ರಾಜ್ಯ ಸರಕಾರ ವಿವಿಧ ಇಲಾಖೆಗಳಿಂದ ಗುತ್ತಿಗೆದಾರರಿಗೆ ಬರಬೇಕಾದ ಬಾಕಿ ಮೊತ್ತ 37,370 ಕೋಟಿ ರೂ.ಗಳನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ರಾಜ್ಯ ಗುತ್ತಿಗೆದಾರರ ಸಂಘ ಒತ್ತಾಯಿಸಿದೆ.
ಶುಕ್ರವಾರ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ರಾಜ್ಯ ಗುತ್ತಿಗೆ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಈ ಪ್ರತಿಭಟನೆಯಲ್ಲಿ ಅಧ್ಯಕ್ಷ ಆರ್.ಮಂಜುನಾಥ್ ಮಾತನಾಡಿ, “ಲೋಕೋಪಯೋಗಿ ಇಲಾಖೆ, ಜಲಸಂಪನ್ಮೂಲ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಸಣ್ಣ ನೀರಾವರಿ, ನಗರಾಭಿವೃದ್ಧಿ, ವಸತಿ, ಕಾರ್ಮಿಕ, ಬಿಬಿಎಂಪಿ (ಜಿಬಿಎ) ನಲ್ಲಿ 2021-22, 2022-23, 2023-24 ರಿಂದ 37 ಸಾವಿರ ಕೋಟಿ ರೂ.ಗೂ ಹೆಚ್ಚು ಹಣ ಬಾಕಿ ಉಳಿದಿದೆ” ಎಂದು ಆರೋಪಿಸಿದರು.
‘ಇದರಿಂದ ರಾಜ್ಯಾದ್ಯಂತ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳಿಗೂ ವ್ಯತ್ಯಯ ಉಂಟಾಗಿದೆ. ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಗುತ್ತಿಗೆದಾರರಿಗೆ ಯಾವುದೇ ವಿಶೇಷ ಅನುಕೂಲವಾಗಿಲ್ಲ. ಹಿಂದಿನ ಸರ್ಕಾರಕ್ಕಿಂತಲೂ ಕೆಲ ಇಲಾಖೆಗಳಲ್ಲಿನ ಕಮಿಷನ್ ಪ್ರಮಾಣ ಹೆಚ್ಚಾಗಿದೆ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
‘ಟೆಂಡರ್ಗಳನ್ನು ಪ್ಯಾಕೇಜ್ ರೂಪದಲ್ಲಿ ನೀಡುವುದರಿಂದ ಸಣ್ಣ ಮತ್ತು ಮಧ್ಯಮ ವರ್ಗದ ಗುತ್ತಿಗೆದಾರರಿಗೆ ಅನಾನುಕೂಲವಾಗುತ್ತಿದೆ. ಕೆಲವು ಇಲಾಖೆಗಳು ಟೆಂಡರ್ ಪ್ರಕ್ರಿಯೆಯಲ್ಲಿ ಬಲಿಷ್ಠ ಗುತ್ತಿಗೆದಾರರಿಗೆ ಅನುಕೂಲವಾಗುವ ರೀತಿಯಲ್ಲಿ ಕ್ರಮ ಕೈಗೊಳ್ಳುತ್ತಿವೆ’ ಎಂದು ಆರೋಪಿಸಿದರು.
