ಸಾವಿರಾರು ಮರಗಳನ್ನು ನೆಟ್ಟು ‘ವೃಕ್ಷಮಾತೆ’ ಎಂದೇ ಹೆಸರುವಾಸಿಯಾಗಿರುವ ಪರಿಸರವಾದಿ, ಪದ್ಮಶ್ರೀ ಪುರಸ್ಕೃತ ಶತಾಯುಷಿ ಸಾಲುಮರದ ತಿಮ್ಮಕ್ಕ ನಿಧನರಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದ ಸಾಲುಮರದ ತಿಮ್ಮಕ್ಕ ಅವರು ಜಯನಗರ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನರಾಗಿದ್ದಾರೆ.
ಇದನ್ನು ಓದಿದ್ದೀರಾ? ಸಾಲು ಮರದ ತಿಮ್ಮಕ್ಕ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ಮುಂದುವರಿಸಿ ಸಿಎಂ ಆದೇಶ
ಮರಗಳನ್ನೇ ತಮ್ಮ ಮಕ್ಕಳೆಂದು ತಮ್ಮ ಪತಿಯೊಂದಿಗೆ ರಾಮನಗರ ಜಿಲ್ಲೆಯ ಹುಲಿಕಲ್ ಮತ್ತು ಕುದೂರು ನಡುವೆ 4.5 ಕಿಲೋಮೀಟರ್ ಹೆದ್ದಾರಿಯ ಉದ್ದಕ್ಕೂ 385 ಆಲದ ಮರಗಳನ್ನು ನೆಟ್ಟು ಬೆಳೆಸಿದ ತಿಮ್ಮಕ್ಕ ಅವರು ಈವರೆಗೆ 8,000ಕ್ಕೂ ಹೆಚ್ಚು ಮರಗಳನ್ನು ನೆಟ್ಟು ಬೆಳೆಸಿದ್ದಾರೆ.
ನಿಸ್ವಾರ್ಥ ಸೇವೆಯನ್ನು ಗುರುತಿಸಿ ಸರ್ಕಾರ ಸಾಲುಮರದ ತಿಮ್ಮಕ್ಕ ಅವರಿಗೆ 2019ರಲ್ಲಿ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ. ಜತೆಗೆ ರಾಷ್ಟ್ರೀಯ ಪೌರ ಪ್ರಶಸ್ತಿ, ಇಂದಿರಾ ಪ್ರಿಯದರ್ಶಿನಿ ವೃಕ್ಷ ಮಿತ್ರ ಪ್ರಶಸ್ತಿ, ಮತ್ತು ಕರ್ನಾಟಕ ಕಲ್ಪವಲ್ಲಿ ಪ್ರಶಸ್ತಿಗಳೂ ತಿಮ್ಮಕ್ಕ ಅವರಿಗೆ ಲಭಿಸಿದೆ.
ಇನ್ನು ಪರಿಸರಕ್ಕೆ ತಿಮ್ಮಕ್ಕ ನೀಡಿದ ಕೊಡುಗೆಯನ್ನು ಗಮನಿಸಿ ಅಮೆರಿಕಾದಲ್ಲಿರುವ ಪರಿಸರ ಶಿಕ್ಷಣ ಸಂಬಂಧಿತ ಸಂಸ್ಥೆಯೊಂದಕ್ಕೆ ತಿಮ್ಮಕ್ಕ ಹೆಸರನ್ನು ಇಡಲಾಗಿದೆ. ಪ್ರಸ್ತುತ ತಿಮ್ಮಕ್ಕ ನೆಟ್ಟಿರುವ ಮರಗಳನ್ನು ನಿರ್ವಹಣೆಯನ್ನು ಸರ್ಕಾರ ವಹಿಸಿಕೊಂಡಿದೆ.





