ಭಾರತಿ ವಿಷ್ಣುವರ್ಧನ್ ಅವರು ತಮ್ಮ ಅಳಿಯ ಅನಿರುದ್ಧ ಜೊತೆ ಬುಧವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.
ಅಭಿಮಾನಿಗಳಿಗಾಗಿ ಅಭಿಮಾನ್ ಸ್ಟುಡಿಯೋದಲ್ಲಿ ಸ್ಮಾರಕ ನಿರ್ಮಾಣ ಮಾಡಿ ಗೌರವ ಸೂಚಿಸುವುದಕ್ಕೆ 10 ಗುಂಟೆ ಜಾಗವನ್ನು ನೀಡಬೇಕಾಗಿ ಮತ್ತು ಮರಣೋತ್ತರವಾಗಿ ಕರ್ನಾಟಕ ರತ್ನ ಗೌರವ ನೀಡಬೇಕೆಂದು ಇದೇ ವೇಳೆ ಮನವಿ ಮಾಡಿದ್ದಾರೆ.
“ಪ್ರಮುಖವಾಗಿ ಮೈಸೂರು ನಗರದಲ್ಲಿ ಡಾ. ವಿಷ್ಣುವರ್ಧನ್ ಅವರ ಸ್ಮಾರಕವನ್ನು ನಿರ್ಮಿಸಿ ಕನ್ನಡದ ಹೃದಯದಲ್ಲಿ ವಿಷ್ಣುವರ್ಧನ್ ಅವರ ನೆನಪನ್ನು ಶಾಶ್ವತವಾಗಿ ಉಳಿಸಿರುವ ಕರ್ನಾಟಕ ಸರ್ಕಾರಕ್ಕೆ, ಹೃತ್ಪೂರ್ವಕ ಧನ್ಯವಾದಗಳನ್ನು ಸಲ್ಲಿಸುತ್ತೇವೆ. ಇದು ಲಕ್ಷಾಂತರ ಅಭಿಮಾನಿಗಳ ಹೆಮ್ಮೆಯ ವಿಷಯವಾಗಿದೆ. ಆದರೆ, ಬೆಂಗಳೂರು ನಗರದಲ್ಲಿಯೂ ಸ್ಮಾರಕದ ಅಗತ್ಯವಿದೆ ಎಂಬ ಅಭಿಮಾನಿಗಳ ದೀರ್ಘಕಾಲದ ಬೇಡಿಕೆಯನ್ನು ನಿಮ್ಮ ಗಮನಕ್ಕೆ ತರಲು ಬಯಸುತ್ತೇವೆ” ಎಂದಿದ್ದಾರೆ.
“ಡಾ.ವಿಷ್ಣುವರ್ಧನ್ ಅವರು ಬದುಕನ್ನು ರೂಪಿಸಿಕೊಂಡಿದ್ದೇ ಬೆಂಗಳೂರಿನಲ್ಲಿ. ಈ ಸ್ಥಳವು ಅಭಿಮಾನಿಗಳಿಗೆ ಅತ್ಯಂತ ಭಾವನಾತ್ಮಕ ನೆನಪಿನ ಸ್ಥಳವೂ ಆಗಿದೆ. ಏಕೆಂದರೆ, ಇಲ್ಲಿಯೇ ಡಾ.ವಿಷ್ಣುವರ್ಧನ್ ಅವರ ಅಂತ್ಯಕ್ರಿಯೆ ನೇರವೇರಿದ್ದು. ಲಕ್ಷಾಂತರ ಅಭಿಮಾನಿಗಳು ಆಗಮಿಸಿ ತಮ್ಮ ಪ್ರೀತಿಯ ಕಲಾವಿದನಿಗೆ ಕಂಬನಿ ಮಿಡಿದಿದ್ದರು. ಅಭಿಮಾನ್ ಸ್ಟುಡಿಯೋ ಅರಣ್ಯ ಇಲಾಖೆಗೆ ಸೇರಿದ ಜಾಗ ಎಂದು ಸರ್ಕಾರ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ನಾವು ಮನವಿ ಮಾಡಿಕೊಳ್ಳುವುದು ಏನೆಂದರೆ, ಅಭಿಮಾನ್ ಸ್ಟುಡಿಯೋ ವ್ಯಾಪ್ತಿಯಲ್ಲಿ ಕನಿಷ್ಠ 10 ಗುಂಟೆ ಜಾಗವನ್ನು ಮೀಸಲಿಟ್ಟು- ಡಾ.ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣಕ್ಕೆ ಸರ್ಕಾರದಿಂದ ಅನುಮತಿ ನೀಡಬೇಕೆಂದು ಕೋರುತ್ತೇವೆ. ಇದರಿಂದ ಅಭಿಮಾನಿಗಳ ಭಾವನೆಗಳಿಗೆ ನ್ಯಾಯವನ್ನು ದೊರಕಿಸುವ ಜತೆಗೆ- ಒಂದು ಶಾಶ್ವತ ಸಾಂಸ್ಕೃತಿಕ ಸ್ಮಾರಕವಾಗಿ ಉಳಿದು ಮುಂದಿನ ಪೀಳಿಗೆಗೆ ಪ್ರೇರಣೆ ನೀಡುತ್ತದೆ” ಎಂದು ಸಿ.ಎಂ. ಸಿದ್ಧರಾಮಯ್ಯಗೆ ಸಲ್ಲಿಸಿದ ಪತ್ರದಲ್ಲಿ ಭಾರತಿ ವಿಷ್ಣುವರ್ಧನ್ ತಿಳಿಸಿದ್ದಾರೆ.
ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿದ್ದ ಸಾಹಸಸಿಂಹ ಡಾ. ವಿಷ್ಣುವರ್ಧನ್ ಸಮಾಧಿಯನ್ನು ಇತ್ತೀಚೆಗೆ ಕೆಡವಿ ಹಾಕಿ ಭಾರೀ ವಿವಾದ ಉಂಟಾಗಿತ್ತು. ಈ ಸಂಬಂಧ ವಿಷ್ಣು ಅಭಿಮಾನಿಗಳು ಹಾಗೂ ಹಿರಿಯ ನಟ ದಿವಂಗತ ಬಾಲಕೃಷ್ಣ ಅವರ ಕುಟುಂಬಕ್ಕೂ ಜಟಾಪಟಿ ನಡೆಯುತ್ತಲೇ ಇತ್ತು. ಈ ಪ್ರಕರಣ ಕೋರ್ಟ್ ಮೆಟ್ಟಿಲೇರಿ ಇತ್ತೀಚೆಗೆ ಕೋರ್ಟ್ ಅನುಮತಿಯ ಮೇರೆಗೆ ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿದ್ದ ವಿಷ್ಣು ಸ್ಮಾರಕವನ್ನು ಉರುಳಿಸಲಾಗಿತ್ತು.
ಸೆಪ್ಟೆಂಬರ್ 18ರಂದು ವಿಷ್ಣುವರ್ಧನ್ ಅವರ 75ನೇ ವರ್ಷದ ಹುಟ್ಟುಹಬ್ಬವಿದೆ. ಅಭಿಮಾನಿಗಳು ಸಂಭ್ರಮದಿಂದ ಆಚರಿಸಲು ಮುಂದಾಗಿದ್ದಾರೆ. ನಿನ್ನೆ ಕನ್ನಡ ಚಿತ್ರರಂಗದ ಹಿರಿಯ ನಟಿಯರಾದ ಜಯಮಾಲ, ಶ್ರುತಿ ಮತ್ತು ಮಾಳವಿಕ ಅವಿನಾಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಡಾ. ವಿಷ್ಣುವರ್ಧನ್ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವಂತೆ ಒತ್ತಾಯಿಸಿದ್ದರು.





