ಕಳೆದ 15 ದಿನಗಳಿಂದ ರಾಜ್ಯಾದ್ಯಂತ ಸರಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದು, ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿರುವುದು ಸರಕಾರದ ಗಮನಕ್ಕಿದೆ. ಶೀಘ್ರವೇ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂಸಿ ಸುಧಾಕರ್ ಭರವಸೆ ನೀಡಿದರು.
ಬೆಳಗಾವಿಯಲ್ಲಿ ಬುಧವಾರ ನಡೆದ ವಿಧಾನ ಪರಿಷತ್ ಕಲಾಪದ ಶೂನ್ಯವೇಳೆಯಲ್ಲಿ ವಿಪಕ್ಷ ಸದಸ್ಯ ಚಿದಾನಂದ ಅವರು ಅತಿಥಿ ಉಪನ್ಯಾಸಕರ ಹೋರಾಟ ಮತ್ತು ವಿದ್ಯಾರ್ಥಿಗಳ ಸಮಸ್ಯೆ ಕುರಿತು ಸಚಿವರ ಗಮನಕ್ಕೆ ತಂದರು.
“ಬೇರೆ ಬೇರೆ ರಾಜ್ಯಗಳಲ್ಲಿ ಅತಿಥಿ ಉಪನ್ಯಾಸಕರನ್ನು ಕಾಯಂ ಮಾಡಿಕೊಂಡಿರುವ ಮಾದರಿಯನ್ನು ಅನುಸರಿಸಬೇಕು. ಈ ವಿಷಯದಲ್ಲಿ ಪ್ರತಿ ಸಲವೂ ಉಮಾದೇವಿ ಪ್ರಕರಣವನ್ನು ಮುಂದಿಟ್ಟುಕೊಂಡು ಅತಿಥಿ ಉಪನ್ಯಾಸಕರಿಗೆ ಆಗುವ ಅನ್ಯಾಯ ನಿಲ್ಲಬೇಕಾದರೆ ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಬೇಕು. ಯುಜಿಸಿ ನಿಗದಿಯಂತೆ ವೇತನ ಪರಿಷ್ಕರಣೆ ಮಾಡಿ, ಅತಿಥಿ ಉಪನ್ಯಾಸಕರಿಗೆ ಸೇವಾಭದ್ರತೆ ಒದಗಿಸಬೇಕು” ಎಂದು ಚಿದಾನಂದ ಅವರು ಸಲಹೆ ನೀಡಿದರು.
“ಅತಿಥಿ ಉಪನ್ಯಾಸಕರ ಸಮಸ್ಯೆ ನಮ್ಮ ಸರಕಾರ ಅಸ್ತಿತ್ವಕ್ಕೆ ಬಂದಾಗ ಉದ್ಭವಿಸಿದ್ದಲ್ಲ. ಸುಮಾರು 20 ವರ್ಷಗಳಿಂದ ಜೀವಂತವಾಗಿರುವ ಬೇಡಿಕೆ. ಈಗಾಗಲೇ ಪ್ರತಿಭಟನಾನಿರತ ಅತಿಥಿ ಉಪನ್ಯಾಸಕರೊಂದಿಗೆ ಮಾತನಾಡಿ, ಹೋರಾಟ ಕೈ ಬಿಡುವಂತೆ ಮನವೊಲಿಸುವ ಪ್ರಯತ್ನ ವಿಫಲವಾಗಿದೆ. ಈ ಬಗ್ಗೆ ಸಿಎಂ ಜೊತೆ ಮಾತನಾಡಿದ್ದು, ಪರಿಹಾರ ಕಂಡುಕೊಂಡಿದ್ದೇವೆ. ಅದಕ್ಕೆ ಕೊಂಚ ಕಾಲಾವಕಾಶದ ಅಗತ್ಯವಿದೆ. ಶೀಘ್ರವೇ ಈ ಸಮಸ್ಯೆಯನ್ನು ಬಗೆಹರಿಸುತ್ತೇವೆ” ಎಂದು ಸಚಿವರು ಸದನದಲ್ಲಿ ತಿಳಿಸಿದರು.





