧಾರವಾಡ ಪೀಠ ಇತ್ತೀಚೆಗೆ ತಡೆ ನೀಡಿದೆ. ಈ ತಡೆಯಾಜ್ಞೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ವಿಚಾರಣೆ ನಡೆಸಿದ ವಿಭಾಗೀಯ ಪೀಠ ಆದೇಶವನ್ನು ಕಾಯ್ದಿರಿಸಿದೆ.
ಸರ್ಕಾರಿ ಜಾಗದಲ್ಲಿ ಖಾಸಗಿ ಸಂಘಟನೆಗಳು ಯಾವುದೇ ಚಟುವಟಿಕೆಗಳನ್ನು ನಡೆಸುವಾಗ ಹತ್ತು ಜನಕ್ಕಿಂತ ಹೆಚ್ಚು ಮಂದಿ ಇದ್ದರೆ ಅನುಮತಿ ಪಡೆಯುವುದನ್ನು ಸರ್ಕಾರ ಕಡ್ಡಾಯಗೊಳಿಸಿತ್ತು. ಇದನ್ನು ಪ್ರಶ್ನಿಸಿ ಹುಬ್ಬಳ್ಳಿಯ ಪುನಶ್ಚೇತನ ಸೇವಾ ಸಂಸ್ಥೆ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ಸರ್ಕಾರದ ಆದೇಶಕ್ಕೆ ತಡೆ ನೀಡಿತ್ತು. ಈ ತಡೆಯಾಜ್ಞೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಮೇಲ್ಮನವಿಯ ವಿಚಾರಣೆ ನಡೆಸಿದ ಹೈಕೋರ್ಟ್ ಧಾರವಾಡ ಪೀಠದ ನ್ಯಾಯಮೂರ್ತಿಗಳಾದ ಎಸ್ ಜಿ ಪಂಡಿತ್ ಮತ್ತು ಕೆ ಬಿ ಗೀತಾ ಅವರ ವಿಭಾಗೀಯ ಪೀಠವು ವಾದ ವಿವಾದವನ್ನು ಆಲಿಸಿ ಆದೇಶವನ್ನು ಕಾಯ್ದಿರಿಸಿದೆ.
ಇದನ್ನು ಓದಿದ್ದೀರಾ? ಸರ್ಕಾರಿ ಜಾಗದಲ್ಲಿ ಖಾಸಗಿ ಸಂಸ್ಥೆಗಳ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ ಆದೇಶಕ್ಕೆ ಹೈಕೋರ್ಟ್ ತಡೆ
ರಾಜ್ಯ ಸರ್ಕಾರವನ್ನು ಪ್ರತಿನಿಧಿಸಿದ್ದ ಅಡ್ವೊಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ, “ಸರ್ಕಾರವು ತನ್ನ ಆಸ್ತಿ ಮತ್ತು ಸಾರ್ವಜನಿಕರ ಹಕ್ಕು ರಕ್ಷಣೆಗಾಗಿ ಸಾರ್ವಜನಿಕ ಸ್ಥಳದಲ್ಲಿ ಅನುಮತಿಯಿಲ್ಲದೆ ಸಮಾವೇಶ, ಮೆರವಣಿಗೆ ನಡೆಸುದಕ್ಕೆ ತಡೆ ನೀಡಿದೆ. ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಇದು ಅಪರಾಧ ಕೃತ್ಯವಾಗಿರುವುದನ್ನು ಪರಿಗಣಿಸಿ ಸರ್ಕಾರ ಆದೇಶಿಸಿದೆ. ಆದರೆ ಏಕಸದಸ್ಯ ಪೀಠದ ಆದೇಶವು ಸರ್ಕಾರದ ಹಕ್ಕನ್ನು ಕಸಿದಿದೆ. ಅನುಮತಿ ಪಡೆಯದೆ ಖಾಸಗಿ ಸಂಸ್ಥೆಗಳು ಸರ್ಕಾರಿ ಜಾಗದಲ್ಲಿ ಏನು ಬೇಕಾದರೂ ಮಾಡಲು ಬಿಡುವುದು ಸರಿಯಲ್ಲ” ಎಂದು ವಾದಿಸಿದ್ದಾರೆ.
“ರಸ್ತೆಯಲ್ಲಿ ಮೆರವಣಿಗೆ ಮಾಡಲು ಅನುಮತಿ ಪಡೆಯವುದು ಕಡ್ಡಾಯ. ಉದ್ಯಾನ, ಆಟದ ಮೈದಾನ ಬಗ್ಗೆ ಬೇರೆಯೇ ವ್ಯಾಖ್ಯಾನವಿದೆ. ಇಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡದು. ರಸ್ತೆಯಲ್ಲಿ ಮೆರವಣಿಗೆ ಮಾಡುವಾಗ ಜನರಿಗೆ ಓಡಾಡಲು ಸಮಸ್ಯೆಯಾಗುತ್ತದೆ. ಈ ನಿಟ್ಟಿನಲ್ಲಿ ಅನುಮತಿ ಕಡ್ಡಾಯಗೊಳಿಸಿ ಆದೇಶಿಸಲಾಗಿದೆ. ಇದರಲ್ಲಿ ತಪ್ಪೇನಿದೆ” ಎಂದು ಸರ್ಕಾರದ ಪರ ವಕೀಲರು ಪ್ರಶ್ನಿಸಿದ್ದಾರೆ.
ಈ ವೇಳೆ “ಮಧ್ಯಂತರ ಆದೇಶ ತೆರವು ಮಾಡುವಂತೆ ಕೋರಿ ಏಕಸದಸ್ಯ ಪೀಠದ ಮುಂದೆ ಮೆಮೊ ಸಲ್ಲಿಸಬಹುದಲ್ಲವೇ” ಎಂದು ಪೀಠ ಪ್ರಶ್ನಿಸಿದ್ದು, “ಏಕಸದಸ್ಯ ಪೀಠ ಮಧ್ಯಂತರ ಆದೇಶದ ಬದಲಾಗಿ ತಡೆಯಾಜ್ಞೆಯನ್ನು ನೀಡಿದೆ. ಹೀಗಾಗಿ ನಾವು ಮುಂದಿನ ನ್ಯಾಯಾಲಯಕ್ಕೆ ಹೋಗಬೇಕಾಯಿತು” ಎಂದು ಅಡ್ವೊಕೇಟ್ ಜನರಲ್ ಕೆ ಶಶಿಕಿರಣ್ ಶೆಟ್ಟಿ ತಿಳಿಸಿದ್ದಾರೆ.
ಸರ್ಕಾರಿ ಜಾಗದಲ್ಲಿ ಆರ್ಎಸ್ಎಸ್ ಸೇರಿ ಯಾವುದೇ ಖಾಸಗಿ ಸಂಘಟನೆಗಳು ಚಟುವಟಿಕೆ ನಡೆಸಬಾರದು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಅದಾದ ಬಳಿಕ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರುಗಳು ನಡುವೆ ತೀವ್ರ ವಾಗ್ವಾದವೂ ನಡೆದಿತ್ತು. ಈ ನಡುವೆ ಖರ್ಗೆ ಅವರಿಗೆ ಬೆದರಿಕೆ ಕರೆಗಳೂ ಬಂದಿತ್ತು. ಈ ಬೆಳವಣಿಗೆ ನಡುವೆ ಸರ್ಕಾರ ಅನುಮತಿ ಕಡ್ಡಾಯ ಆದೇಶ ಹೊರಡಿಸಿತ್ತು.