“ಪ್ರಮುಖ ಹಬ್ಬಗಳಾದ ಗೌರಿ ಗಣೇಶ, ದಸರಾ ಮತ್ತು ದೀಪಾವಳಿ ಸಮಯದಲ್ಲಿ ಗುತ್ತಿಗೆದಾರರಿಗೆ ಯಾವುದೇ ಸರಕಾರವಾದರೂ ಬಾಕಿ ಹಣವನ್ನು ಬಿಡುಗಡೆ ಮಾಡುವ ಪರಿಪಾಠವನ್ನು ಬೆಳೆಸಿಕೊಂಡು ಬಂದಿರುತ್ತದೆ. ಆದರೆ ಇದುವರೆಗೂ ಕಾಂಗ್ರೆಸ್ ಸರ್ಕಾರದ ಕಡೆಯಿಂದ ಬಿಡುಗಡೆ ಆಗಿಲ್ಲ. ಮೂರು ವರ್ಷದಿಂದ ಬಿಲ್ ಪಾವತಿಯಾಗದ್ದರಿಂದ ಗುತ್ತಿಗೆದಾರರು ಆರ್ಥಿಕ ಸಂಕಷ್ಟದಲ್ಲಿದ್ದು, ಸಾಲ ಪಾವತಿಸಲಾಗದೆ ವಿಷ ಕುಡಿಯುವ ಸ್ಥಿತಿಗೆ ತಲುಪಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಸರಕಾರ ಮೊತ್ತವನ್ನು ಒಂದೇ ಬಾರಿಯಲ್ಲದಿದ್ದರೂ ಹಂತಹಂತವಾಗಿ ಹಣ ಬಿಡುಗಡೆ ಮಾಡಬೇಕಿತ್ತು. ಆದರೆ ಗುತ್ತಿಗೆದಾರರನ್ನು ನಿರ್ಲಕ್ಷಿಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ 2025ರ ಎಪ್ರಿಲ್ನಲ್ಲಿ ಹಣ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿದ್ದರು, ಇದುವರೆಗೂ ಹಣ ಬಿಡುಗಡೆ ಮಾಡಿಲ್ಲ. ಅಷ್ಟೇ ಅಲ್ಲದೇ ನಮ್ಮ ಸಮಸ್ಯೆ ಆಲಿಸಲು ಸಭೆಯನ್ನೂ ಕರೆದಿಲ್ಲ” ಎಂದು ಮಂಜುನಾಥ್ ದೂರಿದರು.
ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ, ಹಂತ ಹಂತವಾಗಿ ಹಣ ಬಿಡುಗಡೆ ಮಾಡುವ ಭರವಸೆ ಕೊಟ್ಟಿದ್ದಾರೆ. ಈ ಸಂದರ್ಭದಲ್ಲಿಯೂ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಲೋಕೋಪಯೋಗಿ ಇಲಾಖೆ 8,370.75 ಕೋಟಿ ರೂ., ಜಲಸಂಪನ್ಮೂಲ ಇಲಾಖೆ 13 ಸಾವಿರ ಕೋಟಿ ರೂ., ಆರ್ಡಿಪಿಆರ್ 3,800 ಕೋಟಿ ರೂ., ಸಣ್ಣ ನೀರಾವರಿ ಇಲಾಖೆ 3 ಸಾವಿರ ಕೋಟಿ ರೂ., ನಗರಾಭಿವೃದ್ಧಿ ಇಲಾಖೆ 2 ಸಾವಿರ ಕೋಟಿ ರೂ., ವಸತಿ ಮತ್ತು ವಕ್ಫ್ 2,600 ಕೋಟಿ ರೂ., ಕಾರ್ಮಿಕ ಇಲಾಖೆ 2 ಸಾವಿರ ಕೋಟಿ ರೂ., ಬಿಬಿಎಂಪಿ 2600 ಕೋಟಿ ರೂ. ಹಣವನ್ನು ಗುತ್ತಿಗೆದಾರರಿಗೆ ಕೊಡದೆ ಬಾಕಿ ಉಳಿಸಿಕೊಂಡಿವೆ.
ಪ್ರತಿಭಟನೆಯಲ್ಲಿ ಸಂಘದ ಪದಾಧಿಕಾರಿಗಳಾದ ಜಿ.ಎಂ.ನಂದಕುಮಾರ್, ಜಗನ್ನಾಥ್, ವಿ.ಕೃಷ್ಣಾರೆಡ್ಡಿ, ಎಂ.ಎಸ್.ಸಂಕಾಗೌಡಶಾನಿ, ಕೆ.ರಾಧಾಕೃಷ್ಣ, ಸುರೇಶ್ ಎಸ್, ಬಿ.ಸಿ.ದಿನೇಶ್, ಎನ್.ಮಂಜುನಾಥ್, ಕಾರ್ಲೆ ಇಂದ್ರೇಶ್, ಎಂ.ರಮೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.





